ಬಾಂದಾರ್ ಹೂಳೆತ್ತುವ ಕಾಮಗಾರಿ ವೀಕ್ಷಿಸಿದ ಜಿಪಂ ಸಿಇಒ ರಿಶಿ

KannadaprabhaNewsNetwork |  
Published : Apr 26, 2024 12:53 AM IST
23 ಆಲಮಟ್ಟಿ 3: ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಭೇಟಿ ನೀಡಿ, ಕೂಲಿಕಾರ್ಮಿಕರೊಂದಿಗೆ ಸಂವಾದ ನಡೆಸಿದರು. | Kannada Prabha

ಸಾರಾಂಶ

ಸಮೀಪದ ವಂದಾಲ ಗ್ರಾಮ ಪಂಚಾಯ್ತಿಯಲ್ಲಿ ನಡೆದಿರುವ ಬಾಂದಾರ್ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಭೇಟಿ ನೀಡಿ, ಕೂಲಿಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ಕನ್ನಡಪ್ರಭ ವಾರ್ತೆ ಆಲಮಟ್ಟಿ

ಸಮೀಪದ ವಂದಾಲ ಗ್ರಾಮ ಪಂಚಾಯ್ತಿಯಲ್ಲಿ ನಡೆದಿರುವ ಬಾಂದಾರ್ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಭೇಟಿ ನೀಡಿ, ಕೂಲಿಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವ್ಯವಸ್ಥೆ ಕಲ್ಪಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಮನರೇಗಾ ಯೋಜನೆಯಡಿ ದೊರೆಯುವ ಕೂಲಿ ಮೊತ್ತ ಹಾಗೂ ವೈಯಕ್ತಿಕ ಕಾಮಗಾರಿಗಳ ಕುರಿತು ಕೂಲಿಕಾರರೊಂದಿಗೆ ಸಂವಾದ ನಡೆಸಿ ಮಾಹಿತಿ ಪಡೆದುಕೊಂಡರು.

ರಿಶಿ ಆನಂದ ಮಾತನಾಡಿ, ಜಿಲ್ಲೆಯಲ್ಲಿ ಬರ ಆವರಿಸಿರುವುದರಿಂದ ಇಲ್ಲಿನ ಜನರು ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ನರೇಗಾದಡಿ ಹೆಚ್ಚಿನ ಸಂಖ್ಯೆಯ ಜನರಿಗೆ ಕೆಲಸ ನೀಡಲಾಗುತ್ತಿದೆ. ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ನರೇಗಾ ಯೋಜನೆಯಲ್ಲಿ ಶೇ.50ರಷ್ಟು ಕೆಲಸ ಕೊಟ್ಟು, ಪೂರ್ಣ ಪ್ರಮಾಣದಲ್ಲಿ ಕೂಲಿ ಕೊಡಲಾಗುತ್ತಿದೆ ಎಂದು ಹೇಳಿದರು.

ಮತದಾನ ಪ್ರತಿಜ್ಞಾ ವಿಧಿ ಬೋಧನೆ: ಈ ವೇಳೆ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಮೇ 7ರಂದು ನಡೆಯುವ ಮತದಾನದ ಹಿನ್ನೆಲೆ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲು ಬಾಂದಾರ್ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿದ್ದ ಕೂಲಿ ಕಾರ್ಮಿಕರಿಗೆ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಆರೋಗ್ಯ ತಪಾಸಣೆ:

ಇದೇ ವೇಳೆ ಸಮುದಾಯ ಆರೋಗ್ಯ ಕೇಂದ್ರ ಆಶ್ರಯದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣೆ ಶಿಬಿರದಲ್ಲಿ 122 ಜನ ಕೂಲಿಕಾರರ ಆರೋಗ್ಯ ತಪಾಸಣೆ ಮಾಡಲಾಯಿತು.

ಬೀರಲದಿನ್ನಿ:

ಬೀರಲದಿನ್ನಿ ಗ್ರಾಮ ಪಂಚಾಯ್ತಿ ಗ್ರಂಥಾಲಯಕ್ಕೆ ಭೇಟಿ ನೀಡಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಪುಸ್ತಕಗಳನ್ನು ಹೆಚ್ಚಾಗಿ ಇಡುವಂತೆ ಗ್ರಂಥಪಾಲಕರಿಗೆ ಸೂಚಿಸಿದರು.

ಈ ವೇಳೆ ಜಿಲ್ಲಾ ಪಂಚಾಯ್ತಿ ಸಹಾಯಕ ಯೋಜನಾಧಿಕಾರಿ ಅರುಣ್ ಕುಮಾರ್ ದಳವಾಯಿ, ತಾಪಂ ಸಹಾಯಕ ನಿರ್ದೇಶಕ ವೆಂಕಟೇಶ ವಂದಾಲ, ಪಿಡಿಒ ಎಂ.ಬಿ. ಹಾವರಗಿ, ಐಇಸಿ ಸಂಯೋಜಕ ದಸ್ತಗೀರ್ ಗುಡಿಹಾಳ, ಶಿವಾನಂದ ಹಂಚಿನಾಳ, ದಿಗಂಬರೇಶ ಪಾಟೀಲ, ರವೀಂದ್ರ ಭಾವಿಕಟ್ಟಿ, ಶಿವಕುಮಾರ ಬೊಮ್ಮನಹಳ್ಳಿ ಮತ್ತೀತರರು ಇದ್ದರು.

PREV