ಕನ್ನಡಪ್ರಭ ವಾರ್ತೆ ಕೋಲಾರ
ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಹಳೆ ಕಟ್ಟಡ ತೆರವುಗೊಳಿಸಿ ಸುಸಜ್ಜಿತ ಹೊಸ ಕಟ್ಟಡ ನಿರ್ಮಿಸಲು ಸರ್ಕಾರದಿಂದ ಸುಮಾರು ೨೨.೫೦ ಕೋಟಿ ರು. ಅನುದಾನ ಬಿಡುಗಡೆಯಾಗಿದ್ದು, ಕೂಡಲೇ ಕಾಮಗಾರಿ ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೪- ೨೫ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಹಾಗೂ ಸ್ಮರಣೆ ಸಂಚಿಕೆ ಬಿಡುಗಡೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದಿಂದ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ರವರೊಂದಿಗಿನ ಮಾತುಕತೆಯ ಫಲವಾಗಿ ಮುಂದಿನ ದಿನಗಳಲ್ಲಿ ಎರಡೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ ೪೦ ಕೋಟಿ ರು. ಹಾಗೂ ಕಾನೂನು ಕಾಲೇಜಿಗೆ ೪.೫೦ ಕೋಟಿ ರು. ಬಿಡುಗಡೆಗೂ ಒಪ್ಪಿಗೆ ನೀಡಿದ್ದು, ಈ ವರ್ಷದಿಂದಲೇ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.ಕೋಲಾರ ಜಿಲ್ಲೆಯ ಮಣ್ಣಿನ ಗುಣದಿಂದಲೇ ಅನೇಕ ಬುದ್ಧಿವಂತರು ಇಂದು ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಜಿಲ್ಲೆಯಿಂದ ಕೆಎಎಸ್, ಐಎಎಸ್ ಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಆಯ್ಕೆ ಆಗುತ್ತಿರುವುದು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಾಧಕರಾಗಿ ಹುಟ್ಟಿಕೊಂಡಿರುವುದು ಈ ಮಣ್ಣಿನ ಗುಣವನ್ನು ತೋರಿಸುತ್ತದೆ ಎಂದು ತಿಳಿಸಿದರು.
ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಮಾತನಾಡಿ, ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತಿದೆ, ವಿಶೇಷವಾಗಿ ವಿದ್ಯಾರ್ಥಿನಿಯರು ಗ್ರಾಮೀಣ ಪ್ರದೇಶಗಳಿಂದ ಬಂದು ಆಸಕ್ತಿಯಿಂದ ಅಧ್ಯಯನ ನಡೆಸಿ, ತಮ್ಮ ಮುಂದಿನ ಬದುಕನ್ನು ಹಸನುಗೊಳಿಸಿಕೊಳ್ಳಬೇಕು. ಈ ಕಾಲೇಜಿನಲ್ಲಿ ಓದಿದ ಬಹುತೇಕರು ಸಾಧಕ ರಾಗಿದ್ದಾರೆ. ಈ ಪರಂಪರೆ ಮುಂದುವರಿಯಬೇಕು, ಹೆಣ್ಣುಮಕ್ಕಳು ಮದುವೆಗೆ ಸೀಮಿತವಾಗದೇ ಶಿಕ್ಷಣಕ್ಕೆ ಆಧ್ಯತೆ ನೀಡುವಂತೆ ಎಂದು ಆಶಿಸಿದರು.ಮಹಾರಾಣಿ ಕಾಲೇಜಿನ ಕನ್ನಡ ಭಾಷಾ ವಿಭಾಗದ ಮುಖ್ಯಸ್ಥೆ ಡಾ.ಎಂ.ಎಸ್.ಆಶಾದೇವಿ ಮಾತನಾಡಿ, ಇವತ್ತು ಶಿಕ್ಷಣದಿಂದ ಮಹಿಳೆಯರ ಸ್ಥಿತಿಗತಿಗಳನ್ನು ತಿಳಿಯಲು ಸಾಧ್ಯವಾಗಿದೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂದುವರಿಯಲು ಶಿಕ್ಷಣ ಕಾರಣವಾಗಿದೆ. ಮಹಿಳೆಯರಿಗೆ ಕಣ್ಮುಂದೆ ಹಲವು ಅವಕಾಶಗಳು ಇವೆ, ಸದುಪಯೋಗಪಡಿಸಿಕೊಳ್ಳುವ ಮೂಲಕ ಸಾಧಕರಾಗಬೇಕಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ. ಶಿವಕುಮಾರ್, ಕಾಲೇಜಿನ ಪ್ರಾಂಶುಪಾಲ ಗಂಗಾಧರ್ ರಾವ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯರಾದ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಅಹಮದ್, ಜೈದೀಪ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಕೆ.ರಘುಕುಮಾರ್, ಮಹಮ್ಮದ್ ಅಲ್ಲಾವುದ್ದೀನ್ ಮನ್ಸೂರ್, ಷೇಕ್ ಜಮೀರ್ ಅಹಮದ್, ವಿಜಯನಗರ ಮಂಜುನಾಥ್, ಪೂರ್ಣಿಮಾ, ವೆಂಕಟಸ್ವಾಮಿ ಇದ್ದರು.