ಕನ್ನಡಪ್ರಭ ವಾರ್ತೆ ಮಂಡ್ಯ
ಕೆಎಚ್ಬಿ ಮಹಾ ರಾಜನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಪಂಚಮುಖಿ ಗಣಪತಿ ದೇವಸ್ಥಾನದ ಬಳಿ ಸೇರಿದ ಬಡಾವಣೆ ನಿವಾಸಿಗಳು ಅಲ್ಲಿಂದ ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆವರೆಗೆ ಬೈಕ್ ರ್ಯಾಲಿ ನಡೆಸಿದರು. ಬಳಿಕ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಆಗಮಿಸಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿಗೆ ಮನವಿ ಸಲ್ಲಿಸಿದರು.
ಕೆಎಚ್ಬಿ ಬಡಾವಣೆ ನಿರ್ಮಾಣ ಮಾಡಿ ೨೦ ವರ್ಷ ಕಳೆದರೂ ಈವರೆಗೂ ಬಡಾವಣೆ ಜನರಿಗೆ ಕುಡಿಯುವ ಕಾವೇರಿ ನೀರಿನ ಸಂಪರ್ಕ ಕಲ್ಪಿಸಿಲ್ಲ. ೨೦೧೯ರಲ್ಲಿ ಕರ್ನಾಟಕ ಗೃಹಮಂಡಳಿ ಬಡಾವಣೆಯನ್ನು ನಗರಸಭೆಗೆ ಹಸ್ತಾಂತರ ಮಾಡಿದೆ. ಕಳೆದ ೬ ವರ್ಷಗಳಿಂದ ಬಡಾವಣೆ ನಿವಾಸಿಗಳು ಕಂದಾಯ ಕಟ್ಟುತ್ತಿದ್ದಾರೆ. ಆದರೆ, ಈವರೆಗೂ ನಗರಸಭೆ ಯಾವುದೇ ಮೂಲ ಸೌಲಭ್ಯ ಒದಗಿಸಿಲ್ಲ ಎಂದು ಟೀಕಿಸಿದರು.ಕೆಆರ್ಎಸ್ ಜಲಾಶಯದಿಂದ ಬೆಂಗಳೂರಿಗೆ ಸಾವಿರಾರು ಕೋಟಿ ರು. ವೆಚ್ಚ ಮಾಡಿ ನಿತ್ಯ ನೀರು ಪೂರೈಸಲಾಗುತ್ತಿದೆ. ೫ನೇ ಹಂತ ಪೂರ್ಣಗೊಳಿಸಿ ೬ನೇ ಹಂತದ ಬಗ್ಗೆ ಯೋಜನೆ ರೂಪಿಸುತ್ತಿದೆ. ರಾಮನಗರ ಜಿಲ್ಲೆಗೂ ಕಾವೇರಿ ನೀರು ಪೂರೈಸುವ ಯೋಜನೆ ಡಿಸೆಂಬರ್ಗೆ ಪೂರ್ಣಗೊಳ್ಳಲಿದೆ. ಆದರೆ, ಮಂಡ್ಯ ಜಿಲ್ಲೆಯಲ್ಲಿರುವ ಕೆ.ಆರ್.ಎಸ್. ಆಣೆಕಟ್ಟೆಯಿಂದ ಮಂಡ್ಯ ಜಿಲ್ಲಾ ಕೇಂದ್ರದಲ್ಲಿರುವ ಕೆಹೆಚ್ಬಿ ಬಡಾವಣೆ ಜನರಿಗೆ ಮಾತ್ರ ಕಾವೇರಿ ನೀರು ಪೂರೈಸದಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನೀರು ಸಂಪರ್ಕ ಕಲ್ಪಿಸದ ಹಿನ್ನೆಲೆಯಲ್ಲಿ ಮನೆ ನಿರ್ಮಾಣ ಮಾಡುವವರು ಕೊಳವೆ ಬಾವಿಗಳನ್ನು ಕೊರೆಸಿದ್ದಾರೆ. ಆದರೆ, ಆ ನೀರು ಸಂಪೂರ್ಣ ಕಲುಷಿತಗೊಂಡಿದ್ದು ಕುಡಿಯುವುದಕ್ಕಿರಲಿ, ಸ್ನಾನಕ್ಕೂ ಯೋಗ್ಯವಾಗಿಲ್ಲ. ಈ ಸಂಬಂಧ ಸಾಕಷ್ಟು ಬಾರಿ ಅಧಿಕಾರಿಗಳನ್ನು ಭೇಟಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ನಗರಸಭೆ ಹಾಗೂ ಕೆಎಚ್ಬಿ ನಡುವಿನ ತಿಕ್ಕಾಟದಿಂದ ಬಡಾವಣೆ ನಿವಾಸಿಗಳು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ ಎಂದು ಅಳಲು ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಹಾರಾಜನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಸಿ.ಶ್ರೀಕಾಂತ್, ಅಧ್ಯಕ್ಷ ಹರೀಶ್, ಉಪಾಧ್ಯಕ್ಷ ಪುಟ್ಟಯ್ಯ, ಕಾರ್ಯದರ್ಶಿ ಅಶೋಕ್, ಸಂಘಟನಾ ಕಾರ್ಯದರ್ಶಿ ಶಶಿಧರ್, ಮೋಹನ್, ಯಶಸ್ವಿನಿ, ಕಾಂತರಾಜು, ಶ್ರೀನಿವಾಸ್ ಹಾಗೂ ಬಡಾವಣೆಯ ನಿವಾಸಿಗಳು ಹೆಂಗಸರು ಹಾಗೂ ಮಕ್ಕಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಟ್ಯಾಂಕ್ ಮೂಲಕ ನೀರು ಪೂರೈಸಲು ಕ್ರಮ: ಎಡಿಸಿ
ಕೊಳವೆಬಾವಿ ನೀರು ಕುಲುಷಿತಗೊಂಡಿರುವ ಕಾರಣ ನಗರಸಭೆ ನಾಳೆಯಿಂದಲೇ ಟ್ಯಾಂಕರ್ ಮೂಲಕ ಕಾವೇರಿ ನೀರು ಪೂರೈಕೆಗೆ ಅಗತ್ಯ ಕ್ರಮ ವಹಿಸಬೇಕೆಂದು ಸ್ಥಳದಲ್ಲಿಯೇ ಇದ್ದ ನಗರಸಭೆ ಆಯುಕ್ತರಿಗೆ ಸೂಚಿಸಿದರು.