ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಭರತ್ ಕುಮಾರ್ ಮತ್ತು ಕಾಂಗ್ರೆಸ್ ಬೆಂಬಲಿತ ಎಚ್.ಆರ್.ಸುರೇಶ್ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ನೇತ್ರಾವತಿ ಮತ್ತು ಪಕ್ಷೇತರವಾಗಿ ಸ್ಪರ್ಧಿಸಿ ಗೆಲವು ಸಾಧಿಸಿದ್ದ ಬಿ.ಪಿ.ಮೊಗಪ್ಪ ನಾಮಪತ್ರ ಸಲ್ಲಿಸಿದ್ದರು. ಆಕಾಂಕ್ಷಿಗಳು ನಾಮಪತ್ರ ವಾಪಾಸ್ ಪಡೆಯದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಬಿ.ಜೆ.ಸಂದೀಪ್ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು.
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ೮-೫ ಮತಗಳ ಅಂತರದಿಂದ ಗೆಲವು ಸಾಧಿಸಿದರು. ಮೊಗಪ್ಪ ಅವರಿಗೆ ಕಾಂಗ್ರೆಸ್ ಬೆಂಬಲಿತ ಮತದಾರರು ಮತ ಚಲಾಯಿಸಿದ ಹಿನ್ನೆಲೆಯಲ್ಲಿ ೫ ಮತಗಳನ್ನು ಪಡೆದು ಸೋಲೊಪ್ಪಿಕೊಂಡರು. ಕಳೆದ ಸಾಲಿನ ಅಧ್ಯಕ್ಷರಾಗಿದ್ದ ಎಚ್.ಆರ್.ಸುರೇಶ್ ಕೂಡ ೫ ಮತಗಳನ್ನು ಪಡೆದರು.೧೩ ಸದಸ್ಯರನ್ನು ಹೊಂದಿರುವ ಆಡಳಿತ ಮಂಡಳಿಗೆ ೮ ಬಿಜೆಪಿ, ೪ ಕಾಂಗ್ರೆಸ್ ಬೆಂಬಲಿತರು ಹಾಗು ಓರ್ವ ಪಕ್ಷೇತರರು ಆಯ್ಕೆಯಾಗಿದ್ದರು.
ನೂತನ ಅಧ್ಯಕ್ಷ ಎಸ್.ಬಿ.ಭರತ್ ಕುಮಾರ್ ಮಾತನಾಡಿ, ಸಹಕಾರ ಸಂಘ ಮುಂದಿನ ದಿನಗಳಲ್ಲೂ ರೈತಸ್ನೇಹಿಯಾಗಿರುತ್ತದೆ. ಸಂಘದ ಸದಸ್ಯರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.