ಕನ್ನಡಪ್ರಭ ವಾರ್ತೆ ಚಾಮರಾಜನಗರನಾಯಕ ಸಮುದಾಯದ ಬಹು ವರ್ಷಗಳ ಬೇಡಿಕೆಯಾದ ಶ್ರೀವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿರುವ ಕಾರಣದಿಂದ ಜಿಲ್ಲಾಡಳಿತ ಮಾಡುವ ಸರ್ಕಾರಿ ಕಾರ್ಯಕ್ರಮವನ್ನು ಬಹಿಷ್ಕರಿಸಿ ಅ.17 ರಂದು ಸಮುದಾಯದಿಂದಲೇ ಅದ್ಧೂರಿ ವಾಲ್ಮೀಕಿ ಜಯಂತಿ ಆಚರಿಸಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಸಮುದಾಯದ ಮುಖಂಡರಿಂದಲೇ ವಾಲ್ಮೀಕಿ ಪುತ್ಥಳಿಗೆ ಭೂಮಿಪೂಜೆ ಮಾಡಲಾಗುತ್ತದೆ ಎಂದು ನಾಯಕರ ವಿದ್ಯಾಭಿವೃದ್ಧಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸ ನಾಯಕ ಹೇಳಿದರು.
ನಗರದ ಪ್ರವಾಸಿಮಂದಿರದಿಂದ ಕಲಾತಂಡಗಳೊಂದಿಗೆ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ಅಲ್ಲಿಂದ ಹೊರಟು ದೊಡ್ಡಂಗಡಿ, ಚಿಕ್ಕಂಗಡಿ, ಡಿವಿಯೇಷನ್ ರಸ್ತೆ, ಭುವನೇಶ್ವರಿ ವೃತ್ತ, ಬಿ.ಜೋಡಿರಸ್ತೆಯ ಮೂಲಕ ನಗರದ ತಹಸೀಲ್ದಾರ್ ಕಚೇರಿ ಪಕ್ಕದಲ್ಲಿರುವ ನಾಯಕರ ಸಾರ್ವಜನಿಕ ವಿದ್ಯಾರ್ಥಿ ನಿಲಯ ಆವರಣಕ್ಕೆ ಆಗಮಿಸಿ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು. ಜಿಲ್ಲಾಡಳಿತ ಭವನದ ಮುಂಭಾಗಕ್ಕೆ ತೆರಳಿ ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿಪೂಜೆ ಮಾಡಲಾಗುತ್ತದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಮುದಾಯದ ಮುಖಂಡರಾದ ಮಹದೇವನಾಯಕ ಬಿ.ಕಾಂ, ನಗರಸಭಾ ಮಾಜಿ ಸದಸ್ಯ ರಾಜೇಶನಾಯಕ, ಜಯಸುಂದರ್, ವಿರಾಟ್ ಶಿವು, ವೆಂಕಟರಮಣನಾಯಕ ಹಾಜರಿದ್ದರು.