ವಿಕಲಚೇತನರಿಗೆ ಅನುಕಂಪದ ಬದಲು ಅವಕಾಶ ನೀಡಿ

KannadaprabhaNewsNetwork |  
Published : Dec 04, 2025, 01:05 AM IST
ಚಿತ್ರದುರ್ಗ ಎರಡನೇ ಪುಟದಲೀಡ್ | Kannada Prabha

ಸಾರಾಂಶ

ಚಿತ್ರದುರ್ಗದ ವಾಲ್ಮೀಕಿ ಭವನದಲ್ಲಿ ಬುಧವಾರ ಆಯೋಜಿಸಿದ್ದ ವಿಕಲಚೇತನರ ದಿನಾಚರಣೆಯನ್ನು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ. ತಾಜ್‍ಪೀರ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ವಿಕಲಚೇತನರ ಮೇಲೆ ಅನುಕಂಪ ತೋರುವ ಬದಲು ಗೌರವ ಕೊಡುವ ಹಾಗೂ ಅವರಿಗೆ ತಕ್ಕಂತೆ ಸಮಾನ ಅವಕಾಶ ನೀಡುವುದು ಅಗತ್ಯವೆಂದು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ ತಾಜ್‍ಪೀರ್ ಹೇಳಿದರು.

ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸೇರಿದಂತೆ ವಿವಿದ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ವಿಕಲಚೇತನರೆಂದು ನಿರ್ಲಕ್ಷ ತೋರದೇ ಒಟ್ಟಿಗೆ ಕರೆದೊಯ್ಯುವ ಪ್ರಯತ್ನಗಳ ಮಾಡಬೇಕೆಂದರು.

ವಿಕಲಚೇತನರಲ್ಲಿ ಸಾಮಾನ್ಯ ಜನರಿಗಿಂತಲೂ ಉತ್ತಮ ಪ್ರತಿಭೆ ಇರುತ್ತದೆ. ಶಿಕ್ಷಣ, ಕ್ರೀಡಾ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ವಿಕಲಚೇತನರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳು ಅವರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸಲು ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.

ವಿಕಲಚೇತನರು ಎಲ್ಲರಂತೆ ಸಮಾಜದ ಮುಖ್ಯವಾಹಿನಿಗೆ ಬರಲು ಸಮಾಜದ ಜನರು ಪ್ರೀತಿ ತೋರಿಸಬೇಕು. ಶ್ಯೂರಿಟಿ ಇಲ್ಲದೇ ಬ್ಯಾಂಕುಗಳು ಸಾಲ-ಸೌಲಭ್ಯ ನೀಡಿ ಪ್ರೋತ್ಸಾಹ ನೀಡಿದರೆ ಖಂಡಿತವಾಗಿಯೂ ಅವರು ಸಾಲ ಮರುಪಾವತಿ ಮಾಡಿ, ದೇಶದ ಅಭಿವೃದ್ಧಿಗೆ ಹಾಗೂ ಉದ್ಯೋಗ ಸೃಷ್ಠಿಗೂ ನೆರವಾಗಲಿದ್ದಾರೆ ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್. ಶಿವಣ್ಣ ಮಾತನಾಡಿ, ವಿಕಲಚೇತನರು ಬದುಕು ಕಟ್ಟಿಕೊಳ್ಳಲು ಸರ್ಕಾರದ ಸಹಾಯಹಸ್ತ ಬೇಕು. ಈ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಕಲಚೇತನರ ಅಭ್ಯುದಯಕ್ಕಾಗಿ ಸಾಕಷ್ಟು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನ ಮಾಡುತ್ತಿದೆ. ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಸ್ವ-ಸಾಮಥ್ರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಾಸ್ತಾವಿಕ ಮಾತನಾಡಿ, 2011ರ ಜನಗಣತಿಯ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 35,971 ಜನ ವಿಕಲಚೇತನರು ಇದ್ದು, ವಿಕಲಚೇತನರು ಮುಖ್ಯವಾಹಿನಿಯಲ್ಲಿ ಸಾಮಾನ್ಯರಂತೆ ಜೀವಿಸಲು ಅನುಕೂಲವಾಗುವಂತೆ ಎಲ್ಲ ರೀತಿಯ ಅಡೆತಡೆರಹಿತವಾಗಿ ಸೌಲಭ್ಯ ಅಥವಾ ನೆರವು ನೀಡಲು ಸರ್ಕಾರ ಹಾಗೂ ಸಮುದಾಯದ ಜವಾಬ್ದಾರಿಯಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆ ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ,ಕರ್ನಾಟಕ ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿದರು.

ಇದೇ ಸಂದರ್ಭದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ 2024-25ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲೆಯ ತಾಲೂಕುವಾರು ಅತೀ ಹೆಚ್ಚು ಅಂಕಗಳನ್ನು ಪಡೆದಿರುವ ವಿಕಲಚೇತನ ವಿದ್ಯಾರ್ಥಿಗಳಾದ ಹೊಳಲ್ಕೆರೆ ಧನಂಜಯ, ಹೊಸದುರ್ಗ ಕೆ.ಎಚ್.ಭರತ್, ಮೊಳಕಾಲ್ಮುರು ಬಿ.ಪ್ರೇಮಕುಮಾರ, ಚಿತ್ರದುರ್ಗ ಜಿ.ಎಂ.ಚೇತನ, ಚಳ್ಳಕೆರೆ ಎ.ಮಾನಸ ಹಾಗೂ ಹಿರಿಯೂರಿನ ಸಿ.ಸಂಗೀತ ಅವರನ್ನು ಗೌರವಿಸಲಾಯಿತು.

ಸ್ವಯಂ ಉದ್ಯೋಗ ಮಾಡುತ್ತಿರುವ ಚಿತ್ರದುರ್ಗ ತಾಲ್ಲೂಕಿನ ಮಾನಂಗಿ ಗ್ರಾಮದ ವಿಕಲಚೇತನ ಬಿ.ಕುಮಾರಸ್ವಾಮಿ ಹಾಗೂ ಕಲಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ ಚಿತ್ರದುರ್ಗದ ನೆಹರು ನಗರದ ಆರ್.ಶ್ರೀಚಿತ್ರಾ ಹಾಗೂ ವಿಕಲಚೇತನರ ಸಾಧನೆಗೆ ಸ್ಪೂರ್ತಿ ನೀಡಿದ ಲಾಸಿಕಾ ಪೌಂಡೇಷನ್‍ನ ಕಾರ್ಯದರ್ಶಿ ಮಂಜುನಾಥ್ ಅವರಿಗೆ ಅಭಿನಂದಿಸಲಾಯಿತು.

ಚಿತ್ರದುರ್ಗ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಪಿ.ಕೆ.ದಿನಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಹೆಚ್.ವಿಜಯ ಕುಮಾರ್, ನಿರೂಪಣಾಧಿಕಾರಿ ಮಂಜುನಾಥ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿಡಘಟ್ಟ ಗ್ರಾ.ಪಂ.ಗೆ ಗಾಂಧೀಗ್ರಾಮ ಪುರಸ್ಕಾರ: ರುದ್ರಮ್ಮ ಬಸವರಾಜು
ಕಳವಾಗಿದ್ದ ಮೊಬೈಲ್‌ಗಳ ಪತ್ತೆ: ವಾರಸುದಾರರಿಗೆ ಹಸ್ತಾಂತರ