ಗದಗ: ವಿದ್ಯಾರ್ಥಿಗಳು ಸ್ಪಷ್ಟ ಓದು , ಶುದ್ಧ ಬರಹದಿಂದ ಜ್ಞಾನದ ಹರಿವು ವೃದ್ಧಿಸುತ್ತದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಓದುವ ಹಾಗೂ ಬರೆಯುವ ಕೌಶಲ್ಯ ಪ್ರೋತ್ಸಾಹಿಸಲು ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಪ್ರೋತ್ಸಾಹದಾಯಕವಾಗಿ ಬರವಣಿಗೆಯ ಸಾಮಗ್ರಿ ವಿತರಿಸಲಾಗುತ್ತಿದೆ. ಮಕ್ಕಳು ಇವುಗಳ ಸದುಪಯೋಗಪಡಿಸಿಕೊಳ್ಳಬೇಕೆಂದು ಲಯನ್ಸ್ ಕ್ಲಬ್ನ ಕಾರ್ಯದರ್ಶಿ ರಾಜಣ್ಣ ಮಲ್ಲಾಡದ ಹೇಳಿದರು.
ಕ್ಲಬ್ನ ಖಜಾಂಚಿ ರೇಣುಕಾಪ್ರಸಾದ ಹಿರೇಮಠ ಮಾತನಾಡಿ, ಪ್ರತಿಭಾನ್ವಿತ ಸಾಧಕರು ಸರ್ಕಾರಿ ಶಾಲೆಗಳಲ್ಲಿಯೇ ಓದಿದವರಾಗಿದ್ದಾರೆ, ಸರ್ಕಾರ ನೀಡುವ ಉಚಿತ ಸೌಲಭ್ಯಗಳೊಂದಿಗೆ ಸಂಘ-ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಪ್ರೋತ್ಸಾಹ ನೀಡಬೇಕು ಎಂದರು.
ಲಯನ್ಸ್ ಕ್ಲಬ್ನ ಅಧ್ಯಕ್ಷ ರಾಜು ವೇರ್ಣೇಕರ ಮಾತನಾಡಿ, ಮಕ್ಕಳು ಬಾಲ್ಯದಲ್ಲಿಯೇ ಉತ್ತಮ ಹವ್ಯಾಸ, ಮೌಲ್ಯ ಅಳವಡಿಸಿಕೊಳ್ಳಬೇಕು. ಪ್ರತಿದಿನ ಶಾಲೆಗೆ ಬರುವುದು, ಉತ್ತಮ ಓದು-ಬರಹ ರೂಢಿಸಿಕೊಳ್ಳುವುದು ಒಳ್ಳೆಯ ಹವ್ಯಾಸಗಳು. ನಿರಂತರ ಓದಿನಿಂದ ಜೀವನದಲ್ಲಿ ಯಶಸ್ಸು ಸಾಧಿಸಬಹುದು, ಮಕ್ಕಳು ಸಾಧಕರನ್ನು ಮಾದರಿಯಾಗಿಟ್ಟುಕೊಂಡು ಆದರ್ಶಮಯವಾದ ಬದುಕು ರೂಪಿಸಿಕೊಳ್ಳಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯಿನಿ ಎನ್.ಎನ್. ತಹಸೀಲ್ದಾರ್ ಮಾತನಾಡಿ, ಸಂಘ-ಸಂಸ್ಥೆಗಳು ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳ ಜ್ಞಾನಾರ್ಜನೆಗೆ ಸಹಾಯ ನೀಡುತ್ತಿರುವುದು ಅಭಿನಂದಾರ್ಹ. ಸರ್ಕಾರಿ ಶಾಲೆಗಳು ಮಕ್ಕಳಲ್ಲಿ ಜ್ಞಾನದ ಅರಿವನ್ನು ಮೂಡಿಸಿ ಅವರನ್ನು ಉತ್ತಮ ವ್ಯಕ್ತಿಗಳಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಗಾಳೆಮ್ಮ ಕುರ್ತಕೋಟಿ, ಭೂಮಿಕಾ ಶಿರಹಟ್ಟಿ ಪ್ರಾರ್ಥಿಸಿದರು. ರಮೇಶ ಶಿಗ್ಲಿ ಸ್ವಾಗತಿಸಿದರು. ಸುನಂದಾ ಇದ್ಲಿ ಪರಿಚಯಿಸಿದರು. ಸಂಪನ್ಮೂಲ ವ್ಯಕ್ತಿ ಕೆ.ಎಸ್. ಬೇಲೇರಿ ನಿರೂಪಿಸಿದರು. ಖಜಾಂಚಿ ಸಹನಾ ಹಿರೇಮಠ ವಂದಿಸಿದರು.