ಕನ್ನಡಪ್ರಭ ವಾರ್ತೆ ಕುಶಾಲನಗರ
ಸೂರಿಲ್ಲದ ಜನರಿಗೆ ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಜೀವ್ ಗಾಂಧಿ ವಸತಿ ನಿಗಮ, ಕುಶಾಲನಗರ ತಾಲೂಕು ಪಂಚಾಯಿತಿ ವತಿಯಿಂದ ಕುಶಾಲನಗರದ ಗೌಡ ಸಮಾಜದ ಸಭಾಂಗಣದಲ್ಲಿ ಏರ್ಪಡಿಸಿದ್ದ 2022-23ನೇ ಸಾಲಿನ ಬಸವ ವಸತಿ ಯೋಜನೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಆವಾಜ್ ಯೋಜನೆಯ ಸೂರಿಲ್ಲದ ಜನರಿಗೆ ವಸತಿ ಸೌಕರ್ಯ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ವಸತಿ ಯೋಜನೆಗೆ ಒದಗಿಸುತ್ತಿರುವ ಅನುದಾನ ಮೊತ್ತ ತುಂಬಾ ಕಡಿಮೆ ಇದೆ. ಇದರಿಂದ ಉತ್ತಮವಾದ ಮನೆ ನಿರ್ಮಿಸಿಕೊಳ್ಳಲು ಫಲಾನುಭವಿಗಳಿಗೆ ಕಷ್ಟ ಸಾಧ್ಯ. ಆದ್ದರಿಂದ ವಸತಿ ಯೋಜನೆಗೆ ನೀಡುತ್ತಿರುವ ಅನುದಾನವನ್ನು ಹೆಚ್ಚಿಸಲು ಸರ್ಕಾರಕ್ಕೆ ಒತ್ತಡ ಹೇರಲಾಗುವುದು. ಫಲಾನುಭವಿಗಳ ಯಾವುದೇ ಬೇಡಿಕೆಗಳಿಗೆ ಮಣಿಯದೆ ಸರ್ಕಾರದ ಯೋಜನೆ ಪಡೆದುಕೊಳ್ಳುವಂತಾಗಬೇಕಿದೆ. ಜಾತ್ಯತೀತವಾಗಿ, ಪಕ್ಷಾತೀತವಾಗಿ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದರು.ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಶಾಸಕರಾಗಿ ಆಯ್ಕೆಯಾದ ಒಂದೇ ವರ್ಷದಲ್ಲಿ ಡಾ.ಮಂತರ್ ಗೌಡ ಅವರು ಅನೇಕ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕು ಆಸ್ಪತ್ರೆ ಅಭಿವೃದ್ಧಿ, ಕಲಾಭವನ, ಕೆಎಸ್ಆರ್ಟಿಸಿ ಡಿಪ್ಪೋ, ಇಂದಿರಾ ಕ್ಯಾಂಟೀನ್, 24*7 ಕುಡಿಯುವ ನೀರಿನ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಶಾಸಕರು ಹೊಣೆಗಾರಿಕೆಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುತುವರ್ಜಿವಹಿಸಿ ಅನುದಾನ ಒದಗಿಸುತ್ತಿದ್ದಾರೆ. ನನೆಗುದಿಗೆ ಬಿದ್ದ ಯೋಜನೆಗಳಿಗೆ ಕಾಯಕಲ್ಪ ಒದಗಿಸುತ್ತಿದ್ದಾರೆ. ಮಡಿಕೇರಿ ಕ್ಷೇತ್ರಕ್ಕೆ ವಸತಿ ಯೋಜನೆಯಡಿ ಒಂದು ಸಾವಿರ ಮನೆಗಳನ್ನು ತಂದ ಕೀರ್ತಿ ಶಾಸಕರದ್ದಾಗಿದೆ ಎಂದು ಶ್ಲಾಘಿಸಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಪ್ರದೇಶದ ಬಡವರಿಗೆ, ಆರ್ಥಿಕ, ಸಾಮಾಜಿಕ ಹಿಂದುಳಿದ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ ಎಂದರು.ಹಿಂದುಳಿದ ಇತರೆ ಸಮುದಾಯದ 119 ಮಂದಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ 51 ಮಂದಿಗೆ ವಸತಿ ಸೌಕರ್ಯ ಕಲ್ಪಿಸಲು ಅನುಮೋದನೆಗೊಂಡಿವೆ. ಒಟ್ಟಿಗೆ ತಾಲೂಕಿನ 170 ಮಂದಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಆದೇಶ ಪತ್ರ ವಿತರಿಸಲಾಗುತ್ತಿದೆ ಎಂದು ಹೇಳಿದರು.
ಅಂಬೇಡ್ಕರ್ ಆವಾಜ್ ಯೋಜನೆಯಡಿ 2 ಲಕ್ಷ ಹಾಗೂ ಬಸವ ವಸತಿ ಯೋಜನೆಯಡಿ 1.30 ಲಕ್ಷ ರು. ನೀಡಲಾಗುತ್ತಿದೆ. ಈ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಉತ್ತಮ ಮನೆ ನಿರ್ಮಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮೀ ಚಂದ್ರು, ಕೆಡಿಪಿ ಸದಸ್ಯೆ ಸುನೀತಾ ಮಂಜುನಾಥ್, ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ನಂಜರಾಯಪಟ್ಟಣ ಗ್ರಾ.ಪಂ. ಅಧ್ಯಕ್ಷ ಸಿ.ಎಲ್.ವಿಶ್ವ, ಹೆಬ್ಬಾಲೆ ಗ್ರಾ.ಪಂ. ಅಧ್ಯಕ್ಷೆ ಅರುಣಾಕುಮಾರಿ, ಚೆಟ್ಟಳ್ಳಿ ಅಧ್ಯಕ್ಷೆ ಸಿಂಧೂ, ಕಂಬಿಬಾಣೆ ಅಧ್ಯಕ್ಷೆ ರಾಧಾ, ಕೆದಕಲ್ ಅಧ್ಯಕ್ಷೆ ಪುಷ್ಪಾ, ನಾಕೂರು ಶಿರಂಗಾಲ ಅಧ್ಯಕ್ಷ ಜಗನ್ನಾಥ್, ಶಿರಂಗಾಲ ಅಧ್ಯಕ್ಷೆ ಲತಾಬಾಯಿ, ವಾಲ್ನೂರು-ತ್ಯಾಗತ್ತೂರು ಅಧ್ಯಕ್ಷೆ ಮಂಜುಳಾ, ನೆಲ್ಲಿಹುದಿಕೇರಿ ಅಧ್ಯಕ್ಷೆ ಧನಲಕ್ಷ್ಮಿ, 7ನೇ ಹೊಸಕೋಟೆ ಉಪಾಧ್ಯಕ್ಷೆ ಸೌಮ್ಯ ವೇದಿಕೆಯಲ್ಲಿದ್ದರು.
ಆಯಾ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು. ಕೂಡುಮಂಗಳೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ಸಂತೋಷ್ ಸ್ವಾಗತಿಸಿದರು.