ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ಶಿಕ್ಷಣ, ಆರೋಗ್ಯ ಮತ್ತು ಕೌಶಲ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ: ಪ್ರೊ.ಎಂ.ಗೋವಿಂದರಾವ್

KannadaprabhaNewsNetwork | Published : May 15, 2025 2:05 AM

ಸೇವಾ ವಲಯದಲ್ಲಿ ಜಿಲ್ಲೆ ಉತ್ತಮವಾಗಿ ಅಭಿವೃದ್ಧಿ ಹೊಂದುತ್ತಿದೆ. ಆದರೆ, ಮುಖ್ಯವಾಗಿ ಕೃಷಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ ವಲಯದಲ್ಲಿ ಅಭಿವೃದ್ಧಿಯ ಸೂಚ್ಯಾಂಕ ಕಡಿಮೆ ಇದೆ. ಈ ವಲಯಗಳನ್ನು ಅಭಿವೃದ್ಧಿ ಗೊಳಿಸಲು ಉತ್ತಮ ಯೋಜನೆ ಹಾಗೂ ಸಲಹೆಗಳು ಬೇಕಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಶಿಕ್ಷಣ, ಆರೋಗ್ಯ ಮತ್ತು ಕೌಶಲ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿ ಯೋಜನೆಗಳನ್ನು ರೂಪಿಸಿ ಮಹತ್ತರ ಬದಲಾವಣೆ ತರುವುದರಿಂದ ಪ್ರಾದೇಶಿಕ ಅಸಮತೋಲನ ನಿವಾರಿಸಬಹುದು ಎಂದು ಆರ್ಥಿಕ ತಜ್ಞರು ಹಾಗೂ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪ್ರೊ.ಎಂ.ಗೋವಿಂದರಾವ್ ತಿಳಿಸಿದರು.

ನಗರದ ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ಸಮಿತಿ ಸದಸ್ಯರು, ಜಿಲ್ಲೆಯ ಅಧಿಕಾರಿಗಳು, ವಿವಿಧ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾ ಮಟ್ಟದ ಸಂವಾದ ಸಭೆ ನಡೆಸಿ ಮಾತನಾಡಿ, ಸೇವಾ ವಲಯದಲ್ಲಿ ಜಿಲ್ಲೆ ಉತ್ತಮವಾಗಿ ಅಭಿವೃದ್ಧಿ ಹೊಂದುತ್ತಿದೆ. ಆದರೆ, ಮುಖ್ಯವಾಗಿ ಕೃಷಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ ವಲಯದಲ್ಲಿ ಅಭಿವೃದ್ಧಿಯ ಸೂಚ್ಯಾಂಕ ಕಡಿಮೆ ಇದೆ. ಈ ವಲಯಗಳನ್ನು ಅಭಿವೃದ್ಧಿ ಗೊಳಿಸಲು ಉತ್ತಮ ಯೋಜನೆ ಹಾಗೂ ಸಲಹೆಗಳು ಬೇಕಿದೆ ಎಂದರು.

ಜಿಲ್ಲೆಯಲ್ಲಿ ರೈತರು ಕಬ್ಬು ಮತ್ತು ಭತ್ತದ ಬೆಳೆಯನ್ನು ಹೆಚ್ಚು ಬೆಳೆಯುತ್ತಾರೆ. ಒಂದೇ ರೀತಿ ಬೆಳೆಯನ್ನು ಹೆಚ್ಚು ಬೆಳೆಯುವುದರಿಂದ ಮಣ್ಣಿನ ಪೋಷಕಾಂಶ ಕಡಿಮೆಯಾಗುತ್ತದೆ. ರೈತರಿಗೆ ವಿವಿಧ ಬೆಳೆಗಳನ್ನು ಬೆಳೆಯುವುದು ಹಾಗೂ ಮಾರುಕಟ್ಟೆಯನ್ನು ಕಲ್ಪಿಸಿಕೊಡುವುದು ಹಾಗೂ ಕೃಷಿ ವಿಜ್ಞಾನ ಕೇಂದ್ರ ನೀಡುವ ಸಲಹೆಗಳನ್ನು ರೈತರು ಅಳವಡಿಸಿಕೊಳ್ಳುವ ಬಗ್ಗೆ ಪ್ರೇರಿಪಿಸಬೇಕು, ಕೃಷಿ ಪದ್ಧತಿಯಲ್ಲಿ ಹೊಸ ಬದಲಾವಣೆ ತರುವ ಬಗ್ಗೆ ಚಿಂತಿಸಬೇಕು ಎಂದರು.

ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತ ಡಾ.ಡಿ.ಎಂ.ನಂಜುಂಡಪ್ಪ ಅಧ್ಯಕ್ಷತೆಯ ಸಮಿತಿಯು 2002ರಲ್ಲಿ ವರದಿ ನೀಡಿದ ನಂತರ ಹಿಂದುಳಿದ ತಾಲೂಕುಗಳು ಯಾವ ರೀತಿ ಬೆಳವಣಿಗೆಯಾಗಿದೆ. ಯಾವ ತಾಲೂಕುಗಳು ಇನ್ನೂ ಹಿಂದುಳಿದ ಪ್ರದೇಶಗಳಾಗಿ ಮುಂದುವರೆದಿವೆ ಎಂಬುದನ್ನು ಸಮಿತಿ ಪರಾಮರ್ಶಿಸಲಿದೆ ಎಂದರು.

ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ವಿತ್ತೀಯ ಸುಧಾರಣೆ ಮತ್ತು ಯೋಜನಾ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಆರ್.ವಿಶಾಲ್ ಮಾತನಾಡಿ, ಜಿಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಸೌಲಭ್ಯಗಳು ಬೇಕಿದೆ. ಮೊದಲಿಗೆ ಸೂಪರ್ ಸ್ಪೆಷಲಿಟಿ ಹಾಸ್ಪಿಟಲ್, ಟ್ರಮಾ ಸೆಂಟರ್, ನೆಫ್ರೋ ಮತ್ತು ನ್ಯೂರೋ ತಜ್ಞರ ಅವಶ್ಯಕತೆ ಕುರಿತು ಸಭೆಯಲ್ಲಿ ಚರ್ಚಿಸಿ ಆರೋಗ್ಯ ಕ್ಷೇತ್ರದ ಅವಶ್ಯಕತೆ ಕುರತು ವರದಿ ಸಲ್ಲಿಸುವುದಾಗಿ ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಜಿಲ್ಲೆಯಲ್ಲಿ ಹೆಣ್ಣು ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಹಾಸ್ಟೆಲ್ ಹಾಗೂ ಕಾಲೇಜುಗಳು ತಾಲೂಕು ಮಟ್ಟದಲ್ಲಿ ಹೆಚ್ಚಾಗಬೇಕು. ಇದರಿಂದ ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗು ಕಡಿಮೆಯಾಗುತ್ತದೆ ಎಂದರು.

ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಜಿಲ್ಲೆಯಲ್ಲಿ ಸ್ವಸಹಾಯ ಗುಂಪುಗಳನ್ನು ತೊಡಗಿಸಿಕೊಂಡು ಅಣಬೆ ಬೇಸಾಯ ಮಾಡಿಸಿ ಅವರಿಗೆ ಮಾರುಕಟ್ಟೆ ಕಲ್ಪಿಸಿ ಕೊಡುವುದು. ತೋಟಗಾರಿಕೆ ಇಲಾಖೆತಿಯಿಂದ ಡ್ರ್ಯಾಗನ್ ಫ್ರೂಟ್ ಸೇರಿದಂತೆ ಹೊಸ ಬೆಳೆಗಳನ್ನು ಬೆಳೆಯುವುದರಿಂದ ಆರ್ಥಿಕ ಸ್ಥಿತಿ ಸುಧಾರಿಸಬಹುದು ಎಂದರು.

ಸಭೆಯಲ್ಲಿ ರೆಡ್ ಕ್ರಾಸ್ ಸಂಸ್ಥೆ ಉಪಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ಚೇಂಬರ್ ಆಪ್‌ ಕಾಮರ್ಸ್ ಅಧ್ಯಕ್ಷ ಪ್ರಭಾಕರ್ ಅವರು ಸಂವಾದದಲ್ಲಿ ಭಾಗವಹಿಸಿ ಸಲಹೆ ನೀಡಿದರು. ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸದಸ್ಯ ಸೂರ್ಯ ನಾರಾಯಣ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.