ಕನ್ನಡಪ್ರಭ ವಾರ್ತೆ ಕಾರವಾರ
ಭಾರತೀಯ ನೌಕಾ ದಿನಾಚರಣೆಯ ಪ್ರಯುಕ್ತ ಕಾರವಾರದ ಐಎನ್ಎಸ್ ಕದಂಬ ನೌಕಾನೆಲೆಯ ನೌಕಾದಳ ಭವನದ ಆವರಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಭಾಗವಹಿಸಿದರು.ಕಾರ್ಯಕ್ರಮದಲ್ಲಿ ನೌಕಾ ಸಿಬ್ಬಂದಿ ವಾದ್ಯ ಪರಿಕರಗಳಲ್ಲಿ ದೇಶಭಕ್ತಿ ಗೀತೆಗಳನ್ನು ನುಡಿಸಿದರು.
ಬ್ಯಾಂಡ್ ಸಿಬ್ಬಂದಿ ಬೀಟಿಂಗ್ ರಿಟ್ರೀಟ್ ಮೂಲಕ ನೌಕಾಪಡೆಯ ಸಿಬ್ಬಂದಿಯ ತ್ಯಾಗ, ಬಲಿದಾನ ಮತ್ತು ಸಾಮರ್ಥ್ಯವನ್ನು ಸ್ಮರಿಸಿದರು.ಸಂಭ್ರಮಾಚರಣೆಯ ಭಾಗವಾಗಿ ನೌಕಾಪಡೆಯ ನೌಕೆಗಳಿಗೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ನೌಕೆಗಳಿಂದ ಸಿಡಿಮದ್ದುಗಳನ್ನು ಸಿಡಿಸಲಾಯಿತು.
ನೌಕಾಪಡೆಯ ಸಿಬ್ಬಂದಿ, ನೌಕಾ ಅಗ್ನಿವೀರರು, ನೌಕಾನೆಲೆ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಕರ್ನಾಟಕ ನೌಕಾ ನೆಲೆಯ ಮುಖ್ಯಸ್ಥ ಫ್ಲ್ಯಾಗ್ ಕಮಾಂಡೆಂಟ್ ಆಫಿಸರ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಪಂ ಸಿಇಒ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ. ಎನ್., ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಹಾಗೂ ನೌಕಾಪಡೆಯ ಅಧಿಕಾರಿಗಳು ಮತ್ತಿತರರಿದ್ದರು.
ಶ್ರೀಲಂಕಾದಲ್ಲಿ ಭಾರತೀಯ ನೌಕಾಪಡೆಯಿಂದ ಪ್ರವಾಹ ಸಂತ್ರಸ್ತರ ರಕ್ಷಣೆಶ್ರೀಲಂಕಾದಲ್ಲಿ ಪ್ರವಾಹ ಪರಿಸ್ಥಿತಿ ಎದುರಾದ ಹಿನ್ನೆಲೆ ಅಲ್ಲಿನ ಜನತೆಗೆ ನೆರವಾಗಲು ಭಾರತ ಸರ್ಕಾರ ರೂಪಿಸಿದ ಸಾಗರ ಬಂಧು ಕಾರ್ಯಾಚರಣೆಗೆ ಕದಂಬ ನೌಕಾನೆಲೆಯ ಐಎನ್ಎಸ್ ವಿಕ್ರಾಂತ, ಐಎನ್ಎಸ್ ಉದಯಗಿರಿ ನೌಕೆಗಳು ತೆರಳಿ ಜನರ ರಕ್ಷಣೆ ಮಾಡುತ್ತಿದೆ ಎಂದು ನೌಕಾ ನೆಲೆಯ ಮುಖ್ಯಸ್ಥ ಫ್ಲ್ಯಾಗ್ ಕಮಾಂಡೆಂಟ್ ಆಫೀಸರ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್ ಹೇಳಿದರು.ಕಾರ್ಯಾಚರಣೆಗೆ ಬೇಕಾದ ಸಲಕರಣೆ, ಆಹಾರ ಸಾಮಗ್ರಿ ನೌಕೆಯಲ್ಲಿವೆ. ಕಾರವಾರದ ನೌಕಾನೆಲೆಯಲ್ಲಿ ಕಾಮಗಾರಿ ನಿರಂತರವಾಗಿ ನಡೆಯುತ್ತಿದ್ದು, ವಿವಿಧ ರಾಜ್ಯಗಳ ಕಾರ್ಮಿಕರು ಬರುತ್ತಿದ್ದಾರೆ. ಭದ್ರತಾ ದೃಷ್ಟಿಯಿಂದ ಅವರ ಆಧಾರ್, ದಾಖಲಾತಿ ಪರಿಶೀಲನೆ ನಿರಂತರವಾಗಿ ನಡೆಯುತ್ತಿದೆ. ಕಾರ್ಮಿಕರಿಗೆ ನೌಕಾನೆಲೆ ಒಳಗೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಅಲ್ಲದೇ, ಯಾರೊಂದಿಗೂ ಏನನ್ನೂ ಹಂಚಿಕೊಳ್ಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುತ್ತದೆ. ಸ್ಥಳೀಯ ಮೀನುಗಾರರೊಂದಿಗೆ ಸಮನ್ವಯತೆ ಸಾಧಿಸಿ ನೌಕಾನೆಲೆಯೊಂದಿಗೆ ವಿಶ್ವಾಸವನ್ನು ಮತ್ತಷ್ಟು ಗಟ್ಟಿಗೊಳಿಸುವ ಪ್ರಯತ್ನ ನಿರಂತರವಾಗಿ ನಡೆಯಲಿದೆ. ಮೀನುಗಾರರು ನಮ್ಮ ಸಮುದ್ರಗಡಿಯ ಕಣ್ಣುಗಳು. ಅವರಿಗೆ ತೊಂದರೆ ಕೊಡುವ ಯಾವ ಉದ್ದೇಶವೂ ನೌಕಾನೆಲೆಗೆ ಇಲ್ಲ. ಆದರೆ, ರಾಷ್ಟ್ರೀಯ ಭದ್ರತೆ ನಿಯಮ ಪಾಲಿಸಬೇಕಾಗುತ್ತದೆ. ಆ ನಿಟ್ಟಿನಲ್ಲಿ ಮೀನುಗಾರರೊಂದಿಗೆ ಸಭೆ ಮಾಡುತ್ತೇವೆ. ಮೀನುಗಾರರಿಗೆ ಯಾವುದೇ ತೊಂದರೆಯಾದರೂ ರಕ್ಷಣೆಗೆ ನೌಕಾಪಡೆ ಬದ್ಧವಾಗಿದೆ ಎಂದರು.