ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರೈತ ಉತ್ಪಾದಕರ ಸಂಸ್ಥೆಗಳ ಸಮನ್ವಯ ಮತ್ತು ಮೇಲ್ವಿಚಾರಣೆ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಉತ್ಪಾದಕರ ಸಂಸ್ಥೆಗಳಿಗೆ ಸಬ್ಸಿಡಿ ದರದಲ್ಲಿ ಸಾಲ ನೀಡುತ್ತಿದ್ದು, ಅದನ್ನು ಸದುಪಯೋಗ ಪಡಿಸಿಕೊಂಡು ರೈತ ಉತ್ಪಾದಕರ ಸಂಸ್ಥೆಗಳು ಅಭಿವೃದ್ಧಿ ಹೊಂದಬೇಕು. ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ರೇಷ್ಮೆ, ಕುರಿ, ಮೇಕೆ ಸಾಕಾಣಿಕೆ ಮುಂತಾದ ಮೌಲ್ಯವರ್ಧನೆ ಘಟಕಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಅಧಿಕಾರಿಗಳು ರೈತರಿಗೆ ಮೌಲ್ಯವರ್ಧನೆ ಕುರಿತು ತಾಂತ್ರಿಕ ತರಬೇತಿ ನೀಡುವ ಮೂಲಕ ಕೃಷಿ ಉತ್ಪಾದನೆ ಹೆಚ್ಚಿಸಲು ಕ್ರಮವಹಿಸಬೇಕು. ಮಾರುಕಟ್ಟೆ ಸೌಲಭ್ಯ ಕಲ್ಪಿಸಬೇಕು, ಸಕಾಲಕ್ಕೆ ಗುಣಮಟ್ಟದ ಪರಿಕರಗಳು ದೊರಕುವಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಒಂದು ಮೀನು ಉತ್ಪಾದಕರ ಸಂಸ್ಥೆ ಮಾತ್ರ ನೋಂದಣಿಯಾಗಿದೆ. ಮೀನುಗಾರಿಕೆ ಇಲಾಖೆಯಿಂದ ಅವರಿಗೆ ಬೇಕಾದ ಸೌಲಭ್ಯ ಕಲ್ಪಿಸಬೇಕು ಎಂದ ಅವರು, ಮೀನುಗಾರಿಕೆ ಇಲಾಖೆ ಪ್ರಗತಿ ತೃಪ್ತಿದಾಯಕವಾಗಿಲ್ಲ. ಇನ್ನೂ ಮುಂದೆ ಅವರಿಗೆ ಇಲಾಖೆಯಿಂದ ದೊರೆಯುವ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದರು.ರೈತ ಉತ್ಪಾದಕರ ಸಂಸ್ಥೆಗಳು ಉತ್ಪಾದಿಸಿದ ಉತ್ಪಾದನೆಯನ್ನು ಶೇಖರಿಸಿಡಲು ಭೂಮಿ ಗುರುತಿಸಿ ಅರ್ಜಿ ಸಲ್ಲಿಸಿದರೆ ಆದ್ಯತೆ ಅನುಸಾರ ಮಂಜೂರು ಮಾಡಲಾಗುವುದು. ಈ ಸಂಸ್ಥೆಗಳಿಗೆ ಬ್ಯಾಂಕುಗಳಿಂದ ನೀಡಲಾಗುವ ಸಾಲ ಸೌಲಭ್ಯಗಳ ಕುರಿತು ಫೆ. 13 ರಂದು ಜಿಲ್ಲೆಯ ಎಲ್ಲಾ ರೈತ ಉತ್ಪಾದಕರ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪ್ರತಿನಿಧಿಗಳ ಸಭೆಯನ್ನು ಲೀಡ್ ಬ್ಯಾಂಕ್ನಲ್ಲಿ ಕರೆದು ಮಾಹಿತಿ ನೀಡುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದರು.
ಕೃಷಿ ಇಲಾಖೆಯಿಂದ ರೈತ ಉತ್ಪಾದಕರ ಸಂಸ್ಥೆಗಳಿಗೆ ಸುತ್ತು ನಿಧಿ, ಅಧ್ಯಯನ ಪ್ರವಾಸ, ತರಬೇತಿ, ಕಛೇರಿ ನಿರ್ವಹಣಾ ವೆಚ್ಚಗಳಿಗೆ ಅನುದಾನ ನೀಡಲಾಗಿದೆ. ಕೀಟನಾಶಕ, ಬಿತ್ತನೆ ಬೀಜ, ರಸಗೊಬ್ಬರ ಪರವಾನಿಗೆ ನೀಡುವ ಮೂಲಕ ಆರ್ಥಿಕ ವಹಿವಾಟು ನಡೆಸಲು ಉತ್ತೇಜನ ನೀಡಲಾಗಿದ್ದು, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕಡೂರು ತಾಲೂಕಿನ ವಿಜಿಆರ್ಒಎಸ್ಎಲ್ಎಲ್ ಸಂಸ್ಥೆಗೆ 5.2 ಲಕ್ಷ ಹಾಗೂ ತರೀಕೆರೆ ತಾಲೂಕಿನ ವೀರಾಂಜನೇಯ ಸಂಸ್ಥೆಗೆ 9.4 ಲಕ್ಷಗಳ ಅನುದಾನದಲ್ಲಿ ಕೃಷಿ ಯಂತ್ರೋಪಕರಣ ಒದಗಿಸಲಾಗಿದೆ. ಕಡೂರು ತಾಲೂಕಿನ ಯಗಟಿ ರೈತ ಉತ್ಪಾದಕರ ಸಂಸ್ಥೆಗೆ 8 ಲಕ್ಷ ಅನುದಾನ ಫಾರಂ ಮಿಷನರಿ ಬ್ಯಾಂಕ್ನಿಂದ ಒದಗಿಸಲಾಗಿದೆ ಎಂದರು.
ಸಭೆಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಎ.ಎನ್. ಮಹೇಶ್, ರೈತ ಉತ್ಪಾದಕರ ಸಂಸ್ಥೆಗಳ ಪ್ರತಿನಿಧಿಗಳು, ಸರ್ಕಾರೇತರ ಸಂಸ್ಥೆಯ ಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.