ಕನ್ನಡಪ್ರಭ ವಾರ್ತೆ ಬೆಳಗಾವಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು, ತಮ್ಮ ಸ್ವಕ್ಷೇತ್ರದಲ್ಲಿ ಪ್ರವಾಸದಲ್ಲಿದ್ದ ವೇಳೆ ವೃದ್ಧೆಯೊಬ್ಬರನ್ನು ಗ್ಯಾರಂಟಿಯಿಂದ ಏನು ಮಾಡುತ್ತೀಯಾ ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ವೃದ್ಧೆ ಗ್ಯಾರಂಟಿ ನಮ್ಮ ಹೊಟ್ಟೆ ತುಂಬಿಸುತ್ತಿದೆ. ನಮ್ಮ ಮನೆ ಮಂದಿಯೆಲ್ಲ ಊಟ ಮಾಡುತ್ತಿದ್ದೇವೆ ಎಂದು ಹೇಳಿ ಸಚಿವೆ ಹೆಬ್ಬಾಳ್ಕರ್ ಅವರ ಗಲ್ಲವನ್ನು ನೇವರಿಸಿ, ಆಶೀರ್ವದಿಸಿದರು.
ಇನ್ನೂ ಸ್ಥಳೀಯರು ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣೆಗೆ ಮೊದಲೇ ನೀಡಿದ ವಾಗ್ದಾನದಂತೆ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಗ್ಯಾರಂಟಿಗಳು ಈಗಾಗಲೇ ಲಕ್ಷಾಂತರ ಜನರನ್ನು ತಲುಪಿವೆ. ಇದರಿಂದ ಪ್ರಯೋಜನ ಪಡೆದ ಕೋಟ್ಯಂತರ ಜನರು ಸರ್ಕಾರದ ಕ್ರಮವನ್ನು ಮನದುಂಬಿ ಹೊಗಳುತ್ತಿದ್ದಾರೆ.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೂ ತಮ್ಮ ಇಲಾಖೆಯ ವ್ಯಾಪ್ತಿಯ ಗ್ಯಾರಂಟಿಯನ್ನು ಸಮರ್ಪಕವಾಗಿ ಜಾರಿ ಮಾಡುವಲ್ಲಿ ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ರಾಜ್ಯಾದ್ಯಂತ ಮತ್ತು ವಿಶೇಷವಾಗಿ ತಮ್ಮ ಕ್ಷೇತ್ರದಲ್ಲಿ ಗ್ಯಾರಂಟಿಗಳು ಜನರನ್ನು ಹೇಗೆ ತಲುಪುತ್ತಿವೆ ಎಂಬುದನ್ನು ಗಂಭೀರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಗ್ಯಾರಂಟಿಗಳು ಅಸಂಖ್ಯಾತ ಕುಟುಂಬಗಳಲ್ಲಿ ನೆಮ್ಮದಿ ತಂದಿವೆ ಎಂಬುದನ್ನು ಈ ವೃದ್ಧೆ ಸೂಚ್ಯವಾಗಿ ಹೇಳಿದ್ದಾರೆ. ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳು ರಾಜ್ಯದ ಜನರ ಬದುಕಿನಲ್ಲಿ ಹೊಸ ಆಶಾಕಿರಣ ಮೂಡಿಸುತ್ತಿವೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕಿಲ್ಲ ಎಂದರು.