ಕನ್ನಡಪ್ರಭ ವಾರ್ತೆ ಮಂಡ್ಯರಾಜ್ಯ ಸರ್ಕಾರ ರೈತರಿಗಾಗಿರುವ ನಷ್ಟವನ್ನು ಪರಿಣಾಮಕಾರಿಯಾಗಿ ಭರಿಸಿಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ ಆರೋಪಿಸಿದರು.
ಕೆಆರ್ಎಸ್ ಜಲಾಶಯದಲ್ಲಿ ತಮಿಳುನಾಡಿಗೆಂದೇ ನೀರನ್ನು ಸಂಗ್ರಹಿಸಿ ಅವರು ಕೇಳಿದಾಗ ಕದ್ದು ಮುಚ್ಚಿ ನೀರು ಬಿಡುವ ಸರ್ಕಾರದ ನಡೆ ಖಂಡನೀಯ. ಅತ್ಯಂತ ಸಂಕಷ್ಟ ಪರಿಸ್ಥಿತಿಯಲ್ಲಿರುವ ಜಿಲ್ಲೆಯ ರೈತರ ಬೆಳೆಗಳಿಗೆ ನೀರು ಬಿಡಿ ಎಂದು ಸಾಕಷ್ಟು ಮನವಿ ಮಾಡಿದರೂ, ನಾಲೆಗಳ ಮೂಲಕ ನೀರು ಹರಿಸದೇ ರೈತರ ಬೆಳೆ ನಾಶ ಮಾಡಲಾಗಿದೆ. ಸರ್ಕಾರದ ಈ ಧೋರಣೆಯನ್ನು ಖಂಡಿಸುತ್ತೇವೆ ಎಂದರು.
ಕಳೆದ ಸಾಲಿನ ಬೆಳೆ ನಷ್ಟ, ಈಗ ಆಗಿರುವ ಬೆಳೆ ನಷ್ಟ ಮತ್ತು ಮುಂದೆ ಬೆಳೆ ಒಡ್ಡಲಾಗದಿರುವ ನಷ್ಟಕ್ಕೂ ಸರ್ಕಾರ ಸೂಕ್ತ ಪರಿಹಾರ ಭರಿಸಿಕೊಡಬೇಕಿದೆ. ಜಿಲ್ಲಾ ಉಸ್ತುವಾರಿ ಸಚಿವರು ಜವಾಬ್ದಾರಿ ಹೊತ್ತು ಮಾತನಾಡಬೇಕಿದೆ. ಇದು ರೈತರ ಬದುಕಿನ ಪ್ರಶ್ನೆ ಎಂಬುದನ್ನು ಸಚಿವರು ಮರೆಯಬಾರದು ಎಂದು ಕಿಡಿಕಾರಿದರು.ಜಿಲ್ಲೆಯಾದ್ಯಂತ ಈಗ ಕೆರೆ-ಕಟ್ಟೆಗಳ ಹೂಳು ತೆಗೆಯಲಾಗುತ್ತಿದೆ. ಆದರೆ, ಹೂಳು ತೆಗೆಯುತ್ತಿರುವ ರೀತಿ ಅವೈಜ್ಞಾನಿಕವಾಗಿದ್ದು, ಹಳ್ಳ ಗುಂಡಿಗಳಿಂದ ಕೂಡಿದೆ. ಸಮತಟ್ಟಾಗಿ ಹೂಳು ತೆಗೆಯುವುದರಿಂದ ನೀರು ತುಂಬಿದಾಗ ಯಾವುದೇ ಅಪಾಯ ಸಂಭವಿಸುವುದಿಲ್ಲ. ಈ ಬಗ್ಗೆ ಜಿಲ್ಲಾಕಾರಿಗಳು ಕೂಡಲೇ ಸುತ್ತೋಲೆಯೊಂದನ್ನು ಹೊರಡಿಸಿ ಹೂಳು ತೆಗೆಯುವವರು ವೈಜ್ಞಾನಿಕವಾಗಿ ಕಾಮಗಾರಿ ಕೈಗೊಳ್ಳುವಂತೆ ಒತ್ತಾಯಿಸಿದರು.
ಕರವೇ, ದಸಂಸ, ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಂಘ, ಜಯಕರ್ನಾಟಕ ಪರಿಷತ್, ಮಹಿಳಾ ಸಂಘಟನೆ, ಮಂಡ್ಯ ವಿವಿ ವಿದ್ಯಾರ್ಥಿನಿಯರು ಪಾಲ್ಗೊಂಡು ಬಸ್ ಪ್ರಯಾಣಿಕರಿಗೆ ಕರಪತ್ರ ವಿತರಿಸುವ ಮೂಲಕ ಪ್ರತಿಭಟನೆ ನಡೆಸಿದರು.