ಕನ್ನಡಪ್ರಭ ವಾರ್ತೆ ಮಂಡ್ಯ
೨೦೦೯-೧೦ ರಿಂದ ೨೦೧೯-೨೦ರವರೆಗೆ ಪರಿಶಿಷ್ಟಜಾತಿ, ಪಂಗಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ನಿಗದಿಪಡಿಸಿದ್ದ ಅನುದಾನದಲ್ಲಿ ಬಾಲಿ ಉಳಿದಿರುವ ಅನುದಾನವನ್ನು ಕೆಟಿಐಎಲ್ ಖಾತೆಗೆ ಆರ್ಟಿಜಿಎಸ್ ಮೂಲಕ ಜಮೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಪತ್ರ ಬರೆದಿದ್ದಾರೆ.
ಪ್ರವಾಸಿ ಟ್ಯಾಕ್ಸಿ ಪಡೆಯಲು ನಾಲ್ಕೈದು ವರ್ಷಗಳ ಹಿಂದೆಯೇ ನೂರಾರು ಮಂದಿ ಅರ್ಜಿ ಸಲ್ಲಿಸಿದ್ದು, ಅವರಲ್ಲಿ ೪೫ ಮಂದಿ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಚೆಕ್ ವಿತರಣೆಯಷ್ಟೇ ಬಾಕಿ ಇದೆ. ಈ ಸಂದರ್ಭದಲ್ಲಿ ಅನುದಾನ ವಾಪಸ್ಗೆ ಸರ್ಕಾರದಿಂದ ಸೂಚನೆ ಬಂದಿರುವುದು ಸ್ವಯಂ ಉದ್ಯೋಗ ಹೊಂದುವ ಯುವಕರ ಕನಸನ್ನು ಛಿದ್ರಗೊಳಿಸಿದಂತಾಗಿದೆ ಎಂದು ಕನ್ನಡ ಸೇನೆ-ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್ ಹೇಳಿದ್ದಾರೆ.ನಿರುದ್ಯೋಗ ಸಮಸ್ಯೆ ಬಗೆಹರಿಸಲು ಬಹಳ ವರ್ಷಗಳಿಂದ ಪ್ರವಾಸೋದ್ಯಮ ಇಲಾಖೆಯಿಂದ ಆಯ್ದ ವ್ಯಕ್ತಿಗಳಿಗೆ ಎರಡು ಲಕ್ಷ ರು. ಸಬ್ಸಿಡಿ ಯೋಜನೆಯಡಿ ಟ್ಯಾಕ್ಸಿ ನೀಡಲಾಗುತ್ತಿದೆ. ಅದರಂತೆ ಜಿಲ್ಲೆಯ ಪ್ರವಾಸೋದ್ಯೋಮ ಇಲಾಖೆಗೆ ನೂರಾರು ಮಂದಿ ಅರ್ಜಿಯನ್ನು ಸಲ್ಲಿಸಿದ್ದರು. ಅದರಲ್ಲಿ ೪೫ ಜನರನ್ನು ಆಯ್ಕೆ ಮಾಡಲಾಗಿತ್ತು ಎಂದರು.
ಒಮ್ಮೆ ಅನುದಾನವನ್ನು ಹಿಂತಿರುಗಿಸಿದರೆ ಆಯ್ಕೆಯಾಗಿರುವ ಫಲಾನುಭವಿಗಳು ಪ್ರವಾಸಿ ಟ್ಯಾಕ್ಸಿಯನ್ನು ಖರೀದಿಸಲು ಸಾಧ್ಯವಾಗುವುದಿಲ್ಲ. ಕೂಡಲೇ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಚೆಕ್ ವಿತರಿಸಬೇಕು. ಒಂದು ವೇಳೆ ಹಣವನ್ನು ಸರ್ಕಾರಕ್ಕೆ ಹಿಂದಿರುಗಿಸಿದರೆ ಕನ್ನಡ ಸೇನೆ-ಕರ್ನಾಟಕ ಆಯ್ಕೆಯಾಗಿರುವ ಫಲಾನುಭವಿಗಳ ಜೊತೆಗೂಡಿ ಜೊತೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯೊಂದಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಮನವಿ ಸಲ್ಲಿಸಿದರು.