ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ

KannadaprabhaNewsNetwork |  
Published : May 09, 2026, 03:00 AM IST
ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಬೇಕು: ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ | Kannada Prabha

ಸಾರಾಂಶ

ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಗರ್ಭಿಣಿಯರ ಆರೈಕೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಗರ್ಭಿಣಿಯರ ಆರೈಕೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗರ್ಭಿಣಿಯರ ಆರೋಗ್ಯ ತಪಾಸಣೆಯನ್ನು 12 ರಿಂದ 14 ಬಾರಿ ನಿಯಮಿತವಾಗಿ ಕೈಗೊಳ್ಳಬೇಕು. ಅನಿಮಿಯಾ, ಅಧಿಕ ರಕ್ತದೊತ್ತಡ, ಮಾನಸಿಕ ಆರೋಗ್ಯ ಮತ್ತು ವಿವಿಧ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿ ಗುರುತಿಸಿ ಉಚಿತ ಆರೋಗ್ಯ ಚಿಕಿತ್ಸೆಯನ್ನು ಒದಗಿಸಬೇಕು ಎಂದರು.

ಜಿಲ್ಲೆಯಲ್ಲಿ ತಾಯಿ-ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಆರ್.ಸಿ.ಎಚ್ ತಂತ್ರಾಂಶದಲ್ಲಿ ಗರ್ಭಿಣಿಯರಿಗೆ ಕಾಲ-ಕಾಲಕ್ಕೆ ಆರೋಗ್ಯದ ಕುರಿತು ತಿಳಿವಳಿಕೆ ನೀಡುವಂತೆ ಸೂಚನೆ ನೀಡಿದರು. ಹೆರಿಗೆಯ ನಂತರ ಮಗುವಿಗೆ ಒಂದು ವರ್ಷ ತುಂಬುವ ವರೆಗೆ ಪಡೆದುಕೊಳ್ಳಬೇಕಾದ ಚಿಕಿತ್ಸೆ, ಔಷಧೋಪಚಾರ, ಲಸಿಕೆ ಸೌಲಭ್ಯಗಳ ಮಾಹಿತಿಯನ್ನು ಒದಗಿಸಬೇಕು. ಜೊತೆಗೆ ಆರೋಗ್ಯ ಸೇವಾ ಸೌಲಭ್ಯಗಳ ಮಾಹಿತಿ ನೀಡಬೇಕೆಂದು ಸೂಚಿಸಿದರು. ಗರ್ಭಿಣಿಯರ ಅಗತ್ಯ ಮಾಹಿತಿಯನ್ನು ನಿಯಮಿತವಾಗಿ ನೋಂದಣಿ ಮಾಡಬೇಕು. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ, ಗಂಡಾಂತರ ಗರ್ಭಿಣಿಯರು ಕಂಡುಬಂದರೆ ಅಂತಹವರಿಗೆ ಸಕಾಲದಲ್ಲಿ ಆರೋಗ್ಯ ಸೇವೆ ನೀಡಬೇಕು. ಯಾವುದೇ ಕಾರಣಕ್ಕೆ ಗರ್ಭಿಣಿ ಹಾಗೂ ಮಕ್ಕಳನ್ನು ನಿರ್ಲಕ್ಷಿಸಬಾರದು ಎಂದರು. ಕುಟುಂಬ ಕಲ್ಯಾಣ ಯೋಜನೆಯ ಬಗ್ಗೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಹಾಗೂ ಸಮುದಾಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯವರಿಗೆ ತಾಲೂಕು ಮಟ್ಟದಲ್ಲಿ ತರಬೇತಿಯನ್ನು ನೀಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳು ಸೇರಿದಂತೆ ಎಲ್ಲ ವೈದ್ಯರಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಗರ್ಭಿಣಿಯರು, ಅನಾರೋಗ್ಯ ಪೀಡಿತರು ಮತ್ತು ಬಹಳ ಸಮಯದಿಂದ ಔಷಧಿ ಸೇವಿಸುತ್ತಿರುವವರು ಬಿಸಿಲಿನಲ್ಲಿ ಹೆಚ್ಚು ಪರಿಶ್ರಮ ಮಾಡುವುದನ್ನು ತಪ್ಪಿಸಬೇಕು. ಬಿಸಿಗಾಳಿಯ ಸಂದರ್ಭದಲ್ಲಿ ದೇಹದ ನೀರಿನಾಂಶ ಕಡಿಮೆಯಾದಲ್ಲಿ ಸೂರ್ಯಘಾತ ಆಗುವ ಸಾಧ್ಯತೆಯು ಅಧಿಕವಾಗಿರುತ್ತದೆ. ಆದ್ದರಿಂದ ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಕೆಲಸಗಳನ್ನು ಮಾಡಬೇಡಿ. ಹೆಚ್ಚು ನೀರನ್ನು ಕುಡಿಯಿರಿ. ಹೆಚ್ಚು ಸಕ್ಕರೆಯುಕ್ತ ಪಾನೀಯಗಳು, ಕಾಬೋಮೇಟೆಡ್ ಪಾನೀಯಗಳನ್ನು ಕುಡಿಯಬೇಡಿ. ಇದರಿಂದ ನಿರ್ಜಲೀಕರಣ ಉಂಟಾಗುತ್ತದೆ ಎಂಬುದಾಗಿ ತಿಳಿವಳಿಕೆ ನೀಡಬೇಕು. ತಿಳಿ ಬಣ್ಣದ ಬಟ್ಟೆಯನ್ನು ಧರಿಸಿರಿ, ಹೊರಾಂಗಣದಲ್ಲಿ ಕೆಲಸ ಮಾಡುವಾಗ ಆಗಾಗ್ಗೆ ವಿಶ್ರಾಂತಿ ಪಡೆಯುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ ಕಡಿಮೆ ಮಾಡುವುದಕ್ಕೆ ಗುಣಾತ್ಮಾಕ ಆರೋಗ್ಯ ಸೇವೆ, ಪ್ರಸವ ಪೂರ್ವ ಆರೈಕೆ, ಗಂಡಾಂತರ ಗರ್ಭಿಣಿ ಹೆರಿಗೆಗಳನ್ನು ಗುರುತಿಸಿ ಅವರಿಗೆ ಪ್ರಸೂತಿ ತಜ್ಞ ವೈದ್ಯರಿಂದ ಆರೈಕೆ ಹಾಗೂ ಆಪ್ತ ಸಮಾಲೋಚನೆ ಮೂಲಕ ಶೇ.100ರಷ್ಟು ಹೆರಿಗೆಗಳನ್ನು ಆರೋಗ್ಯ ಸಂಸ್ಥೆಗಳಲ್ಲಿ ಮಾಡಲಾಗುತ್ತಿದೆ. ಪ್ರತಿ ವರ್ಷ ಸಾವಿರಾರು ಜನರು ವಿಶೇಷವಾಗಿ ಮಕ್ಕಳು ನಾಯಿ ಕಡಿತಕ್ಕೆ ಒಳಗಾಗುತ್ತಾರೆ. ಸರಿಯಾದ ಅರಿವು ಮತ್ತು ಮುನ್ನಚ್ಚೆರಿಕೆಗಳೊಂದಿಗೆ ನಾಯಿ ಕಡಿತವನ್ನು ತಡೆಗಟ್ಟಬಹುದು. ಆದ್ದರಿಂದ ಎಲ್ಲ ಸಾರ್ವಜನಿಕ ಆಸ್ಪತ್ರೆಗಳಲ್ಲಿ ರ‍್ಯಾಬೀಸ್ ವ್ಯಾಕ್ಸಿನೇಷನ್ (ಲಸಿಕೆ) ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು ಮತ್ತು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಸುಸಜ್ಜಿತ ಸರಕಾರಿ ಆಸ್ಪತ್ರೆಗಳು ಹಾಗೂ ಅಲ್ಲಿ ನೀಡುವ ಗುಣಮಟ್ಟದ ಆರೋಗ್ಯ ಸೇವೆಗಳು, ಪ್ರಸವಪೂರ್ವ ಮತ್ತು ಪ್ರಸವೊತ್ತರ ಆರೈಕೆ ಮೂಲಕ ನಮ್ಮ ಜಿಲ್ಲೆಯಲ್ಲಿ ಗರ್ಭಿಣಿಯರ ಆರೋಗ್ಯದ ಸೌಲಭ್ಯಗಳ ಕುರಿತು ಸಭೆಗೆ ಮಾಹಿತಿ ನೀಡಲಾಯಿತು.ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಡಿಎಚ್‌ಇ, ಡಬ್ಲೂಎಚ್.ಓ ಅಧಿಕಾರಿ ಡಾ.ಮುಕುಂದ ಗಲಗಲಿ, ಆರ್‌.ಸಿಎಚ್‌ಒ, ಬಿ.ಎಲ್.ಡಿ.ಈ ಸಂಸ್ಥೆಯ ಪ್ರಸೂತಿ ತಜ್ಞರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಎಲ್ಲ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ಎಲ್ಲ ತಾಲೂಕು ಆರೋಗ್ಯಾಧಿಕಾರಿಗಳು, ಮುಖ್ಯ ಆಡಳಿತ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಎಸ್‌ಎಫ್‌ ಯೋಧರ ವಜಾ, ಅನ್ಯಾಯ
ಮನರೇಗಾ ಪರಿಣಾಮಕಾರಿ ಅನುಷ್ಠಾನಕ್ಕೆ ಜಾರಿಗೆ ತನ್ನಿ