- ಎಸ್ಎಸ್ ಹೈಟೆಕ್ ಆಸ್ಪತ್ರೆ ವೈದ್ಯ-ಸಿಬ್ಬಂದಿಗೆ ಸೂಚನೆ ನೀಡಿದ ಸಂಸದೆ । ಮಳೆಹಾನಿ ಪ್ರದೇಶಗಳ ಪರಿಶೀಲನೆ - - - ಕನ್ನಡಪ್ರಭ ವಾರ್ತೆ ದಾವಣಗೆರೆ
ಹರಿಹರದ ಮೆಹಬೂಬ್ ನಗರದ ಮಗು ಆಯೇಷಾ ಮನೆ ಕುಸಿದು, ಗಂಭೀರವಾಗಿ ಗಾಯಗೊಂಡಿದೆ. ಮಗುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಸದೆ ಡಾ.ಪ್ರಭಾ ಆಸ್ಪತ್ರೆ ವೈದ್ಯರೊಂದಿಗೆ ಮಗುವಿನ ಆರೋಗ್ಯ, ಸ್ಥಿತಿಗತಿ ಬಗ್ಗೆ ವಿಚಾರಿಸಿದರು. ಅನಂತರ ಮಗುವಿನ ಪಾಲಕರಿಗೆ ಧೈರ್ಯ ಹೇಳಿದರು.
ಬಳಿಕ ಸಂಸದರು ಮೇಯರ್ ಕೆ.ಚಮನ್ ಸಾಬ್, ಉಪ ಮೇಯರ್ ಶಾಂತಕುಮಾರ ಸೋಗಿ, ಪಾಲಿಕೆ ಆಯುಕ್ತೆ ರೇಣುಕಾ, ಸದಸ್ಯರಾದ ಎ.ಬಿ.ರಹೀಂ ಸಾಬ್ ಇತರರೊಂದಿಗೆ ಮಳೆ ಹಾನಿಗೀಡಾದ ಗಾಂಧಿ ನಗರ, ಮಂಡಕ್ಕಿ ಭಟ್ಟಿ ಲೇಔಟ್ ಇತರೆ ಪ್ರದೇಶಗಳಿಗೂ ಭೇಟಿ ನೀಡಿದರು. ಸಂತ್ರಸ್ಥರಿಗೆ ನೈತಿಕ ಸ್ಥೈರ್ಯ ತುಂಬಿದರು.ಡಾ.ಪ್ರಭಾ ಈ ಸಂದರ್ಭ ಮಾತನಾಡಿ, ತೀವ್ರ ಮಳೆಯಿಂದಾಗಿ ದಾವಣಗೆರೆ, ಹರಿಹರ, ಹರಪನಹಳ್ಳಿ ಸೇರಿದಂತೆ ಜಿಲ್ಲಾದ್ಯಂತ ಸಾಕಷ್ಟು ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಪಾಲಿಕೆ ಮೇಯರ್, ಉಪ ಮೇಯರ್, ಅಧಿಕಾರಿಗಳ ಸಮೇತ ಸ್ಥಳಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಅಗತ್ಯ ಎಲ್ಲ ನೆರವು ಒದಗಿಸಲಾಗುವುದು ಎಂದರು.
ಅನಂತರ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ್ದ ಡಾ.ಪ್ರಭಾ, ತೀವ್ರ ಮಳೆಯಿಂದಾಗಿ ಹಾನಿಗೀಡಾದ ಮನೆಗಳಿಗೆ ಖುದ್ದಾಗಿ ತೆರಳಿ, ಸ್ಥಿತಿಗತಿ ವೀಕ್ಷಿಸಿದರು. ಸಂತ್ರಸ್ತರಿಗೆ ಸೂಕ್ತ ಪರಿಹಾರ ಹರಿಹಾರ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಪರಿಹಾರ ಕ್ರಮ ಕೈಗೊಳ್ಳಲು, ಸಂತ್ರಸ್ತರಿಗೆ ಮನೆಗಳನ್ನು ಒದಗಿಸುವಂತೆ ಸ್ಲಂ ಬೋರ್ಡ್ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಈ ಬಗ್ಗೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಜೊತೆಗೂ ಚರ್ಚಿಸುವುದಾಗಿ ಭರವಸೆ ನೀಡಿದರು.
ದಾವಣಗೆರೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭೇಟಿ ನೀಡಿ, ಪರಿಶೀಲಿಸಿದರು. ಮೇಯರ್ ಚಮನ್ ಸಾಬ್, ಉಪ ಮೇಯರ್ ಶಾಂತಕುಮಾರ ಸೋಗಿ ಇತರರು ಇದ್ದರು.
ಹರಿಹರದಲ್ಲಿ ತೀವ್ರ ಮಳೆಯಿಂದಾಗಿ ಮನೆ ಕುಸಿದು ತೀವ್ರ ಗಾಯಗೊಂಡಿದ್ದ 4 ವರ್ಷದ ಮಗು ಆಯೇಷಾ ದಾವಣಗೆರೆ ಎಸ್ಸೆಸ್ ಹೈಟೆಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ಸಂಸದೆ ಡಾ.ಪ್ರಭಾ ಗಾಯಾಳು ಮಗುವಿಗೆ ಸೂಕ್ತ ಚಿಕಿತ್ಸೆ, ಔಷಧೋಪಾಚಾರಕ್ಕೆ ಸೂಚಿಸಿದರು.