ಕನ್ನಡಪ್ರಭ ವಾರ್ತೆ ಲಿಂಗಸುಗೂರು
ಗ್ಯಾರಂಟಿ ಯೋಜನೆಗಳ ನಿರ್ವಹಣೆ ಸಾಧ್ಯವಾಗದೇ ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ರಾಜ್ಯದ ಅಭಿವೃದ್ಧಿ ಅಧೋಗತಿಗೀಡಾಗಿದೆ ಎಂದು ಶಾಸಕ ಮಾನಪ್ಪ ವಜ್ಜಲ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಪಟ್ಟಣ ಖಾಸಗಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಬಿಜೆಪಿ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸದಸ್ಯತ್ವ ಅಭಿಯಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ಸಂಪೂರ್ಣ ವಿಫಲವಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಎಂದು ಅನೇಕ ಕಾಂಗ್ರೆಸ್ ಶಾಸಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಕ್ಷೇತ್ರದ ಅಭಿವೃದ್ಧಿಗೆ ಕೆಲವೇ ಕೆಲವು ಶಾಸಕರಿಗೆ ₹50 ಲಕ್ಷ ಮಾತ್ರ ನೀಡಿದ್ದಾರೆ. ಉಳಿದಂತೆ ಬಿಜೆಪಿ ಶಾಸಕರಿಗೆ ಅದರಲ್ಲೂ ಕಡಿತ ಮಾಡುತ್ತಿದ್ದಾರೆ. ಇದರಿಂದ ಕ್ಷೇತ್ರದ ಅಭಿವೃದ್ಧಿ ಮಾಡುವುದು ಹೇಗೆಂಬ ಚಿಂತೆ ಆಡಳಿತ ಪಕ್ಷದ ಶಾಸಕರಿಗೆ ಕಾಡುತ್ತಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಕಲ್ಯಾಣ ಭಾಗದ ಶಾಸಕರಿಗೆ ಸ್ವಲ್ಪ ಹೆಚ್ಚಿನ ಅನುದಾನ ಸಿಗುತ್ತಿದೆ. ಇಲ್ಲದೇ ಹೋದರೆ ಜನರಿಗೆ ಶಾಸಕರು ಮುಖ ತೋರಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ತಾಲೂಕಿನಲ್ಲಿ 40 ಹಳ್ಳಿಗಳಿಗೆ ನೀರಾವರಿ ಯೋಜನೆ, ಲಿಂಗಸುಗೂರು, ಮುದಗಲ್, ಹಟ್ಟಿ ಪಟ್ಟಣಗಳಿಗೆ ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆಗಳ ಜಾರಿಗೂ ಹಣಕಾಸಿನ ಲಭ್ಯತೆ ಇಲ್ಲಾ. ಸಂಬಂಧಿಸಿದ ಸಚಿವರಿಗೆ ಕೇಳಿದರು ಅವರೂ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ರಾಜ್ಯದ ಅಭಿವೃದ್ಧಿ ನಿಂತ ನೀರಾಗಿದೆ ಎಂದು ಹೇಳಿದರು.
ಈ ವೇಳೆ ಬಿಜೆಪಿ ಅಧ್ಯಕ್ಷ ನ್ಯಾಯವಾದಿ ಅಯ್ಯಪ್ಪ ಮಾಳೂರು, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಸಣ್ಣ ಮೇಟಿ, ಮುಖಂಡರಾದ ಶರಣಪ್ಪ ಮೇಟಿ, ಗಿರಿಮಲ್ಲನಗೌಡ, ಜಗನ್ನಾಥ ಕುಲಕರ್ಣಿ ಸೇರಿ ಕಾರ್ಯಕರ್ತರು ಇದ್ದರು.