ಚಿಕ್ಕಮಗಳೂರು ಕ್ಷೇತ್ರದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ ವೆಲ್ ಕೊರೆಸುವ ಕಾರ್ಯಕ್ಕೆ ಚಾಲನೆ
ಶೋಷಿತ ವರ್ಗದವರು ಸೇರಿದಂತೆ ಎಲ್ಲಾ ಜಾತಿ, ಜನಾಂಗದ ಬಡವರು ಸಮಾಜದ ಮುನ್ನಲೆಗೆ ಬರಬೇಕೆಂಬ ಉದ್ದೇಶದಿಂದ ರಾಜ್ಯಸರ್ಕಾರ ಗಂಗಾ ಕಲ್ಯಾಣಯೋಜನೆಯನ್ನು ಅನುಷ್ಠಾನಗೊಳಿಸಿ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಹಳೇ ಲಕ್ಯಾ ಗ್ರಾಮದಲ್ಲಿ 2023-24 ಮತ್ತು 2024-25 ನೇ ಸಾಲಿನ ಒಟ್ಟು 47 ಫಲಾನುಭವಿಗಳ ಭೂಮಿಯಲ್ಲಿ ಗಂಗಾ ಕಲ್ಯಾಣ ಕಾರ್ಯಕ್ರಮದಡಿ ಬೋರ್ವೆಲ್ ಕೊರೆಯಲು ಬುಧವಾರ ಚಾಲನೆ ನೀಡಿ ಮಾತನಾಡಿದರು. ಹಿಂದೆ ಗಂಗಾ ಕಲ್ಯಾಣ ಯೋಜನೆಯಡಿ ಪ್ರತಿ ಫಲಾನುಭವಿಗೆ ₹2.50 ಲಕ್ಷ ನೀಡುತ್ತಿದ್ದು, ಕೊಳವೆ ಬಾವಿಗೆ ಸಂಬಂಧಿಸಿದ ಎಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗಿರುವುದರಿಂದ ರಾಜ್ಯ ಸರ್ಕಾರ ಇದನ್ನು ಮನಗಂಡು ₹3.75 ಲಕ್ಷಕ್ಕೆ ಹೆಚ್ಚಿಸಿದೆ ಎಂದ ಅವರು, ಫಲಾನು ಭವಿಗಳು ಗಂಗಾ ಕಲ್ಯಾಣ ಯೋಜನೆ ಸದುಪಯೋಗ ಪಡೆದುಕೊಂಡು ಉತ್ತಮ ಬೆಳೆ ಬೆಳೆಯುವ ಮೂಲಕ ಆರ್ಥಿಕವಾಗಿ ಸದೃಢರಾಗುವ ಜೊತೆಗೆ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕೆಂದು ಮನವಿ ಮಾಡಿದರು.ರಾಜ್ಯ ಸರ್ಕಾರ ಶಿಕ್ಷಣ, ಆರೋಗ್ಯ, ಬಡವರಿಗೆ ಬದುಕುಕಟ್ಟಿ ಕೊಡಲು ಬದ್ಧವಾಗಿದೆ. ಇದಕ್ಕೆ ವಿದ್ಯಾರ್ಥಿ ಪೋಷಕರು ಹೆಚ್ಚು ಒತ್ತು ನೀಡಿ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದಾಗ ಸರ್ಕಾರದ ಯೋಜನೆ ಫಲಪ್ರದವಾಗುತ್ತದೆ ಎಂದು ಹೇಳಿದರು.ಮುಂದಿನ ದಿನಗಳಲ್ಲಿ ಸರ್ಕಾರದ ಮೇಲೆ ಒತ್ತಡ ಹಾಕಿ ಹೆಚ್ಚು ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆ ಸೌಲಭ್ಯ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ತಹಸೀಲ್ದಾರ್ ರೇಷ್ಮಾ ಶೆಟ್ಟಿ ಮಾತನಾಡಿ, ಕಂದಾಯ ಇಲಾಖೆಗೆ ಸಂಬಂಧಿಸಿದ ಬಗರ್ ಹುಕ್ಕುಂ, 1- 5 ಸೇರಿದಂತೆ ಎಲ್ಲಾ ರೀತಿಯ ಯೋಜನೆಗಳನ್ನು ಲ್ಯಾಪ್ಟಾಪ್ನಲ್ಲಿ ದಾಖಲು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್ (ಗ್ರೇಡ್ - 2) ರಾಮ್ ರಾವ್ ದೇಸಾಯಿ, ಶಿರಸ್ತೇದಾರ್ ಪ್ರಸನ್ನ, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಹಾಜರಿದ್ದರು.4 ಕೆಸಿಕೆಎಂ 5ಗಂಗಾ ಕಲ್ಯಾಣ ಯೋಜನೆಯಡಿ ರೈತರ ಜಮೀನಿನಲ್ಲಿ ಬೋರ್ ವೆಲ್ ಕೊರೆಸುವ ಕಾರ್ಯಕ್ಕೆ ಹಳೇ ಲಕ್ಯಾ ಗ್ರಾಮದಲ್ಲಿ ಶಾಸಕ ಎಚ್.ಡಿ. ತಮ್ಮಯ್ಯ ಬುಧವಾರ ಚಾಲನೆ ನೀಡಿದರು.