
ಕಾರವಾರ: ಗೋಮಾತೆಗೆ ರಾಷ್ಟ್ರೀಯ ಮಟ್ಟದ ಗೌರವದ ಸ್ಥಾನಮಾನ ಕಲ್ಪಿಸುವ ಉದ್ದೇಶದಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ''ಗೋ ಸಮ್ಮಾನ ಆಹ್ವಾನ ಅಭಿಯಾನ'' ನಡೆಯುತ್ತಿದ್ದು, ಅದರ ಅಂಗವಾಗಿ ಸಹಿ ಸಂಗ್ರಹ ಹಾಗೂ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಭಿಯಾನದ ಸಂಚಾಲಕ ಗಜೇಂದ್ರ ಎಸ್. ಬೇಲೆಮನೆ ತಿಳಿಸಿದರು.
ಅಭಿಯಾನದ ಮೊದಲ ಹಂತ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅದು ಗಿನ್ನಿಸ್ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲಾಗಿದೆ ಎಂದು ತಿಳಿಸಿದರು. ಪ್ರಸ್ತುತ ಎರಡನೇ ಹಂತವಾಗಿ ಜಿಲ್ಲಾ ಮಟ್ಟದಲ್ಲಿ ಸಹಿ ಸಂಗ್ರಹ ನಡೆಯುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ ಸಂಗ್ರಹಿಸಲಾದ ಸಹಿಗಳನ್ನು ಜು. 27ರಂದು ಜಿಲ್ಲಾಧಿಕಾರಿಗೆ ಮನವಿ ರೂಪದಲ್ಲಿ ಸಲ್ಲಿಸಲಾಗುವುದು ಎಂದರು.
ಅಭಿಯಾನದ ಪ್ರಮುಖ ಬೇಡಿಕೆಗಳಾಗಿ ದೇಶಾದ್ಯಂತ ಗೋಹತ್ಯೆಯನ್ನು ಸಂಪೂರ್ಣ ನಿಷೇಧಿಸುವುದು, ಗೋವಿಗೆ ರಾಷ್ಟ್ರೀಯ ಗೌರವದ ಸ್ಥಾನಮಾನ ನೀಡುವುದು, ಗೋಸೇವೆಗಾಗಿ ಪ್ರತ್ಯೇಕ ಕೇಂದ್ರ ಸಚಿವಾಲಯ ಸ್ಥಾಪಿಸುವುದು ಹಾಗೂ ಗೋಚಾರ ಮಂಡಳಿ ರಚಿಸುವುದು ಸೇರಿವೆ ಎಂದು ಬೇಲೆಮನೆ ತಿಳಿಸಿದರು.ಈ ಬೇಡಿಕೆಗಳಿಗೆ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ, ಮುಂದಿನ ಹಂತದಲ್ಲಿ ದೇಶದ ಸಾಧು-ಸಂತರು 2027ರ ಏಪ್ರಿಲ್ ತಿಂಗಳಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ ಎಂದು ಎಚ್ಚರಿಸಿದರು.