ಬಳ್ಳಾರಿ: ಜಿಲ್ಲೆಯಲ್ಲಿ ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ 15,652 ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಗೆ 23,271 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಬಾರಿ ಬಳ್ಳಾರಿ ಜಿಲ್ಲೆ ಉತ್ತಮ ಫಲಿತಾಂಶದ ನಿರೀಕ್ಷೆ ಹೊಂದಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ತಿಳಿಸಿದರು.
ದ್ವಿತೀಯ ಪಿಯುಸಿ:ದ್ವಿತೀಯ ಪಿಯುಸಿ ಪರೀಕ್ಷೆ-1 ಇದೇ ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 15,652 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಇವರಲ್ಲಿ 13,286 ಹೊಸ ಅಭ್ಯರ್ಥಿಗಳು (ಹುಡುಗ-5580 ಮತ್ತು ಹುಡುಗಿಯರು-7706), 1899 ಮರು ಪರೀಕ್ಷಾರ್ಥಿಗಳು, 467 ಖಾಸಗಿ ಅಭ್ಯರ್ಥಿಗಳು ಒಳಗೊಂಡಿದ್ದಾರೆ. ಬಳ್ಳಾರಿ ನಗರ-12, ಸಿರುಗುಪ್ಪ-03, ಸಂಡೂರು-02, ಕಂಪ್ಲಿ-02 ಮತ್ತು ಕುರುಗೋಡು-01 ಸೇರಿದಂತೆ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ ಎಂದು ಹೇಳಿದರು.
ಅದೇ ರೀತಿ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿವೆ. ಜಿಲ್ಲೆಯಲ್ಲಿ ಒಟ್ಟು 326 ಹತ್ತನೆಯ ಶಾಲೆಗಳಿಂದ ಒಟ್ಟು 23,271 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಇವರಲ್ಲಿ 19,722 ಹೊಸ ಅಭ್ಯರ್ಥಿಗಳು, 2,009 ಮರು ಪರೀಕ್ಷಾರ್ಥಿಗಳು, 1,328 ಖಾಸಗಿ ಅಭ್ಯರ್ಥಿಗಳು, 212 ಖಾಸಗಿ ಮರು ಪರೀಕ್ಷಾರ್ಥಿಗಳು ಒಳಗೊಂಡಿದ್ದಾರೆ. ಒಟ್ಟು ಜಿಲ್ಲೆಯ 65 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿವೆ ಎಂದು ತಿಳಿಸಿದರು.ವಿದ್ಯಾರ್ಥಿಗಳಿಗೆ ಸ್ನೇಹಮಯಿ ವಾತಾವರಣ:
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಅಧಿಕಾರಿಯನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಹಿತದೃಷ್ಟಿಯಿಂದ ಜಿಲ್ಲಾಡಳಿತ ವತಿಯಿಂದ ಸ್ನೇಹಮಹಿ ವಾತಾವರಣ ಕಲ್ಪಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಕೆಕೆಆರ್ಟಿಸಿ ಮತ್ತು ನಗರ ಸಾರಿಗೆ ಬಸ್ಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಮತ್ತು ಹಿಂದಿರುಗಲು ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು.ಪರೀಕ್ಷಾ ಅವಧಿಯಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಸುಲಭವಾಗಿ ಹೋಗಲು ಕೆಕೆಆರ್ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಪ್ರಯಾಣಿಸಬಹುದಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಗಾಳಿ, ಬೆಳಕು, ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿರುವಂತೆ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಿಗೆ ಸೂಚಿಸಲಾಗಿದೆ ಎಂದರು.
ಎಸ್ಪಿ ಡಾ.ಸುಮನ್ ಡಿ.ಪೆನ್ನೇಕರ್ ಮಾತನಾಡಿ, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತದೆ. ಈ ವ್ಯಾಪ್ತಿಯ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಮುಚ್ಚಬೇಕು. ಪ್ರಶ್ನೆಪತ್ರಿಕೆ ಸೋರಿಕೆ, ತಪ್ಪು ಮಾಹಿತಿ ತಡೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ನಿಗಾವಹಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಸುಳ್ಳು ಪ್ರಚಾರ ಮಾಡುವ ಖಾತೆನ್ನು ಗುರುತಿಸಿ ತಡೆದು ಕಾನೂನು ಕ್ರಮ ಕೈಗೊಳ್ಳಲಾಗುವುದು. ಪರೀಕ್ಷೆಗಳು ಸುರಕ್ಷಿತವಾಗಿ ನಡೆಯಲು ಎಲ್ಲರ ಸಹಕಾರ ಅಗತ್ಯ ಎಂದರು.ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಮಾತನಾಡಿ, ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಮೂಲಕ ಕಣ್ಗಾವಲು ಇಡಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಒಳಗಡೆ, ಹೊರಗಡೆ, ಪ್ರಾಚಾರ್ಯರ ಕೊಠಡಿಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುತ್ತದೆ ಎಂದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಸುದ್ದಿಗೋಷ್ಠಿಯಲ್ಲಿದ್ದರು.