ಹೊಸದುರ್ಗ: ತಾಲೂಕಿನ ಪ್ರಮುಖ ಹನುಮನ ಕ್ಷೇತ್ರಗಳಾದ ಸೋಮಸಂದ್ರ ಆಂಜನೇಯ ಹಾಗೂ ಬೆಲಗೂರಿನ ವೀರ ಪ್ರತಾಪ ಆಂಜನೇಯ ಸ್ವಾಮಿ ದೇಗುಲ ಸೇರಿದಂತೆ ತಾಲೂಕಿನ ಎಲ್ಲಾ ಹಳ್ಳಿ ಹಳ್ಳಿಗಳಲ್ಲೂ ಹನುಮ ಜಯಂತಿಯನ್ನು ಶುಕ್ರವಾರ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಬೆಲಗೂರು: ಇಲ್ಲಿನ ಅವಧೂತ ಸದ್ಗುರು ಬಿಂಧು ಮಾಧವ ಶರ್ಮಾ ಅವರ ಅರಾಧ್ಯ ದೈವ ವೀರ ಪ್ರತಾಪ ಆಂಜನೇಯ ದೇಗುಲದಲ್ಲಿ ಹನುಮಜಯಂತಿ ಅಂಗವಾಗಿ ವಿಶೇಷ ಹೋಮ ಹವನ ಸೇರಿದಂತೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಈ ಸಂಬಂಧ ಗುರುವಾರ ರಾತ್ರಿ ಲಕ್ಷ್ಮೀ ಕಲ್ಯಾಣೋತ್ಸವ ಹಾಗೂ ಸೀತಾ ಕಲ್ಯಾಣೋತ್ಸವ ನಡೆಸಲಾಯಿತು. ಶುಕ್ರವಾರ ಮಧ್ಯಾಹ್ನ ಸುಮಾರು 64 ಅಡಿ ಎತ್ತರದ 2 ಬೃಹತ್ ರಥಗಳಲ್ಲಿ ಲಕ್ಷ್ಮೀ ನಾರಾಯಣ ಹಾಗೂ ವೀರ ಪ್ರತಾಪ ಆಂಜನೇಯ ಸ್ವಾಮಿಯನ್ನು ಪ್ರತಿಷ್ಠಾಪಿಸಿ ನೆರೆದಿದ್ದ ಸಹಸ್ರಾರು ಭಕ್ತರು ರಥವನ್ನು ಎಳೆಯುವ ಮೂಲಕ ಭಕ್ತಿ ಸಮರ್ಪಿಸಿದರು.ಬಳಿಕ ಪಾನಕದ ಗಾಡಿ ಸೇವೆ ಸೇರಿದಂತೆ ಪಾನಕ ಪಲ್ಲಾರದ ಸೇವೆ ವಸಂತ ಸೇವೆಗಳು ನಡೆದವು. ಬೆಂಗಳೂರು ಸೇರಿದಂತೆ ರಾಜ್ಯ, ಹೊರ ರಾಜ್ಯಗಳಿಂದ ಭಕ್ತರು ಆಗಮಿಸಿದ್ದರು.
ಈ ಜಾತ್ರಾ ಮಹೋತ್ಸವದಲ್ಲಿ ಬ್ರಹ್ಮವಿದ್ಯಾನಗರದ ಭಗೀರಥ ಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಸೇರಿದಂತೆ ಬೆಂಗಳೂರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.
ಇದೇ ರೀತಿ ಶ್ರೀರಾಂಪುರದ ಕೋಟೆ ಆಂಜನೇಯ ಸ್ವಾಮಿ, ಹೊನ್ನೇನಹಳ್ಳಿಯ ಆಂಜನೇಯ ಸ್ವಾಮಿ ಹಾಗೂ ಹಳೆಕುಂದೂರು ಆಂಜನೇಯ ಸ್ವಾಮಿ ದೇಗುಲಗಳಲ್ಲೂ ರಥೋತ್ಸವ ನಡೆಸಲಾಯಿತು.