ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ, ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಇಲಾಖೆಯಿಂದ ನೀಡಲಾಗುವ ನಿರ್ದೇಶನ ಮತ್ತು ಮಾರ್ಗದರ್ಶನಗಳನ್ನು ಸರಿಯಾಗಿ ಪಾಲನೆ ಮಾಡಿದರೆ ಉತ್ತಮ ಫಲಿತಾಂಶ ಪಡೆಯಬಹುದಾಗಿದೆ ಎಂದು ಚಿಕ್ಕಮಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಕೆ.ಮಂಜುಳಾ ಹೇಳಿದರು.
ಶುಕ್ರವಾರ ನಗರದ ಟೌನ್ ಮಹಿಳಾ ಸಮಾಜದ ಎಂ.ಎಲ್.ವಿರೋಟರಿ ಹಾಲ್ನಲ್ಲಿ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಹಮ್ಮಿಕೊಂಡಿದ್ದ ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿ ರಾಜ್ಯದ ಶಿಕ್ಷಣ ಇಲಾಖೆ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸುಧಾರಣೆ ತರುವ ನಿಟ್ಟಿನಲ್ಲಿ ಅನೇಕ ನಿರ್ದೇಶನಗಳನ್ನು ಕಾಲ ಕಾಲಕ್ಕೆ ನೀಡುತ್ತಿದ್ದು, ಪ್ರಾಂಶು ಪಾಲರು ಮತ್ತು ಉಪನ್ಯಾಸಕರು ನಿರ್ದೇಶನ ಪಾಲಿಸುವುದರಿಂದ ಕಾಲೇಜಿನಲ್ಲಿ ಉತ್ತಮ ಫಲಿತಾಂಶ ಪಡೆಯಬಹುದು. ಈ ನಿಟ್ಟಿನಲ್ಲಿ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದರು.ರಾಜ್ಯ ಶಿಕ್ಷಣ ಇಲಾಖೆ ಹಾಜರಾತಿ ವಿಚಾರದಲ್ಲಿ ಗಮನಾರ್ಹ ಬದಲಾವಣೆ ತಂದಿದ್ದು, ಕಾಮ್ಸ್, ನಿರಂತರ, ಸ್ಯಾಟ್ಸ್ ಪದ್ಧತಿ ಜಾರಿಗೊಳಿಸಿದೆ. ಕರ್ತವ್ಯಕ್ಷೇತ್ರದಲ್ಲಿ ನಿಷ್ಟೆ ಮತ್ತು ಪ್ರಾಮಾಣಿಕತೆ ತೋರಲು ಅನುಕೂಲವಾಗುತ್ತದೆಎಂದು ಹೇಳಿದರು.
ಇದೇ ವೇಳೆ ನಿವೃತ್ತರಾದ ಪ್ರಾಂಶುಪಾಲರಿಗೆ ಸನ್ಮಾನಿಸಲಾಯಿತು. ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಂಘದ ಕಾರ್ಯದರ್ಶಿ ಜಿ.ಬಿ.ವಿರೂಪಾಕ್ಷ, ಖಜಾಂಚಿ ಎಂ.ಎಲ್.ಸೋಮಶೇಖರ್, ರಾಜ್ಯ ಪ್ರಾಂಶುಪಾಲರ ಸಂಘದಜಿಲ್ಲಾ ಪ್ರತಿನಿಧಿ ಡಾ.ಎಸ್.ಎಸ್.ತವರಾಜ್, ಪ್ರಾಂಶುಪಾಲ ಮಂಜುನಾಥ್ ಇದ್ದರು.