ಭಟ್ಕಳ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಸ್ಥಳೀಯ ಘಟಕ, ಕಸ್ತೂರಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ಶಿಬಿರವನ್ನು ತಹಸೀಲ್ದಾರ್ ನಾಗರಾಜ ನಾಯ್ಕಡ ಉದ್ಘಾಟಿಸಿದರು.
ಅಧ್ಯಕ್ಷತೆ ವಹಿಸಿದ್ದ ನೌಕರರ ಸಂಘದ ಅಧ್ಯಕ್ಷ ಮೋಹನ ನಾಯ್ಕ ಮಾತನಾಡಿ, ಸರ್ಕಾರಿ ನೌಕರರಿಗಾಗಿ ಸಾಂಸ್ಕೃತಿಕ ಸ್ಪರ್ಧೆಗಳು, ಕ್ರೀಡೆ, ಹೊನಲು ಬೆಳಕಿನ ವಾಲಿಬಾಲ್, ಪ್ರತಿಭಾ ಪುರಸ್ಕಾರ, ಅಶಕ್ತರಿಗೆ ಧನಸಹಾಯ ಹೀಗೆ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಿದ್ದ ಸಂಘ ಇಂದು ಸರ್ಕಾರಿ ನೌಕರರಿಗೆ ಅತ್ಯಂತ ಅವಶ್ಯಕವಾಗಿ ಬೇಕಾಗಿದ್ದ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಿದೆ ಎಂದರು.ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ, ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ ಪ್ರಾಂಶುಪಾಲ ವೀರೇಂದ್ರ ಶಾನಭಾಗ, ಡಾ. ಕವಿಶಾ ಮಾತನಾಡಿದರು.
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಖಜಾಂಚಿ ಕುಮಾರ ನಾಯ್ಕ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಜಿ. ಹೆಗಡೆ ಉಪಸ್ಥಿತರಿದ್ದರು. ರಾಜ್ಯ ಪರಿಷತ್ ಸದಸ್ಯ ಪ್ರಕಾಶ ಶಿರಾಲಿ ಸ್ವಾಗತಿಸಿದರು. ಕಾರ್ಯದರ್ಶಿ ಗಣೇಶ ಹೆಗಡೆ ವಂದಿಸಿದರು. ಶಿಕ್ಷಕ ಪರಮೇಶ್ವರ ನಾಯ್ಕ ನಿರೂಪಿಸಿದರು. ಶಿಕ್ಷಕಿ ಕುಸುಮಾ ಪ್ರಾರ್ಥಿಸಿದರು. ನೂರಾರು ನೌಕರರು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಶಿಬಿರದಲ್ಲಿ ಹೃದ್ರೋಗ, ಮೂಳೆ ಮತ್ತು ಕೀಲು, ಸಾಮಾನ್ಯ ಚಿಕಿತ್ಸೆ, ಸ್ತ್ರೀ ರೋಗ, ಕಣ್ಣು, ಚರ್ಮರೋಗದ ಚಿಕಿತ್ಸೆಯನ್ನು ನೀಡಿದರು.