ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕುರಿತು ನೀಡಿದ ಅಧ್ಯಯನ ವರದಿಯನ್ನು ಸರ್ಕಾರ ಪರಿಶೀಲಿಸಿದೆ. ಅದರ ಆಧಾರದ ಮೇಲೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.
ಧಾರವಾಡ: ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳ ಮಳೆಗಾಲದಲ್ಲಿ ಉಂಟಾಗುವ ಹಳ್ಳಗಳ ಪ್ರವಾಹ, ಅತಿವೃಷ್ಟಿ ಸಮಸ್ಯೆಗಳನ್ನು ಸಮರ್ಪಕವಾಗಿ ಎದುರಿಸಿ, ಯಾವುದೇ ಜನ ಜಾನುವಾರಿಗೆ ಹಾನಿ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಲ್ಲೂ ಜಿಲ್ಲೆಯ 2 ಪ್ರಮುಖ ಹಳ್ಳಗಳಾದ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆಗೆ ಅಗತ್ಯ ಯೋಜನೆ ಸಿದ್ಧಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನವಲಗುಂದ ತಾಲೂಕಿನ ಯಮನೂರು ಗ್ರಾಮದ ಸೇತುವೆ ಹತ್ತಿರ ಬೆಣ್ಣಿಹಳ್ಳದ ನಾಲೆಯನ್ನು ವೀಕ್ಷಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ಬೆಣ್ಣಿಹಳ್ಳದಿಂದ ಧಾರವಾಡ ಗದಗ ಮತ್ತು ಹಾವೇರಿ ಜಿಲ್ಲೆಗಳ 6 ತಾಲೂಕುಗಳ 56 ಹಳ್ಳಿಗಳು ಬಾಧಿತವಾಗುತ್ತವೆ. ಮೂರು ಜಿಲ್ಲೆಗಳ 148 ಕಿ.ಮೀ ಉದ್ದದಲ್ಲಿ ಹರಿಯುತ್ತಿದ್ದು, 2012ರಲ್ಲಿ ನೀರಾವರಿ ತಜ್ಞ ಡಾ. ಜಿ.ಎಸ್. ಪರಮಶಿವಯ್ಯ ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕುರಿತು ನೀಡಿದ ಅಧ್ಯಯನ ವರದಿಯನ್ನು ಸರ್ಕಾರ ಪರಿಶೀಲಿಸಿದೆ. ಅದರ ಆಧಾರದ ಮೇಲೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಹಾಗೆಯೇ, ಪ್ರವಾಹ ಪರಿಸ್ಥಿತಿ ಎದುರಿಸಲು ಅನುವಾಗುವಂತೆ ನವಲಗುಂದ ಪಟ್ಟಣದಲ್ಲಿ ಅಗ್ನಿಶಾಮಕ ದಳದ ತಾತ್ಕಾಲಿಕ ನಿಲ್ದಾಣ ತೆರೆಯಲಾಗಿದೆ. ಬೋಟ್ ಸೇರಿದಂತೆ ಎಲ್ಲ ಜೀವ ರಕ್ಷಕ ಪರಿಕರಗಳನ್ನು ಪೂರೈಸಲಾಗಿದೆ. ಸ್ಥಳೀಯ ಈಜುಗಾರರನ್ನು, ಸ್ವಯಂಸೇವಕರ ತಂಡಗಳನ್ನು ಗ್ರಾಮ ಮಟ್ಟದಲ್ಲಿ ರಚಿಸಲಾಗಿದೆ. ಸ್ಥಳೀಯರ ಸಹಭಾಗಿತ್ವದಲ್ಲಿ ತಕ್ಷಣ ಸ್ಪಂದಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ಒಂದೂ ಜೀವ ಹಾನಿ ಆಗಬಾರದೆಂದು ಮೊದಲೆ ವ್ಯವಸ್ಥೆ ಮಾಡಿಕೊಳ್ಳುವ ದೃಷ್ಟಿಯಿಂದ ಐದು ತಂಡಗಳನ್ನು ಸಿದ್ಧಪಡಿಸಲಾಗಿದೆ ಎಂಬ ಮಾಹಿತಿ ನೀಡಿದರು.
ಬೆಣ್ಣಿಹಳ್ಳಕ್ಕೆ ಬೇಕು ₹1600 ಕೋಟಿ: ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದ್ದು, ಇದಕ್ಕಾಗಿ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಪ್ರತಿ ಜಿಲ್ಲೆಯಲ್ಲಿರುವ ಉಸ್ತುವಾರಿ ಸಚಿವರು ಮತ್ತು ಶಾಸಕರು, ಜಿಲ್ಲಾಧಿಕಾರಿಯವರು ಜಿಲ್ಲೆಯಲ್ಲಿ ಬರುವ ಪ್ರತಿಯೊಂದು ಪ್ರವಾಹ ಪೀಡಿತ ಪ್ರದೇಶಗಳನ್ನು ಮತ್ತು ಹಳ್ಳಗಳನ್ನು ಪರೀಕ್ಷಿಸಿ, ವರದಿ ಸಲ್ಲಿಸಬೇಕೆಂದು ಸೂಚಿಸಿದ್ದಾರೆ. ಅದರಂತೆ ಬೆಣ್ಣಿಹಳ್ಳ ಹಾಗೂ ತುಪ್ಪರಿಹಳ್ಳದ ಪ್ರವಾಹ ಪೀಡತವಾಗಬಹುದಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದರು. ಜತೆಗೆ ಬೆಣ್ಣಿಹಳ್ಳದ ನಿಯಂತ್ರಣಕ್ಕೆ ಹಾಗೂ ಲಭ್ಯ ನೀರಿನ ಸದ್ಭಳಕೆಗೆ ಅಂದಾಜು ₹1600 ಕೋಟಿ ಅನುದಾನದ ಅಗತ್ಯವಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಮೂಲಕ ಕೇಂದ್ರ ಸರ್ಕಾರದ ಅನುದಾನ ತರಲು ವಿನಂತಿಸಲಾಗುವುದು ಎಂದು ಕೋನರಡ್ಡಿ ತಿಳಿಸಿದರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಸೇರಿದಂತೆ ಹಿರಿಯ ಅಧಿಕಾರಿಗಳಿದ್ದರು.