ಹಿರಿಯ ನಾಗರಿಕರು, ವಿಶೇಷಚೇತನರ ಸಮಸ್ಯೆಗಳಿಗೆ ಸರ್ಕಾರ ಸ್ಪಂದನೆ-ಶಾಸಕ ಲಮಾಣಿ

KannadaprabhaNewsNetwork |  
Published : Jul 13, 2026, 01:00 AM IST
ಹಾವೇರಿ ನಗರದ ಕೆಎಲ್‌ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಹಿರಿಯ ನಾಗರಿಕರಿಗೆ ಉಚಿತವಾಗಿ ವಿವಿಧ ಸಹಾಯಕ ಸಾಧನ-ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮವನ್ನು ವಿಧಾನಸಭೆ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಸಂಸದ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಹಿರಿಯ ನಾಗರಿಕರು ಹಾಗೂ ವಿಶೇಷಚೇತನರ ಸಮಸ್ಯೆಗಳಿಗೆ ಸರ್ಕಾರ ಸದಾ ಸ್ಪಂದಿಸಲಿದೆ. ಪಿಂಚಣಿ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತಂದರೆ ಅವುಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭೆ ಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.

ಹಾವೇರಿ: ಹಿರಿಯ ನಾಗರಿಕರು ಹಾಗೂ ವಿಶೇಷಚೇತನರ ಸಮಸ್ಯೆಗಳಿಗೆ ಸರ್ಕಾರ ಸದಾ ಸ್ಪಂದಿಸಲಿದೆ. ಪಿಂಚಣಿ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತಂದರೆ ಅವುಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭೆ ಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.

ನಗರದ ಕೆಎಲ್‌ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ರಾಷ್ಟ್ರೀಯ ವಯೋಶ್ರೀ ಯೋಜನೆ ಅಡಿಯಲ್ಲಿ ಏರ್ಪಡಿಸಿದ್ದ ಹಿರಿಯ ನಾಗರಿಕರಿಗೆ ಉಚಿತವಾಗಿ ವಿವಿಧ ಸಹಾಯಕ ಸಾಧನ-ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯ ನಾಗರಿಕರು ಹಾಗೂ ವಿಶೇಷಚೇತನರಿಗೆ ಕೇಂದ್ರ ಸರ್ಕಾರದ ವತಿಯಿಂದ ಕನ್ನಡಕ, ವೀಲ್‌ಚೇರ್, ಕಮೋಡ್ ಹೊಂದಿದ ವೀಲ್‌ಚೇರ್, ವಾಕಿಂಗ್ ಸ್ಟಿಕ್ ಸೇರಿದಂತೆ ಅಗತ್ಯ ಸಹಾಯಕ ಸಾಧನಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಇಂತಹ ಯೋಜನೆಗಳು ಫಲಾನುಭವಿಗಳ ಜೀವನಮಟ್ಟವನ್ನು ಉತ್ತಮಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು.

ವಿಶೇಷಚೇತನರ ಪ್ರಮಾಣಪತ್ರ ಪಡೆಯಲು ಹಾವೇರಿಯ ಜನರು ಹುಬ್ಬಳ್ಳಿ ಅಥವಾ ದಾವಣಗೆರೆಗೆ ತೆರಳಬೇಕಾಗಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ಹಾವೇರಿಯಲ್ಲಿಯೇ ಪ್ರಮಾಣಪತ್ರ ನೀಡಲು, ಕೇಂದ್ರದ ಅನುಮತಿ ದೊರೆತರೆ ಈ ಸೇವೆಯನ್ನು ಹಾವೇರಿಯಲ್ಲೇ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಹಿರಿಯರು ಆರೋಗ್ಯ ಕಾಪಾಡಿಕೊಂಡು ವ್ಯಾಯಾಮ ಹಾಗೂ ಸಕ್ರಿಯ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ಸಮಾಜದ ಪ್ರಗತಿಯಲ್ಲಿ ಹಿರಿಯ ನಾಗರಿಕರ ಪಾತ್ರ ಅಮೂಲ್ಯವಾಗಿದೆ. ಹಿರಿಯರನ್ನು ಗೌರವಿಸುವುದು ಭಾರತೀಯ ಸಂಸ್ಕೃತಿಯ ವೈಶಿಷ್ಟ್ಯವಾಗಿದ್ದು, ಕುಟುಂಬ ವ್ಯವಸ್ಥೆ ಮತ್ತು ಮಾನವೀಯ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು.

ದೇಶದಲ್ಲಿ ಸುಮಾರು 1.40 ಲಕ್ಷಕ್ಕೂ ಹೆಚ್ಚು ಹಿರಿಯ ನಾಗರಿಕರು ಪಿಂಚಣಿ ಪಡೆಯುತ್ತಿದ್ದು, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ. ಸಮಾಜ ಮತ್ತು ಸರ್ಕಾರ ಹಿರಿಯರ ಬೆನ್ನೆಲುಬಾಗಿ ನಿಂತಾಗ ಮಾತ್ರ ಅವರ ಬದುಕು ಸುಗಮವಾಗುತ್ತದೆ. ಮಕ್ಕಳಲ್ಲಿ ಸಂಸ್ಕಾರ ಮತ್ತು ಹಿರಿಯರ ಬಗ್ಗೆ ಗೌರವ ಬೆಳೆಸುವುದು ಕುಟುಂಬದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ಇಂದಿನ ಬದಲಾಗುತ್ತಿರುವ ಜೀವನಶೈಲಿಯಲ್ಲಿ ಹಿರಿಯರ ಆರೈಕೆ ಮತ್ತು ಗೌರವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗದ ನಿಮಿತ್ತ ಮಕ್ಕಳು ನಗರಗಳಿಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಹಿರಿಯರ ಆರೈಕೆಗೆ ಕುಟುಂಬ ಸದಸ್ಯರು ಹೆಚ್ಚಿನ ಕಾಳಜಿ ವಹಿಸಬೇಕು. ಹಿರಿಯರ ಆಶೀರ್ವಾದ ಹಾಗೂ ಮಾರ್ಗದರ್ಶನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದ್ದು, ಅವರ ಕಲ್ಯಾಣಕ್ಕಾಗಿ ಸರ್ಕಾರ ತನ್ನ ಕರ್ತವ್ಯವನ್ನು ನಿರಂತರವಾಗಿ ನಿರ್ವಹಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಎಂ.ಎಂ. ಮೈದೂರ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಆಶು ನದಾಫ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಉಪಸ್ಥಿತರಿದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಹುಟ್ಟಿನಿಂದ ವೃದ್ಧಾಪ್ಯದವರೆಗೆ ಪ್ರತಿಯೊಂದು ಹಂತಕ್ಕೂ ಕೇಂದ್ರ ಸರ್ಕಾರ ವಿವಿಧ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರೀಯ ವಯೋಶ್ರೀ ಯೋಜನೆಯೂ ಅದರಲ್ಲಿ ಪ್ರಮುಖವಾಗಿದೆ. ಯೋಜನೆಯಡಿ ಸುಮಾರು 1,364 ಫಲಾನುಭವಿಗಳಿಗೆ ಸುಮಾರು 80 ಲಕ್ಷ ರು. ಮೌಲ್ಯದ ವಿವಿಧ ಸಹಾಯಕ ಸಾಧನ-ಸಲಕರಣೆಗಳನ್ನು ವಿತರಿಸಲಾಗುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರ್ಯಾಯ ಬೆಳೆಯಿಂದ ಮಣ್ಣಿನ ಫಲವತ್ತತೆ ಹೆಚ್ಚಳ
ಗದಗ ಜಿಲ್ಲೆಯ 898 ಮಕ್ಕಳಲ್ಲಿ ಅಪೌಷ್ಟಿಕತೆ!