ಚನ್ನಪಟ್ಟಣ: ತಾಲೂಕಿನ ಪ್ರಸಿದ್ಧ ಗೌಡಗೆರೆಯ ಶ್ರೀ ಚಾಮುಂಡೇಶ್ವರಿ ಬಸವಪ್ಪನವರ ಪುಣ್ಯಕ್ಷೇತ್ರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಭೀಮನ ಅಮಾವಾಸ್ಯೆ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ದೇವಿಗೆ ವಿಶೇಷ ಅಭಿಷೇಕ, ಅಲಂಕಾರ, ನೂರೆಂಟು ಹಾಲರವಿ ಸೇವೆ ಹಾಗೂ ರಥೋತ್ಸವ ನಡೆಯಿತು. ಮಧ್ಯಾಹ್ನ ೧೨.೩೮ಕ್ಕೆ ರಥೋತ್ಸವಕ್ಕೆ ಕ್ಷೇತ್ರದ ಧರ್ಮದರ್ಶಿ ಡಾ.ಮಲ್ಲೇಶ್ ಗುರೂಜೀ ಚಾಲನೆ ನೀಡಿದರು. ಗರ್ಭಗುಡಿಯಲ್ಲಿರುವ ಅಮ್ಮನವರ ಮೂಲ ವಿಗ್ರಹವನ್ನು ರಥದಲ್ಲಿ ಕೂರಿಸಿ, ದೇವಸ್ಥಾನದ ಆವರಣದಲ್ಲಿ ಮೆರವಣಿಗೆ ಮಾಡಲಾಯಿತು. ಯಾವುದೇ ವಿಶೇಷ ಅತಿಥಿಯನ್ನು ಆಹ್ವಾನಿಸದೇ ಭಕ್ತರಿಂದಲೇ ಕಾರ್ಯಕ್ರಮದ ಉದ್ಘಾಟನೆ ನಡೆಸಿದ್ದು ವಿಶೇಷವಾಗಿತ್ತು.
ಹರಿದುಬಂದ ಭಕ್ತಸಾಗರ: ಆಷಾಢದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಶ್ರೀ ಕ್ಷೇತ್ರಕ್ಕೆ ಭಕ್ತಸಾಗರವೇ ಹರಿದು ಬರುತ್ತಿದ್ದು, ಭೀಮನ ಅಮಾವಾಸ್ಯೆಯಂದು ಸಹ ಲಕ್ಷಕ್ಕೂ ಹೆಚ್ಚು ಭಕ್ತರು ಆಗಿಮಿಸಿದ್ದರು. ಭಕ್ತರಿಗೆ ಯಾವುದೇ ಅನಾನುಕೂಲವಾಗದಂತೆ ಕ್ಷೇತ್ರದ ವತಿಯಿಂದ ಕ್ರಮಕೈಗೊಳ್ಳಲಾಗಿತ್ತು. ದಾಸೋಹ ಭವನ ಮಾತ್ರವಲ್ಲದೆ, ಕ್ಷೇತ್ರದ ಇತರೆಡೆಯು ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು.ಭಕ್ತರಿಗೆ ಬಾದಾಮಿ ಹಾಲು, ನೀರಿನ ವ್ಯವಸ್ಥೆ: ಮೊಟ್ಟ ಮೊದಲ ಬಾರಿಗೆ ಭೀಮನ ಅಮಾವಾಸ್ಯೆಯಂದು ಗೌಡಗೆರೆ ಕ್ಷೇತ್ರಕ್ಕೆ ಬರುವ ಸಾವಿರಾರು ಸಂಖ್ಯೆಯ ಭಕ್ತರಿಗಾಗಿ ಸರತಿ ಸಾಲಿನಲ್ಲೇ ಬಾದಾಮಿ ಹಾಲು, ಕುಡಿಯುವ ನೀರು, ಆಯಾಸ ಆಗದಂತೆ ಚಾಕ್ಲೇಟ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಗಂಟೆಗಳ ಕಾಲ ಕಾದು ತಾಯಿ ದರ್ಶನ ಪಡೆಯೋ ಭಕ್ತರಿಗಾಗಿ ದೇಗುಲದ ಆಡಳಿತ ಮಂಡಳಿ ಈ ನೂತನ ವ್ಯವಸ್ಥೆ ಮಾಡಿತ್ತು.
ಶ್ರೀ ಕ್ಷೇತ್ರದಲ್ಲಿ ಪ್ರತಿವರ್ಷವೂ ಭೀಮನ ಅಮಾವಾಸ್ಯೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಈ ವರ್ಷ ಇನ್ನಷ್ಟು ವೈಭವಯುತವಾಗಿ ಕಾರ್ಯಕ್ರಮ ನಡೆದಿದೆ. ಇದಕ್ಕೆ ಕಾರಣೀಭೂತರಾದ ಭಕ್ತಾಧಿಗಳಿಗೆ, ಆರಕ್ಷಕ ಇಲಾಖೆ, ಬೆಸ್ಕಾಂ ಇಲಾಖೆ ಹಾಗೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು.
ಪೊಟೋ೧೨ಸಿಪಿಟಿ೧: