
ಗದಗ: ದೇಶದ ಭವ್ಯ ಭವಿಷ್ಯವನ್ನು ನಿರ್ಮಿಸುವಲ್ಲಿ ಕಟ್ಟಡ ಕಾರ್ಮಿಕರ ಪಾತ್ರ ಅನನ್ಯ. ಅಹರ್ನಿಶಿ ದುಡಿಯುವ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳು ಅವರಿಗೆ ಶ್ರೀರಕ್ಷೆಯಾಗಿವೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ಶಿಕ್ಷಣಕ್ಕೆ ಮೊದಲ ಆದ್ಯತೆ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ. 85ಕ್ಕೂ ಹೆಚ್ಚು ಅಂಕ ಪಡೆದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಕಾರ್ಮಿಕರ ಮಕ್ಕಳು ಶೈಕ್ಷಣಿಕವಾಗಿ ಮುಂಚೂಣಿಗೆ ಬರಬೇಕೆನ್ನುವುದು ಸರ್ಕಾರದ ಆಶಯವಾಗಿದೆ.
ಕಾರ್ಮಿಕರ ಪಾತ್ರ ಶ್ಲಾಘನೀಯ. ಕಣ್ಣಿಗೆ ಕಾಣುವ ರಸ್ತೆ, ಫ್ಲೈ ಒವರ್, ಕಾಲೇಜುಗಳು, ಮ್ಯೂಸಿಯಂ ಹಾಗೂ ಗುಡಿ- ಗುಂಡಾರಗಳನ್ನು ನಿರ್ಮಿಸುವವರು ಕಾರ್ಮಿಕರು. ಸಾವಿರಾರು ವರ್ಷಗಳ ಕಾಲ ಉಳಿಯುವ ಇಂತಹ ಸ್ಮಾರಕಗಳ ಹಿಂದೆ ಕಾರ್ಮಿಕರ ರಕ್ತ ಮತ್ತು ಬೆವರಿದೆ ಎಂದರು.ದೇಶದಲ್ಲಿ ಕಾರ್ಮಿಕ ಕಲ್ಯಾಣ ಕಾನೂನುಗಳನ್ನು ಜಾರಿಗೆ ತರುವಲ್ಲಿ ಆಸ್ಕರ್ ಫರ್ನಾಂಡಿಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆ ಅಪಾರ. ಅವರ ಪ್ರಯತ್ನದಿಂದಾಗಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಲಭಿಸುತ್ತಿದೆ ಎಂದರು.
ಅರ್ಹ ಫಲಾನುಭವಿಗಳು ಕಾರ್ಮಿಕ ಕಾರ್ಡ್ನಿಂದ ವಂಚಿತರಾಗಿದ್ದರೆ, ಅಂತಹವರು ಎಂಎಲ್ಎ ಕಚೇರಿ ಅಥವಾ ಕಾರ್ಮಿಕ ಸಂಘಟನೆಗೆ ಅರ್ಜಿ ಸಲ್ಲಿಸಿದರೆ ಒಂದು ವಾರದೊಳಗೆ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ವಸತಿ ಶಾಲೆಗಾಗಿ ನಗರದ ಸಮೀಪವಿರುವ ಗುಡ್ಡದ ಸಾಲಿನಲ್ಲಿ, ನವೋದಯ ಶಾಲೆ ಹಾಗೂ ಮೈನಾರಿಟಿ ವಸತಿ ಶಾಲೆಗಳ ಪಕ್ಕದಲ್ಲೇ 10 ಎಕರೆ ವಿಶಾಲವಾದ ಭೂಮಿಯನ್ನು ಗುರುತಿಸಲಾಗಿದೆ.
ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾವಿರಾರು ಕೋಟಿ ವೆಚ್ಚದಲ್ಲಿ ಶೈಕ್ಷಣಿಕ ಕಿಟ್ಗಳನ್ನು ವಿತರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದರು.
ಕಾರ್ಯಕ್ರಮದಲ್ಲಿ ಅಭಿನವ ಕೊಟ್ಟೂರು ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ, ನಗರಾಭಿವೃದ್ಧಿ ಪ್ರಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಜಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಮಹಬೂಬ್ ಖಾನ್ ಪಠಾಣ್, ನಗರಸಭೆ ಮಾಜಿ ಅಧ್ಯಕ್ಷೆ ಉಷಾ ದಾಸರ, ಡಾ. ಗಣೇಶ್ ರಾವ್ ಸೇರಿದಂತೆ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.