ರಾಜ್ಯ ಸರ್ಕಾರವು ಯಶಸ್ವಿಯಾಗಿ 2 ವರ್ಷ ಪೂರ್ಣಗೊಳಿಸಿದ್ದು, ಪಂಚ ಗ್ಯಾರಂಟಿ ಜಾರಿಗೊಳಿಸಿ ಮಹಿಳೆಯರು, ನಿರುದ್ಯೋಗಿ ಯುವಜನತೆ ಮತ್ತು ಬಡವರಿಗೆ ಆರ್ಥಿಕವಾಗಿ ಅನುಕೂಲ ಮಾಡಿಕೊಟ್ಟಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ಕೊಪ್ಪಳ:
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಉಚಿತ್ ಬಸ್ ಟಿಕೆಟ್ ವಿತರಿಸಲ್ಪಟ್ಟಿದ್ದು, ಇಷ್ಟೊಂದು ಸಂಖ್ಯೆಯಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ರಾಜ್ಯದಲ್ಲಿ ಪಡೆದಿರುವುದು ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸೋಮವಾರ ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಉಚಿತ್ ಟಿಕೆಟ್ ವಿತರಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೊಪ್ಪಳ ವಿಭಾಗದಿಂದ ಹಮ್ಮಿಕೊಂಡಿದ್ದ ಬಸ್ಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸರ್ಕಾರವು ಯಶಸ್ವಿಯಾಗಿ 2 ವರ್ಷ ಪೂರ್ಣಗೊಳಿಸಿದ್ದು, ಪಂಚ ಗ್ಯಾರಂಟಿ ಜಾರಿಗೊಳಿಸಿ ಮಹಿಳೆಯರು, ನಿರುದ್ಯೋಗಿ ಯುವಜನತೆ ಮತ್ತು ಬಡವರಿಗೆ ಆರ್ಥಿಕವಾಗಿ ಅನುಕೂಲ ಮಾಡಿಕೊಟ್ಟಿದೆ. ಶಕ್ತಿ ಯೋಜನೆಯಡಿ ಈ ವರೆಗೆ 500 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿದ್ದು ದೇಶದಲ್ಲಿಯೇ ಬಹುದೊಡ್ಡ ಕಾರ್ಯಕ್ರಮವಾಗಿದೆ ಎಂದರು.
ಮಹಿಳೆಯರಿಗೆ ಸ್ವಂತ ಶಕ್ತಿ ಮೇಲೆ ಕುಟುಂಬ ನಡೆಸಲು ಗೃಹಲಕ್ಷ್ಮೀ ಯೋಜನೆಯಡಿ ಮಾಸಿಕ ₹ 2000 ಸಹಾಯಧನ ಮತ್ತು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಸರ್ಕಾರ ಮಾಡಿಕೊಟ್ಟಿದೆ. ಜತೆಗೆ ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ಉಚಿತ್ ವಿದ್ಯುತ್, ಅನ್ನಭಾಗ್ಯ ಯೋಜನೆಯಡಿ ಹತ್ತು ಕೆಜೆ ಅಕ್ಕಿ ವಿತರಣೆ ಹಾಗೂ ನಿರುದ್ಯೋಗಿ ಯುವಕರಿಗೆ ನಿರುದ್ಯೋಗಿ ಭತ್ಯೆ ನೀಡುವ ಮೂಲಕ ಎಲ್ಲರಿಗೂ ಆರ್ಥಿಕ ಶಕ್ತಿ ತುಂಬಿದೆ ಎಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಮಾತನಾಡಿ, ಶಕ್ತಿ ಯೋಜನೆಯನ್ನು ಬಹಳಷ್ಟು ಮಹಿಳೆಯರು ಸ್ವಾಗತಿಸಿ ಸರ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.
ಶಕ್ತಿ ಯೋಜನೆಯ ಕಾರ್ಯಕ್ರಮ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಬಸ್ ನಿಲ್ದಾಣದಲ್ಲಿ ಬಸ್ಗೆ ಪೂಜೆ ಸಲ್ಲಿಸಿ ಪ್ರಯಾಣಿಕರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಬೇಕೆಂದು ಸರ್ಕಾರ ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಈ ವೇಳೆ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಪಂ ಸಿಇಒ ವರ್ಣಿತ್ ನೇಗಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮುಖ್ಯ ಯೋಜನಾ ಮತ್ತು ಸಾಂಖಿಕ ಅಧಿಕಾರಿಗಳು, ಕೊಪ್ಪಳ ವಿಭಾಗದ ಉಸ್ತುವಾರಿ ಅಧಿಕಾರಿ ಎಂ.ಆರ್. ಮುಂಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಂದ್ರ ಬಿ. ಜಾಧವ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಟಿ. ಬಾಲಚಂದ್ರನ್, ಸದಸ್ಯರಾದ ಜ್ಯೋತಿ ಎಂ. ಗೊಂಡಬಾಳ, ಅವಿತಾ ಗೋರಂಟ್ಲಿ, ತಾಪಂ ಇಒ ದುಂಡಪ್ಪ ತುರಾದಿ, ಕೊಪ್ಪಳ ವಿಭಾಗೀಯ ಸಂಚಾರ ಅಧಿಕಾರಿ ಪರಮೇಶ್ವರಪ್ಪ, ಕಾರ್ಮಿಕ ಕಲ್ಯಾಣಾಧಿಕಾರಿ ಸತ್ಯನಾರಾಣ, ಘಟಕ ವ್ಯವಸ್ಥಾಪಕ ರಮೇಶ ಚಿಣಗಿ ಸೇರಿದಂತೆ ಅಧಿಕಾರಿ, ಸಿಬ್ಬಂದಿ, ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.