ಕಡ್ಡಾಯವಾಗಿ ಎಲ್ಲಾ ಕಛೇರಿಗಳಲ್ಲೂ ಕನ್ನಡ ಭಾಷೆ ಬಳಸಬೇಕು. ಎಲ್ಲರೂ ಕನ್ನಡದಲ್ಲಿ ಮಾತನಾಡುವುದನ್ನು ಕಲಿಯಬೇಕು. ಕನ್ನಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ತಹಸೀಲ್ದಾರ್ ಪರುಸಪ್ಪ ಕುರುಬರ ಹೇಳಿದರು.
ವಿಶ್ವ ಮಾತೃಭಾಷೆ ದಿನ । ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಆಯೋಜನೆ
ಕನ್ನಡಪ್ರಭ ವಾರ್ತೆ ಭದ್ರಾವತಿ
ಕಡ್ಡಾಯವಾಗಿ ಎಲ್ಲಾ ಕಛೇರಿಗಳಲ್ಲೂ ಕನ್ನಡ ಭಾಷೆ ಬಳಸಬೇಕು. ಎಲ್ಲರೂ ಕನ್ನಡದಲ್ಲಿ ಮಾತನಾಡುವುದನ್ನು ಕಲಿಯಬೇಕು. ಕನ್ನಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ತಹಸೀಲ್ದಾರ್ ಪರುಸಪ್ಪ ಕುರುಬರ ಹೇಳಿದರು.
ನಗರದ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಈ ಬಾರಿ ಸಹ ಹಳೇನಗರದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಮಾತೃಭಾಷೆ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಉರ್ದು ಶಾಲೆಯಲ್ಲಿ ವಿಶೇಷವಾಗಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಿಸಿಕೊಂಡು ಬರುತ್ತಿರುವುದು ತುಂಬಾ ಸಂತೋಷದ ವಿಷಯವಾಗಿದೆ. ನಮ್ಮ ಮಾತೃ ಭಾಷೆಯಾದ ಕನ್ನಡ ನಾವೆಲ್ಲರೂ ಸರಿಯಾಗಿ ಅರ್ಥಮಾಡಿಕೊಂಡು ಕಲಿಯುವ ಮೂಲಕ ಇತರರಿಗೂ ಕಲಿಸಬೇಕೆಂದರು.
ವಿಶ್ವ ಮಾತೃ ಭಾಷೆ ದಿನಾಚರಣೆ ಕುರಿತು ನಿವೃತ್ತ ಪ್ರಾಧ್ಯಾಪಕ, ಸಾಹಿತಿ ಪ್ರೊ. ಎಂ. ಚಂದ್ರಶೇಖರಯ್ಯ ಮಾತನಾಡಿ, ಕನ್ನಡ ಭಾಷೆಯ ಬೆಳವಣಿಗೆ ಕನ್ನಡದ ಅಸ್ತಿತ್ವ ಮತ್ತು ಕನ್ನಡ ಬಳಸುವ ರೀತಿಯ ಸೂಚಕವಾಗಿದೆ. ಪ್ರಸ್ತುತ ಕನ್ನಡ ವಿಶ್ವದ ಪ್ರಮುಖ ಭಾಷೆಗಳಲ್ಲಿ ಒಂದಾಗಿದೆ. ಬೇರೆ ಭಾಷೆಯವರು ಕನ್ನಡ ಭಾಷೆಯನ್ನು ಕಲಿತು ಉನ್ನತ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಕಲಾವಿದರು, ಸಾಹಿತಿ, ಕವಿಗಳಾಗಿ ಮುಂಚೂಣಿಯಲ್ಲಿದ್ದಾರೆ. ಇಂತಹವರ ಸಾಲಿನಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ದ.ರಾ ಬೇಂದ್ರೆ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಹ ಸೇರಿದ್ದಾರೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಶಾಲೆಯ ಮುಖ್ಯ ಶಿಕ್ಷಕಿ ಶಹನ ಫಾತೀಮ ಸೇರಿ ಇತರರು ಮಾತನಾಡಿದರು. ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯ ಖಜಾಂಚಿ ಗಂಗರಾಜ್, ಮಲ್ಲಿಕಾ, ಕೋಕಿಲ, ಸುಚಿತ್ರ ಸೇರಿದಂತೆ ಶಾಲೆಯ ಶಿಕ್ಷಕ ಹಾಗು ಸಿಬ್ಬಂದಿ ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.