ಕನ್ನಡಪ್ರಭ ವಾರ್ತೆ ಮಡಿಕೇರಿಶನಿವಾರಸಂತೆಯಲ್ಲಿ ನಿರ್ಮಾಣಗೊಂಡಿರುವ ನೂತನ ಸುಸಜ್ಜಿತ ಬಸ್ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮ ಫೆ.7ರಂದು ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ತಿಳಿಸಿದರು.ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1. 05 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಬಸ್ ನಿಲ್ದಾಣ ಆ ಭಾಗದ ಜನರ ನಾಲ್ಕು ದಶಕದ ಕನಸನ್ನು ಶಾಸಕರು ನನಸಾಗಿಸಿದ್ದಾರೆ ಎಂದರು.ಅಪ್ರತಿಮ ಸೇನಾನಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ನವರ ಜನ್ಮಭೂಮಿ ಶನಿವಾರಸಂತೆಯ ಮೂಲಕ 70ಕ್ಕೂ ಹೆಚ್ಚು ಬಸ್ ಪ್ರತಿನಿತ್ಯ ಓಡಾಡುತ್ತಿದ್ದು, ಇಲ್ಲಿ ಬಸ್ ನಿಲ್ದಾಣವಿರಲಿಲ್ಲ. 2023ರ ವಿಧಾನ ಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಹಿರಿಯರೊಬ್ಬರು ಬಸ್ ನಿಲ್ದಾಣದ ಬಗ್ಗೆ ಡಾ.ಮಂತರ್ ಗೌಡ ರವರ ಬಳಿ ಬೇಡಿಕೆ ಇಟ್ಟಿದ್ದರು. ನಂತರ ಶಾಸಕರಾಗಿ ಆ ಬೇಡಿಕೆ ಈಡೇರಿಸುವ ಮೂಲಕ ಡಾ.ಮಂತರ್ ಗೌಡ ನುಡಿದಂತೆ ನಡೆದಿದ್ದಾರೆ ಎಂದು ಶ್ಲಾಘಿಸಿದರು.ಕೊಡಗು ಜಿಲ್ಲಾಡಳಿತ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಶನಿವಾರಸಂತೆ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಫೆ.7ರ 11.30 ಗಂಟೆಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಉಪಸ್ಥಿತಿಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜ್ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ಶಾಸಕ ಡಾ.ಮಂತರ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್, ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಒಡೆಯರ್, ರಾಜ್ಯ ಸಭಾ ಸದಸ್ಯ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಬೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ರಾಜ್ಯ ರಸ್ತೆಸಾರಿಗೆ ನಿಗಮದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್, ಗ್ಯಾರೆಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ, ಗ್ಯಾರೆಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಜಿ.ಎಂ.ಕಾಂತರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ಮಡಿಕೇರಿ ಕಸವಿಲೇವಾರಿ ಸಮಸ್ಯೆ ಬಗ್ಗೆ ಶಾಸಕರು ಮಾಹಿತಿ ಪಡೆದ ತಕ್ಷಣವೇ ಸಮಸ್ಯೆ ಇತ್ಯರ್ಥ ಪಡಿಸಿದ್ದಾರೆ ಎಂದು ವಿವರಣೆ ನೀಡಿದರು.ಸುದ್ದಿಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷೆ ಶಶಿ, ನಗರ ಸಭಾ ಸದಸ್ಯರಾದ ಮಂಡಿರ ಸದಾ ಮುದ್ದಪ್ಪ, ಜಿ.ಸಿ.ಜಗದೀಶ್ ಉಪಸ್ಥಿತರಿದ್ದರು.