71ನೇ ಅಖಿಲ ಭಾರತ ಸಹಕಾರ ಸಪ್ತಾಹ
ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುವಲ್ಲಿ ಸರ್ಕಾರ ವಿಳಂಬ ಮಾಡುತ್ತಿದೆ. ರೈತರಿಗೆ ಪ್ರತಿ ತಿಂಗಳು ಪ್ರೋತ್ಸಾಹ ಧನ ನೀಡಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಆಗ್ರಹಿಸಿದರು.
ತಾಲೂಕಿನ ಹಿರೀಸಾವೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಏರ್ಪಡಿಸಿದ್ದ ತಾಲೂಕಿನ ೭೧ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದರು. ಎಲ್ಲಾ ರೀತಿಯ ಪದಾರ್ಥಗಳ ಬೆಲೆ ಹೆಚ್ಚಾಗಿದೆ, ಆದರೆ, ರೈತರಿಂದ ಕೊಳ್ಳುವ ಹಾಲಿನ ದರ ₹೪೨ಕ್ಕೆ ಹೆಚ್ಚಿಸಿದರೆ ಉತ್ಪಾದಕರಿಗೆ ಅನುಕೂಲವಾಗಲಿದೆ. ಕೆಎಂಎಫ್ ಈ ಬಗ್ಗೆ ಗಮಹರಿಸಬೇಕು. ಹಿರೀಸಾವೆ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಎಟಿಎಂ ಕೇಂದ್ರ ತೆರೆಯಲಾಗವುದು ಎಂದರು.ಸಹಕಾರ ಕ್ಷೇತ್ರದ ಮೂಲಕ ಸ್ತ್ರೀ ಶಕ್ತಿ ಸಂಘಗಳಿಗೆ ಹೆಚ್ಚಿನ ಸಾಲ ನೀಡಲಾಗಿದೆ. ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿ ತಿಂಗಳ, ವಾರದ ಬಡ್ಡಿ ಕಟ್ಟುವವರ ಸಂಖ್ಯೆ ಕಡಿಮೆಯಾಗಿದೆ. ಈ ಸಂಘಗಳಿಗೆ ನೀಡಿರುವ ಸಾಲ ಸಕಾಲಕ್ಕೆ ಮರುಪಾವತಿ ಆಗುತ್ತಿದೆ ಎಂದರು.
ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ೨.೨. ರಾಜಣ್ಣ ಮಾತನಾಡಿ, ಸಹಕಾರ ಕ್ಷೇತ್ರದಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಿದೆ. ಕೃಷಿಯಿಂದ ನಷ್ಟ ಹೊಂದಿದ ರೈತರನ್ನು ಹೈನುಗಾರಿಕೆ ಕೈ ಹಿಡಿದಿದೆ. ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡುವ ಬೆಳೆ ಸಾಲವು ಹೆಚ್ಚು ಅನುಕೂಲವಾಗಿದೆ ಎಂದರು.
ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪುಟ್ಟಸ್ವಾಮಿಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬೋರಣ್ಯ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಗೀತಾ ಕುಮಾರ್, ಉಪಾಧ್ಯಕ್ಷ ಮಂಜುನಾಥ್, ಜೆಡಿಎಸ್ ಮುಖಂಡ ರಾಮಕೃಷ್ಣ ಮಹೇಶ್, ತಾಲ್ಲೂಕಿನ ಕೃಷಿ ಪತ್ತಿನ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳ ಪದಾಧಿಕಾರಿಗಳು, ಭಾಗವಹಿಸಿದ್ದರು. ಸ್ವರಾಂಜಲಿ ತಂಡದವರು ಮತ್ತು ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.