ಕನ್ನಡಪ್ರಭ ವಾರ್ತೆ ಮೈಸೂರು
ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಡಗನಕೊಪ್ಪಲು, ಕಲಿಯೂರು ಗ್ರಾಪಂ ವ್ಯಾಪ್ತಿಯ ತಡಿಮಾಲಂಗಿ ಹಾಗೂ ಹೆಮ್ಮಿಗೆ ಗ್ರಾಮಗಳಲ್ಲಿನ ನದಿ ಪಾತ್ರ ಸ್ಥಳಗಳಿಗೆ ಜಿಪಂ ಸಿಇಒ ಕೆ.ಎಂ. ಗಾಯತ್ರಿ ಅವರು ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.ನದಿ ಪಾತ್ರದಲ್ಲಿ ಇರುವ ಮನೆಗಳಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದ ಅವರು, ಪ್ರವಾಹ ಸಂದರ್ಭದಲ್ಲಿ ಗ್ರಾಮಸ್ಥರು ಎಚ್ಚರಿಕೆಯಿಂದಿರಲು ಹಾಗೂ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ತಿಳಿಸಿದರು. ಸ್ಥಳೀಯ ಪರಿಸ್ಥಿತಿಯನ್ನಾಧರಿಸಿ ಸ್ಥಳಾಂತರ ಮಾಡಲು ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದರು.
ಜಲ್ಜೀವನ್ಮೀಷಿನ್ಯೋಜನೆಯ ಅನುಷ್ಠಾನದ ಬಗ್ಗೆ ಮನೆ- ಮನೆಗಳಿಗೆ ನಳ ಸಂಪರ್ಕ ನೀಡಿರುವ ಬಗ್ಗೆ ಸ್ಥಳ ಪರಿಶೀಲಿಸಿದರು.ಕಲಿಯೂರು ಗ್ರಾಪಂ ಕಚೇರಿಗೆ ಭೇಟಿ ನೀಡಿ ಸಿಬ್ಬಂದಿ ಹಾಜರಾತಿ, ತೆರಿಗೆ ಸಂಗ್ರಹಣೆ, ಆಸ್ತಿಗಳ ಸರ್ವೇ, ಬೂದು ನೀರು ನಿರ್ವಹಣೆ, ಮನರೇಗಾ ಯೋಜನೆ, ಜೆಜೆಎಂ ಯೋಜನೆ ಅನುಷ್ಠಾನ ಕುರಿತು ಅಧ್ಯಕ್ಷರು, ಉಪಾದ್ಯಕ್ಷರು , ಸದಸ್ಯರು, ಪಿಡಿಒಗಳ ಜೊತೆ ಸಭೆ ನಡೆಸಿದರು.
ನಂತರ ಗ್ರಂಥಾಲಯ, ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಬಿಸಿ ಊಟ ವಿತರಣೆ ಬಗ್ಗೆ ಶಾಲಾ ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕಲಿಯೂರು ಗ್ರಾಮದಲ್ಲಿ ನರೇಗಾ ಯೋಜನೆಯಡಿ ಅಭಿವೃದ್ಧಿ ಹೊಂದುತ್ತಿರುವ ಚಿಕ್ಕ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ, ನರೇಗಾ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಕಾರ್ಮಿಕರಿಗೆ ನರೇಗಾ ಯೋಜನೆಯಡಿ ಆರೋಗ್ಯ ತಪಾಸಣೆ ಹಾಗೂ ವಿಮಾ ಸೌಲಭ್ಯಗಳನ್ನು ಪಡೆಯುವ ಬಗ್ಗೆ ತಿಳುವಳಿಕೆ ನೀಡಿದರು.ನಂತರ ಹೆಮ್ಮಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿಯ ಸಭೆಯಲ್ಲಿ ಭಾಗವಹಿಸಿರುದ ಜಲ್ ಜೀವನ್ ಮಿಷನ್ ಯೋಜನೆ ಬಗ್ಗೆ ಸಭೆ ಚರ್ಚಿಸಲಾಯಿತು. ಕುಡಿಯುವ ನೀರಿನ ಘಟಕಗಳ ಸುತ್ತಲು ಸ್ವಚ್ಛತೆಯನ್ನು ಕಾಪಾಡಬೇಕು, ಎಲ್ಲೂ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಕಾಲ ಕಾಲಕ್ಕೆ ತಪ್ಪದೆ ಕುಡಿಯುವ ನೀರಿನ ಪರೀಕ್ಷೆಯನ್ನು ಮಾಡಬೇಕು ಎಂದು ತಿಳಿಸಿದರು.
ಜಿಪಂ ಯೋಜನಾಧಿಕಾರಿ ಮೇಘಲಾ, ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಂಜಿತ್, ಎಇಇ ಕೈಲಾಶ್ ಮೂರ್ತಿ, ಸಹಾಯಕ ನಿರ್ದೇಶಕ ಶಶಿಕುಮಾರ್, ತಾಪಂ ಯೋಜನಾಧಿಕಾರಿ ರಂಗಸ್ವಾಮಿ, ಪಿಡಿಓಗಳಾದ ಗಾಯಿತ್ರಿ, ಶೈಲಜಾ, ಚಿದಾನಂದ ಮೊದಲಾದವರು ಇದ್ದರು.