ತಿಪಟೂರು: ಪ್ರೊಫೆಸರ್ ಬಿ.ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಐವತ್ತು ವರ್ಷಗಳನ್ನು ಪೂರೈಸಿರುವ ಅಂಗವಾಗಿ ಸುವರ್ಣ ಮಹೋತ್ಸವ ಸಮಾರಂಭವನ್ನು ತುಮಕೂರಿನ ಎಂಪ್ರೆಸ್ ಆಡಿಟೋರಿಯಂನಲ್ಲಿ ಫೆ.18 ರ ಭಾನುವಾರ ಬೆಳಗ್ಗೆ 10.30ಕ್ಕೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸಂಘಟನಾ ಸಂಚಾಲಕ ನಾಗತೀಹಳ್ಳಿ ಕೃಷ್ಣಮೂರ್ತಿ ತಿಳಿಸಿದರು.
ತಾಲೂಕು ಸಂಚಾಲಕ ಜಕ್ಕನಹಳ್ಳಿ ಮೋಹನ್ ಮಾತನಾಡಿ, ದಲಿತ ಸಂಘರ್ಷ ಸಮಿತಿ ಐವತ್ತು ವರ್ಷಗಳನ್ನು ಪೂರೈಸಿರುವುದರಿಂದ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮ ರೂಪಿಸಬೇಕೆಂದು ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ನಮಗೆ ಕರೆ ನೀಡಿದ್ದು, ಅದರಂತೆ ನಾವು ತಾಲೂಕಿನ ಎಲ್ಲಾ ಹಳ್ಳಿಗಳಿಗೂ ಭೇಟಿ ನೀಡಿ ಗ್ರಾಮ ಶಾಖೆ, ಹೋಬಳಿ ಶಾಖೆ ಮಾಡಿ ಬಲಿಷ್ಠವಾದ ಸಂಘಟನೆ ಕಟ್ಟುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಸಂಘಟನೆಯಲ್ಲಿ ತೊಡಗಿಕೊಳ್ಳುತ್ತಿದ್ದು ಸಂಘಟನೆಗೆ ಶಕ್ತಿ ತುಂಬಿದೆ. ರಾಜ್ಯದಲ್ಲಿ ನಮ್ಮ ತಾಲೂಕು ಸಂಘಟನೆ ಮಾದರಿಯಾಗಿ ಹೊರ ಹೊಮ್ಮಲಿದೆ ಎಂದು ಹೇಳಿದರು.
ಮಹಿಳಾ ಘಟಕದ ಸಂಘಟನಾ ಸಂಚಾಲಕಿ ನಂದಿನಿ ಮಾತನಾಡಿ, ತಾಲ್ಲೂಕು ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಮಹಿಳೆಯರು ಸಂಘಟನೆಯಲಿ ತೊಡಗಿಕೊಳ್ಳಲು ಪ್ರೋತ್ಸಾಹ ಹಾಗೂ ಸಹಕಾರ ನೀಡುತ್ತಿದೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ದಸಂಸ ಪದಾಧಿಕಾರಿಗಳಾದ ಉಗ್ರನರಸಿಂಹಯ್ಯ, ರಮೇಶ್ ಮಾರನಗೆರೆ, ಧನಲಕ್ಷ್ಮೀ ಕೊನೆಹಳ್ಳಿ, ಅಣ್ಣಪ್ಪಸ್ವಾಮಿ, ಮಂಜುನಾಥ್, ಕಲ್ಲೇಶ್ ಮಾರನಗೆರೆ ಮತ್ತಿತರರಿದ್ದರು.