ಕಡೂರು ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕೊಠಡಿಗೆ ಭೂಮಿ ಪೂಜೆ ಕನ್ನಡಪ್ರಭ ವಾರ್ತೆ, ಕಡೂರು
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಹೆಚ್ಚುವರಿಯಾಗಿ 4 ಕೊಠಡಿಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 1.25 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.ಶುಕ್ರವಾರ ಕಡೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ 1.25 ಕೋಟಿ ರು. ಗಳಲ್ಲಿ ನೂತನ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಈಗಾಗಲೇ ಕಳೆದ ವಾರ 1.58 ಕೋಟಿ ರು.ಗಳಲ್ಲಿ ಹೆಚ್ಚುವರಿ ಕೊಠಡಿ ಕಟ್ಟಲು ಕಾಮಗಾರಿಗೆ ಚಾಲನೆ ನೀಡಿದ್ದು, ಗ್ರಾಮೀಣ ಭಾಗ ಸೇರಿದಂತೆ ಪಟ್ಟಣದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಈ ಕಾಲೇಜಿಗೆ ಮೂಲಭೂತ ಸೌಕರ್ಯ ನೀಡುವುದು ನಮ್ಮ ಕರ್ತವ್ಯ. ಕೊಠಡಿ, ಶೌಚಾಲಯ, ಕುಡಿಯುವ ನೀರು ಸೇರಿದಂತೆ ಆಧುನಿಕ ಮೂಲಭೂತ ಸವಲತ್ತು ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.ಕಾಲೇಜಿನಲ್ಲೂ ಪಾಠ ಪ್ರವಚನಗಳ ಯಾವುದೇ ವಿಭಾಗಗಳ ವಿಷಯಕ್ಕೆ ಸಂಬಂಧಿಸಿದ ಉಪನ್ಯಾಸಕರ ಕೊರತೆ ಇಲ್ಲದಂತೆ ವ್ಯವಸ್ಥೆಯನ್ನು ಕಾಲೇಜಿಗೆ ತರುವ ಮೂಲಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್, ತೋಟದ ಮನೆ ಮೋಹನ್, ಗ್ರಾಪಂ ಸದಸ್ಯ ವಸಂತ ಕುಮಾರ್, ಇಂಜಿನಿಯರ್ ಬಸವರಾಜನಾಯ್ಕ,ಪ್ರಾಚಾರ್ಯ ಡಾ.ತವರಾಜ್, ಗುತ್ತಿಗೆದಾರ ಕಂಸಾಗರ ಶೇಖರ್, ಮುಖಂಡ ಶಶಿ, ಕಾಂತರಾಜ್ ಸೇರಿದಂತೆ ಮತ್ತಿತರರು ಇದ್ದರು.16ಕೆಕೆಡಿಯು2.
ಕಡೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಶಾಸಕ ಕೆ.ಎಸ್.ಆನಂದ್ ಭೂಮಿ ಪೂಜೆ ನೆರವೇರಿಸಿದರು. ಭಂಡಾರಿ ಶ್ರೀನಿವಾಸ್,ಡಾ.ತವರಾಜ್ ಮತ್ತಿತರರು ಇದ್ದರು.