ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸರ್ಕಾರ ಸುಗ್ರೀವಾಜ್ಞೆ

KannadaprabhaNewsNetwork |  
Published : Feb 20, 2025, 12:45 AM IST
ಚಿತ್ರ 2 | Kannada Prabha

ಸಾರಾಂಶ

ಚಿತ್ರದುರ್ಗದ ಜಿಪಂ ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಯವರಿಗೆ ಸರ್ಕಾರದ ಸುಗ್ರೀವಾಜ್ಞೆ ಆದೇಶ ಕುರಿತಂತೆ ಮಾಹಿತಿ ಹಾಗೂ ಸೂಚನೆ ನೀಡುವ ಸಲುವಾಗಿ ಏರ್ಪಡಿಸಿದ್ದ ಸಭೆಯಲ್ಲಿ ಡಿಸಿ ಟಿ.ವೆಂಕಟೇಶ್ ಮಾತನಾಡಿದರು.

ನೋಂದಣಿಯಾಗದ ಮೈಕ್ರೋ ಫೈನಾನ್ಸ್‌ಗಳು 30 ದಿನದೊಳಗೆ ನೋಂದಣಿ ಮಾಡಿಕೊಳ್ಳಿ: ಡಿಸಿ ಟಿ.ವೆಂಕಟೇಶ್

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲಗಾರರಿಗೆ ನೀಡುತ್ತಿದ್ದ ಕಿರುಕುಳ ತಡೆಗಟ್ಟಲು ಸರ್ಕಾರ ಸುಗ್ರೀವಾಜ್ಞೆ ಮೂಲಕ ಆದೇಶ ಜಾರಿಗೊಳಿಸಿದ್ದು, ಇದರ ಅನ್ವಯ ಎಲ್ಲ ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಲೇವಾದೇವಿ ಸಂಸ್ಥೆಗಳು 30 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಡ್ಡಾಯವಾಗಿ ನೊಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ಮೈಕ್ರೋ ಫೈನಾನ್ಸ್ ಸಂಸ್ಥೆಯವರಿಗೆ ಸರ್ಕಾರದ ಸುಗ್ರೀವಾಜ್ಞೆ ಆದೇಶ ಕುರಿತಂತೆ ಮಾಹಿತಿ ಹಾಗೂ ಸೂಚನೆ ನೀಡುವ ಸಲುವಾಗಿ ಜಿಪಂ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದ ಹಾವಳಿಗೆ ರಾಜ್ಯದಲ್ಲಿ ಅನೇಕ ಕುಟುಂಬಗಳು ಸಂಕಷ್ಟ ಅನುಭವಿಸಿದ್ದವು. ಹೀಗಾಗಿ ಇಂತಹ ಕುಟುಂಬಗಳ ರಕ್ಷಣೆಗಾಗಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಆದೇಶ ಹೊರಡಿಸಿದ್ದು, ಶೀಘ್ರವೇ ಇದು ಕಾನೂನು ಕೂಡ ಆಗಲಿದೆ ಎಂದು

ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಗಿರವಿ, ಲೇವಾದೇವಿ ಸಂಸ್ಥೆಗಳು ಈ ಹಿಂದಿನ ಕಾಯ್ದೆಯಂತೆ ಸಹಕಾರ ಸಂಘಗಳ ಉಪ ನಿಬಂಧಕರಲ್ಲಿ ನೊಂದಣಿ ಮಾಡಿಕೊಂಡಿದ್ದರೂ ಕೂಡ, ಸರ್ಕಾರದ ಆದೇಶದ ಪ್ರಕಾರ ಎಲ್ಲರೂ ಜಿಲ್ಲಾಧಿಕಾರಿ ಕಚೇರಿಯಲ್ಲಿ 30ದಿನಗಳ ಒಳಗಾಗಿ ನೊಂದಣಿ ಮಾಡಿಕೊಳ್ಳಬೇಕು.

ನೋಂದಣಿ ಪರವಾನಿಗೆಯು ಒಂದು ವರ್ಷಕ್ಕೆ ಮಾತ್ರ ಸೀಮಿತವಾಗಿದ್ದು, ನಂತರ ನವೀಕರಣ ಮಾಡಿಕೊಳ್ಳಬೇಕಾಗುತ್ತದೆ. ನೋಂದಣಿ ಮಾಡಿಕೊಳ್ಳದಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಪೊಲೀಸ್ ಇಲಾಖೆ ಕೂಡ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು, ಸಂಸ್ಥೆಯಲ್ಲಿ ತನಿಖೆ ನಡೆಸಬಹುದಾಗಿದೆ.

ಸಾಲಗಾರರು ಹಾಗೂ ಸಾಲ ನೀಡುವ ಸಂಸ್ಥೆಯ ನಡುವೆ ನಡೆಯುವ ಒಪ್ಪಂದವು ಸಂಪೂರ್ಣವಾಗಿ ಕನ್ನಡ ಭಾಷೆಯಲ್ಲಿ ಇರಬೇಕು. ಸಾಲ ನೀಡಿಕೆ, ವಸೂಲಾತಿ ವಿವರ, ಸಾಲಕ್ಕೆ ವಿಧಿಸಲಾಗುವ ಬಡ್ಡಿದರ, ಕಂತುಗಳ ವಿವರ, ಮರುಪಾವತಿ ತೀರುವಳಿ ಸೇರಿದಂತೆ ಯಾವುದೇ ಷರತ್ತು, ನಿಬಂಧನೆಗಳನ್ನು ಮುಚ್ಚಿಡದೆ, ಎಲ್ಲ ಅಂಶಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿರಬೇಕು. ಬಲವಂತದ ವಸೂಲಾತಿ ಹಾಗೂ ನಿಯಮ ಉಲ್ಲಂಘನೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಜಾಮೀನು ರಹಿತ ಬಂಧನ ಆಗಲಿದೆ ಎಂದರು.

ಅಪರಾಧಕ್ಕೆ 10 ವರ್ಷ ಜೈಲು ಶಿಕ್ಷೆ ಹಾಗೂ 05 ಲಕ್ಷದವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಚಿನ್ನ, ಸಾಲ ಪಡೆದವರ ಸರ್ಕಾರಿ ದಾಖಲೆಗಳು, ಆಸ್ತಿಪತ್ರಗಳನ್ನು ಅಡಮಾನವಾಗಿ ಇರಿಸಿಕೊಳ್ಳುವಂತಿಲ್ಲ. ಒಂದು ವೇಳೆ ಇರಿಸಿಕೊಂಡಿದ್ದರೆ, ಅದನ್ನು ಸಂಬಂಧಪಟ್ಟವರಿಗೆ ಹಿಂದಿರುಗಿಸಬೇಕು. ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮುಖ್ಯಕಚೇರಿ ಹೊಂದಿರುವ ಸಂಸ್ಥೆಗಳು ಕಡ್ಡಾಯವಾಗಿ ಸ್ಥಳೀಯವಾಗಿ ಕಚೇರಿ ಹೊಂದಿದ್ದು, ಸ್ಥಳೀಯವಾಗಿ ನೋಂದಣಿ ಮಾಡಿಕೊಂಡಿರಬೇಕು. ಸಂಸ್ಥೆಗಳು ಪ್ರತಿ ತ್ರೈಮಾಸಿಕ ಹಾಗೂ ವಾರ್ಷಿಕ ವರದಿ ತಖ್ತೆಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಬೇಕು. ತಪ್ಪಿದಲ್ಲಿ 6 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರು. ದಂಡ ವಿಧಿಸಲು ಅವಕಾಶವಿದೆ.

ಸಾಲ ನೀಡಿದ ಸಂಸ್ಥೆಗಳು, ಸಾಲ ಪಡೆದವರಿಂದ ಬಲವಂತದ ಸಾಲ ವಸೂಲಾತಿ ಮಾಡುವುದು, ಮನೆಯ ಕುಟುಂಬ ಸದಸ್ಯರಿಗೆ ಕಿರುಕುಳ ಕೊಡುವುದು, ಅವಹೇಳನಕಾರಿ ಹಾಗೂ ನಿಂದನೆಯ ಮಾತುಗಳನ್ನಾಡುವುದು, ದೈಹಿಕ ಹಲ್ಲೆ, ಹಿಂಸೆ, ದಾಖಲೆ ವಶದಲ್ಲಿಟ್ಟುಕೊಂಡು ಬೆದರಿಕೆ ಕ್ರಮಗಳನ್ನು ಕೈಗೊಳ್ಳುವಂತಿಲ್ಲ. ಇಂತಹ ಯಾವುದೇ ದೂರುಗಳನ್ನು ಪೊಲೀಸ್ ಇಲಾಖೆ ನಿರಾಕರಿಸುವಂತಿಲ್ಲ, ಜೊತೆಗೆ ಇದು ಜಾಮೀನು ರಹಿತ ಅಪರಾಧವೆಂದು ಪರಿಗಣಿಸಲಾಗುತ್ತದೆ. ಇಂತಹ ದೂರುಗಳ ಬಗ್ಗೆ ಡಿವೈಎಸ್‍ಪಿ ವೃಂದ ಮೇಲ್ಪಟ್ಟ ಪೊಲೀಸ್ ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಮಾತನಾಡಿ, ಸಂಸ್ಥೆಗಳು ಸಾಲ ವಸೂಲಾತಿಗಾಗಿ ನೇಮಿಸಿಕೊಳ್ಳುವ ಸಿಬ್ಬಂದಿ, ಏಜೆನ್ಸಿಗಳ ಅಪರಾಧ ಹಿನ್ನೆಲೆಯನ್ನು ಪೊಲೀಸ್ ಇಲಾಖೆಯಿಂದ ಪರಿಶೀಲಿಸಿದ ನಂತರ ನೇಮಿಸಿಕೊಳ್ಳಬೇಕು. ಈಗಾಗಲೆ ನೇಮಕ ಮಾಡಿಕೊಂಡಿರುವವರ ಅಪರಾಧ ಹಿನ್ನೆಲೆಯನ್ನು ಕೂಡ ಪರಿಶೀಲಿಸಿಕೊಳ್ಳಬೇಕು. ಕ್ರಿಮಿನಲ್ ಹಿನ್ನೆಲೆ ಹೊಂದಿರುವವರು, ಗೂಂಡಾಗಳನ್ನು ನೇಮಿಸಿಕೊಂಡಿದ್ದಲ್ಲಿ, ಸಂಬಂಧಪಟ್ಟ ಸಂಸ್ಥೆ ಕೂಡ ಇದರ ಕಠಿಣ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಯಾವುದೇ ಹಣಕಾಸು ಸಂಸ್ಥೆಗಳು ಪ್ರಕರಣ ದಾಖಲಿಸಿಕೊಳ್ಳುವ ರೀತಿ ಮಾಡಿಕೊಳ್ಳದೆ, ನಿಯಮಬದ್ಧವಾಗಿ ಹಣಕಾಸು ವ್ಯವಹಾರ ಮಾಡಿಕೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಡಿವೈಎಸ್‍ಪಿ ದಿನಕರ್, ಸಹಕಾರ ಸಂಘಗಳ ಉಪ ನಿಬಂಧಕ ದಿಲೀಪ್, ಲೀಡ್ ಬ್ಯಾಂಕ್ ಮ್ಯಾನೇಜರ್ ಕುಮಾರ್ ಹಾಗೂ ಜಿಲ್ಲೆಯ ಹಲವು ಮೈಕ್ರೋ ಫೈನಾನ್ಸ್, ಗಿರವಿ ಲೇವಾದೇವಿ ಸಂಸ್ಥೆಗಳ ಪ್ರತಿನಿಧಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!