ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಭಾರತ ಚುನಾವಣಾ ಆಯೋಗ ತಾಲೂಕು ಕಚೇರಿ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಯುವ ಮತದಾರರಿಗೆ ಭಾವಚಿತ್ರ ಇರುವ ಗುರುತಿನ ಚೀಟಿ ವಿತರಿಸಿ ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಚುನಾವಣೆಗಳೆಂಬ ಗಟ್ಟಿಯಾದ ಬುನಾದಿಯ ಮೇಲೆ ಕಟ್ಟಲಾಗಿದೆ. ದೇಶ ಎಲ್ಲಾ ಪ್ರಜೆಗಳು ಚುನಾವಣೆಯಲ್ಲಿ ಧರ್ಮ, ಜಾತಿ, ಮತ, ಭಾಷೆ, ಲಿಂಗ, ಶಿಕ್ಷಣದ ಭೇದವಿಲ್ಲದೆ ಯಾವುದೇ ದಾಕ್ಷಿಣ್ಯಕ್ಕೆ ಒಳಗಾಗದೆ ಮತ ಚಲಾಯಿಸಬೇಕು ಎಂದು ಸಲಹೆ ನೀಡಿದರು.ಮತದಾನದ ಮೂಲಕ ನಾವು ಈ ಸಮಾಜದಲ್ಲಿ ಬದಲಾವಣೆಗಳನ್ನು ತರಲು ಸಾಧ್ಯ. ಯಾರು ದೇಶದ ಅಭಿವೃದ್ಧಿ, ಬಡವರ ಏಳ್ಗೆ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ಶ್ರಮಿಸುವಂತಹ ಜನ ನಾಯಕರನ್ನು ಆಯ್ಕೆ ಮಾಡುವ ಹಕ್ಕನ್ನು ನಮಗೆ ಮತದಾನದ ಮೂಲಕ ಸಂವಿಧಾನ ನೀಡಿದೆ ಎಂದು ತಿಳಿಸಿದರು.
ಮಹಿಳಾ ಸರ್ಕಾರಿ ಕಾಲೇಜಿನ ರಾಜ್ಯಶಾಸ್ತ್ರ ಸಹಪ್ರಾಧ್ಯಾಪಕಿ ಅಂತೋನಿ ಮೇರಿ ಪ್ರಧಾನ ಭಾಷಣ ಮಾಡಿದರು. ಈ ವೇಳೆ ನ್ಯಾಯಾಧೀಶರು ಮತ್ತು ಗಣ್ಯರು ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು. ತಹಸೀಲ್ದಾರ್ ಕೆ.ಎಸ್. ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು. ತೃತೀಯ ಅಪರ ಸಿವಿಲ್ ನ್ಯಾಯಾಧೀಶ ಎಸ್.ಪಿ. ಕಿರಣ್, ವಕೀಲ ಸಂಘದ ಅಧ್ಯಕ್ಷ ಎಂ.ಎನ್. ಶಿವಣ್ಣ, ತಾಪಂ ಇಒ ಎಲ್. ಸಂದೀಪ್, ಬಿಇಒ ಸಿ.ಎಚ್. ಕಾಳಿರಯ್ಯ, ಉಪತಹಸೀಲ್ದಾರ್ ಸೋಮಶೇಖರ್, ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಬಿ. ನಾರಾಯಣ, ಪುರಸಭೆ ಮುಖ್ಯಾಧಿಕಾರಿ ಕರಿಬಸವಯ್ಯ, ಚುನಾವಣೆ ಶಾಖೆ ಶಿರಸ್ತೇದಾರ್ ರೂಪಾ, ಸಿಬ್ಬಂದಿ ಮನೋಜ್ ಇದ್ದರು. ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಕಾಲೇಜು ಆವರಣದಿಂದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸುವ ಮೂಲಕ ನಾಗರಿಕರಲ್ಲಿ ಮತದಾನದ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸಿದರು.