ಕನ್ನಡಪ್ರಭ ವಾರ್ತೆ ಹಾಸನ
ಸರಕಾರಿ ನೌಕರರ ಆರ್ಥಿಕ ಸುಧಾರಣೆ ಹಾಗೂ ಅವರ ಸಮಸ್ಯೆಗಳ ಬಗ್ಗೆ ಆಲಿಸಿ ಪರಿಹಾರ ಕಂಡುಕೊಳ್ಳುವತ್ತ ಗಮನಹರಿಸಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆ ಮತ ಹಾಕುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಕೈ ಬಲಪಡಿಸುವಂತೆ ರಾಜ್ಯ ಸರಕಾರಿ ನೌಕರರಲ್ಲಿ ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡರು ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ೮.೨೩ ಲಕ್ಷ ಸರ್ಕಾರಿ ನೌಕರರಿಗೆ ೬ನೇ ವೇತನದ ಆಯೋಗ ರಚನೆ ಮಾಡಿ ಸುಮಾರು ಶೇ ೩೦. ರಷ್ಟು ವೇತನವನ್ನು ಹೆಚ್ಚಳ ಮಾಡಿದ್ದ ಕೀರ್ತಿ ಸಿಎಂ ಸಿದ್ದರಾಮಯ್ಯರಿಗೆ ಸಲ್ಲುತ್ತದೆ. ಈ ಯೋಜನೆ ಜಾರಿ ಮಾಡುವ ಮೂಲಕ ನೌಕರರ ಶ್ರೇಯೊಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿದೆ ಎಂದರು. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏಳನೇ ವೇತನ ಆಯೋಗವನ್ನು ಜಾರಿ ಮಾಡಲು ಆಗಿಲ್ಲ, ಈಗಾಗಲೇ ಆಯೋಗದ ವರದಿ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಕೈ ಸೇರಿದೆ, ಚುನಾವಣೆ ಮುಗಿದ ಬಳಿಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಏಳನೇ ವೇತನ ಆಯೋಗ ಜಾರಿ ಮಾಡುವುದು ಖಚಿತ ಎಂದು ಭರವಸೆ ನೀಡಿದರು.
ಶಿಕ್ಷಕ ವೃತ್ತಿಯ ನೌಕರ ವರ್ಗಕ್ಕೂ ರಾಜ್ಯ ಸರ್ಕಾರ ಸಹಕಾರ ನೀಡಿದ್ದು, ಸರ್ಕಾರಿ ನೌಕರರ ಆರ್ಥಿಕ ಸುಧಾರಣೆ ಹಾಗೂ ಅವರ ಸಮಸ್ಯೆಗಳ ಬಗ್ಗೆ ಆಲಿಸಿ ಪರಿಹಾರ ಕಂಡುಕೊಳ್ಳುವಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ. ಸಮಸ್ತ ನೌಕರರು ಕೈಗೆ ಬೆಂಬಲ ಸೂಚಿಸಬೇಕೆಂದು ಹೇಳಿದರು.ಕಾಂಗ್ರೆಸ್ ಮುಖಂಡ ಎಚ್.ಕೆ ಮಹೇಶ್ ಮಾತನಾಡಿ, ಜೆಡಿಎಸ್ ಅಭ್ಯರ್ಥಿ ಬಗ್ಗೆ ಜಿಲ್ಲೆಯಲ್ಲಿ ಒಳ್ಳೆಯ ಅಭಿಪ್ರಾಯಗಳು ಇಲ್ಲ. ಮೈತ್ರಿ ಅಭ್ಯರ್ಥಿ ಎಂದು ಯಾರು ಹೇಳುವುದಿಲ್ಲ. ಹಾಸನ ಜಿಲ್ಲೆಯಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಅಲೆಯಿದೆ. ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದವರು ಮತದಾರರಿಗೆ ಚಿನ್ನ ಕೊಟ್ಟರೂ ೧೫ ಸಾವಿರ ಮತಗಳ ಅಂತರದಿಂದ ಶ್ರೇಯಸ್ ಪಟೇಲ್ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರೀತಂಗೌಡರ ಬೆಂಬಲಿಗರು ಯಾರು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾರು ಇದ್ದರೋ ಅವರು ಮರಳಿ ನಮ್ಮ ಪಕ್ಷಕ್ಕೆ ಬೆಂಬಲ ಕೊಡುತ್ತಿದ್ದಾರೆ. ಪ್ರೀತಂ ಮತ್ತು ಅವರ ಕಡೆಯವರು ಯಾರೂ ನಮಗೆ ಬೆಂಬಲ ಕೊಡುತ್ತಿಲ್ಲ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.