ಕನ್ನಡಪ್ರಭ ವಾರ್ತೆ ಹಾಸನ
ಮೊದಲು ನಗರದ ಪ್ರವಾಸಿಮಂದಿರದಲ್ಲಿ ಸಭೆ ನಡೆಸಿದ ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು ಬಳಿಕ ಬಿ. ಎಂ. ರಸ್ತೆಯಲ್ಲಿರುವ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿ ಪ್ರತಿಭಟನೆಯ ವೇಳೆ ಮಹದೇವಪ್ಪ ಪರ ಘೋಷಣೆಗಳು ಮೊಳಗಿದವು ಹಾಗೂ ಸರ್ಕಾರವು ದಲಿತ ಸಮುದಾಯದ ಭಾವನೆಗಳಿಗೆ ಸ್ಪಂದಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹವನ್ನು ಸರ್ಕಾರದ ಗಮನಕ್ಕೆ ತಂದು ಆಗ್ರಹಿಸಲಾಯಿತು. ಪ್ರತಿಭಟನೆಯ ವೇಳೆ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಸೋಮಶೇಖರ್ ಮಾತನಾಡಿ, ರಾಜ್ಯ ರಾಜಕಾರಣದಲ್ಲಿ ದಲಿತ ಸಮುದಾಯದ ಪಾತ್ರ ಹಾಗೂ ಕೊಡುಗೆ ಅತ್ಯಂತ ಮಹತ್ವದ್ದಾಗಿದ್ದರೂ, ಅಧಿಕಾರ ಹಂಚಿಕೆ ವಿಚಾರದಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.
ಸ್ವಾತಂತ್ರ್ಯಾನಂತರದಿಂದಲೂ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯಗಳು ಕಾಂಗ್ರೆಸ್ ಪಕ್ಷಕ್ಕೆ ಬಲವಾದ ಬೆಂಬಲ ನೀಡುತ್ತಾ ಬಂದಿವೆ. ಚುನಾವಣೆಗಳ ಸಂದರ್ಭದಲ್ಲಿ ಈ ಸಮುದಾಯಗಳ ಮತಗಳು ಪಕ್ಷದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿವೆ. ಆದಾಗ್ಯೂ, ಮುಖ್ಯಮಂತ್ರಿ ಸೇರಿದಂತೆ ಉನ್ನತ ಹುದ್ದೆಗಳನ್ನು ನೀಡುವ ಸಂದರ್ಭದಲ್ಲಿ ಈ ಸಮುದಾಯಗಳ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ರಾಜಕೀಯ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆದ ಸಂದರ್ಭದಲ್ಲಿ ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಯಬೇಕಾಗಿತ್ತು. ದಲಿತ ಸಮುದಾಯದಲ್ಲಿ ಸಮರ್ಥ, ಅನುಭವಿ ಹಾಗೂ ರಾಜ್ಯಮಟ್ಟದಲ್ಲಿ ಸ್ವೀಕಾರಾರ್ಹ ನಾಯಕರ ಕೊರತೆ ಇಲ್ಲ. ಪ್ರಿಯಾಂಕ್ ಖರ್ಗೆ, ಡಾ. ಜಿ. ಪರಮೇಶ್ವರ್ ಹಾಗೂ ಎಚ್. ಸಿ. ಮಹದೇವಪ್ಪ ಅವರಂತಹ ನಾಯಕರು ದೀರ್ಘಕಾಲದ ರಾಜಕೀಯ ಅನುಭವ ಹೊಂದಿದ್ದು, ಸರ್ಕಾರ ಹಾಗೂ ಆಡಳಿತದ ಬಗ್ಗೆ ಉತ್ತಮ ಅರಿವು ಹೊಂದಿದ್ದಾರೆ. ಇಂತಹ ನಾಯಕರಿಗೆ ಉನ್ನತ ಹುದ್ದೆಗಳನ್ನು ನೀಡುವ ಮೂಲಕ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸರ್ಕಾರ ಸಾಕಾರಗೊಳಿಸಬೇಕು ಎಂದು ಅವರು ಹೇಳಿದರು.
ದಲಿತ ಸಮುದಾಯದ ಪರವಾಗಿ ದೀರ್ಘಕಾಲ ಹೋರಾಟ ನಡೆಸಿರುವ ಎಚ್. ಸಿ. ಮಹದೇವಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಅವರಿಗೆ ಕೇವಲ ಸಚಿವ ಸ್ಥಾನ ನೀಡುವುದಷ್ಟೇ ಅಲ್ಲದೆ, ಅವರ ಅನುಭವ ಹಾಗೂ ಸಾಮರ್ಥ್ಯಕ್ಕೆ ತಕ್ಕಂತಹ ಪ್ರಭಾವಿ ಖಾತೆಯನ್ನು ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ದಲಿತ ಸಮುದಾಯದ ಮುಖಂಡರಾದ ಗಣೇಶ್ ವೇಲಪುರಿ, ಉಮೇಶ್, ಮಂಜು ತೇಜೂರು, ರಾಮು, ಚಂದ್ರಣ್ಣ, ಭದ್ರಿ, ಹರೀಶ್ (ಅರಕಲಗೂಡು ದಸಂಸ ಸಂಚಾಲಕ),ಪುಟ್ಟರಾಜಪ್ಪ, ಕುಮಾರ್, ಮೋಹನ್, ಚಿನ್ನಸ್ವಾಮಿ, ಅಭಿಷೇಕ್, ಗುರು ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.=====*ಬಾಕ್ಸ್:ಎಚ್. ಸಿ. ಮಹದೇವಪ್ಪ ಅವರು ಮೈಸೂರು ಜಿಲ್ಲೆಯವರಾಗಿದ್ದರೂ ಹಾಸನ ಜಿಲ್ಲೆಯ ಜನರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದಾರೆ. ಹಲವು ವರ್ಷಗಳಿಂದ ಜಿಲ್ಲೆಯ ವಿವಿಧ ಸಾಮಾಜಿಕ ಹಾಗೂ ಅಭಿವೃದ್ಧಿ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಈ ಕಾರಣದಿಂದಲೇ ಹಾಸನ ಜಿಲ್ಲೆಯ ಜನರು ಅವರನ್ನು ತಮ್ಮ ಜಿಲ್ಲೆಯ ದತ್ತು ಪುತ್ರನಂತೆ ಕಾಣುತ್ತಾರೆ. ಅವರ ಸರಳತೆ, ಪ್ರಾಮಾಣಿಕತೆ, ಸಾಮಾಜಿಕ ಕಾಳಜಿ ಹಾಗೂ ಜನಪರ ಚಿಂತನೆಗಳು ರಾಜ್ಯದಾದ್ಯಂತ ಅವರಿಗೆ ವಿಶಿಷ್ಟ ಗೌರವ ತಂದುಕೊಟ್ಟಿವೆ ಎಂದು ಹುಡಾ ಮಾಜಿ ಅಧ್ಯಕ್ಷ ಕೃಷ್ಣ ಕುಮಾರ್ ಹೇಳಿದರು.