ಕನ್ನಡಪ್ರಭ ವಾರ್ತೆ ಹಾನಗಲ್ಲ
ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸದ್ಭಳಕೆ ಮಾಡಿಕೊಂಡು ಉತ್ತಮ ಆಡಳಿತ ನೀಡುವಲ್ಲಿ ರಾಜ್ಯ ಸರ್ಕಾರ ಕಾಳಜಿ ವಹಿಸಿದ್ದು, ವಿದ್ಯುನ್ಮಾನ ಆಡಳಿತದ (ಇ-ಆಡಳಿತ) ಉಪಕ್ರಮಿಕೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಕ್ರಿಯವಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.ಶುಕ್ರವಾರ ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಶುಕ್ರವಾರ ಇ-ಆಡಳಿತ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಇ-ಆಡಳಿತವನ್ನು ಹೆಚ್ಚು ಸಕ್ರಿಯವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಉತ್ತಮ ಆಡಳಿತಕ್ಕೆ ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿರುವ ತಂತ್ರಾಂಶ ಇ-ಆಡಳಿತಕ್ಕೆ ಸಹಾಯಕವಾಗಲಿದೆ. ಆಡಳಿತದಲ್ಲಿ ದಕ್ಷತೆ, ಸ್ಥಿರತೆ ಮತ್ತು ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅನುಕೂಲವಾಗಲು ತಹಸೀಲ್ದಾರ ಕಚೇರಿಯಲ್ಲಿ ಇ-ಆಡಳಿತ ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತಿದೆ ಎಂದ ಅವರು, ಇಂಥದೊಂದು ಪ್ರಯತ್ನದಿಂದ ಸಾರ್ವಜನಿಕರ ಅಮೂಲ್ಯ ಸಮಯ ಉಳಿಸುವುದಲ್ಲದೇ ಅವರ ಬೇಡಿಕೆಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವುದು ಸುಲಭ ಸಾಧ್ಯವಾಗಲಿದೆ ಎಂದರು.
ಸವಣೂರು ಉಪ ವಿಭಾಗಾಧಿಕಾರಿ ಮಹ್ಮದ್ ಖಿಜರ್ ಮಾತನಾಡಿ, ಸಾರ್ವಜನಿಕರಿಗೆ ಒದಗಿಸುವ ಮಾಹಿತಿಯಲ್ಲಿ ನಿಖರತೆಯೊಂದಿಗೆ ಸರ್ಕಾರದ ಆಡಳಿತ ವೇಗ ಹೆಚ್ಚಿಸುವ ಉದ್ದೇಶದಿಂದ ಮಾಹಿತಿ ಮತ್ತು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಇ-ಆಡಳಿತ ಜಾರಿಗೆ ತರಲಾಗುತ್ತಿದೆ ಎಂದರು.ತಹಸೀಲ್ದಾರ ರವಿಕುಮಾರ ಕೊರವರ, ತಾಪಂ ಇಒ ದೇವರಾಜ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಜಿ.ಬಿ. ಹಿರೇಮಠ, ಹಿಂದುಳಿದ ವರ್ಗಗಳ ಇಲಾಖೆಯ ತಾಲೂಕಾ ಕಲ್ಯಾಣಾಧಿಕಾರಿ ಆನಂದ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮೋಹನಕುಮಾರ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಬಣಕಾರ, ಪುರಸಭೆ ಮುಖ್ಯಾಧಿಕಾರಿ ಜಗದೀಶ ಎ.ಕೆ., ಕಂದಾಯ ಇಲಾಖೆಯ ಶಿರಸ್ತೇದಾರರಾದ ಬಿ.ಎಸ್. ಅಂಗಡಿ, ಟಿ.ಕೆ. ಕಾಂಬ್ಳೆ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.