- ಎಸ್ಪಿ ನಿರ್ದೇಶನ: ಠಾಣಾಧಿಕಾರಿಗಳಿಂದ ಹಾಸ್ಟೆಲ್ ಮಕ್ಕಳೊಂದಿಗೆ ಸಮಾಲೋಚನೆ
- - -ಕನ್ನಡಪ್ರಭ ವಾರ್ತೆ ದಾವಣಗೆರೆ
ದಾವಣಗೆರೆ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ನಿರ್ದೇಶನದಂತೆ ಪೊಲೀಸ್ ಠಾಣಾಧಿಕಾರಿಗಳು ತಮ್ಮ ತಮ್ಮ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಎಸ್ಸಿ-ಎಸ್ಟಿ ವರ್ಗಗಳ ವಿದ್ಯಾರ್ಥಿಗಳ ವಸತಿ ನಿಲಯಗಳಿಗೆ ಭೇಟಿ ನೀಡಿ ಅಲ್ಲಿಯ ವಿದ್ಯಾರ್ಥಿಗಳೊಂದಿಗೆ ಕುಂದುಕೊರತೆಗಳ ಸಭೆ ನಡೆಸಿದರು.ಕುಂದುಕೊರತೆಗಳನ್ನು ಆಲಿಸಿ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಸಮಸ್ಯಗಳ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವ ಬಗ್ಗೆ ತಿಳಿಸಲಾಗಿದೆ. ಇತರೆ ಇಲಾಖೆಗಳಿಗೆ ಸಂಬಂಧಿಸಿದ ದೂರುಗಳಿಗೆ ಸಂಬಂಧಪಟ್ಟ ಇಲಾಖೆಗೆ ಪತ್ರ ವ್ಯವಹಾರ ಮೂಲಕ ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ವಿದ್ಯಾರ್ಥಿಗಳ ದೂರುಗಳಿಗೆ ಕೂಡಲೇ ಸ್ಪಂದಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದರು.
ಚನ್ನಗಿರಿ ಠಾಣೆ ಪಿಎಸ್ಐ ರೂಪ್ಲಿಬಾಯಿ ಅವರು ಸರ್ಕಾರಿ ಮೆಟ್ರಿಕ್ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಮೂಲಸೌಕರ್ಯಗಳ ಬಗ್ಗೆ ಸಮಸ್ಯೆಗಳನ್ನು ಆಲಿಸಿದರು. ಸೂಕ್ತ ಕ್ರಮ ಕೈಗೊಳ್ಳಲು ಪುರಸಭೆ ಮುಖ್ಯಾಧಿಕಾರಿ ಅವರಿಗೆ ಪತ್ರ ವ್ಯವಹಾರ ನಡೆಸಿದರು.ಬಿಳಿಚೋಡು ಪೊಲೀಸ್ ಠಾಣೆ ಅಧಿಕಾರಿಗಳು ಬಿಳಿಚೋಡಿನ ವಸತಿ ನಿಲಯ, ಜಗಳೂರು ಪೊಲೀಸ್ ಠಾಣೆಯ ಪಿಎಸ್ಐ ಆಶಾ, ನ್ಯಾಮತಿ ಪೊಲೀಸ್ ಠಾಣೆಯ ಪಿಎಸ್ಐ ಶೋಭಾರಾಣಿ, ಬಸವಾಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಇಮ್ತಿಯಾಜ್, ಹೊನ್ನಾಳಿ ಪೊಲೀಸ್ ಠಾಣೆಯ ಪಿಎಸ್ಐ ನಿರ್ಮಲ ಹಾಗೂ ಎಎಸ್ಐ ತೀರ್ಥಲಿಂಗಪ್ಪ, ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪಿಎಸ್ಐ ಜೋವಿತ್ ರಾಜ್ ಅವರು ಆವರಗೊಳ್ಳ ಗ್ರಾಮದಲ್ಲಿನ ವಿದ್ಯಾರ್ಥಿ ನಿಲಯ, ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳು, ಬಡಾವಣೆ ಪೊಲೀಸ್ ಠಾಣೆಯ ಪಿಎಸ್ಐ ಎಚ್.ಮಾಳವ್ವ, ಲತಾ ವಿ. ತಾಳೇಕರ್ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ, ಕುಂದುಕೊರತೆಗಳನ್ನು ಆಲಿಸಿ, ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
- - --9ಕೆಡಿವಿಜಿ31, 32:
ದಾವಣಗೆರೆ ಜಿಲ್ಲಾ ಎಸ್ಪಿ ಉಮಾ ಪ್ರಶಾಂತ್ ನಿರ್ದೇಶನದಂತೆ ವಿವಿಧ ತಾಲೂಕುಗಳಲ್ಲಿನ ವಸತಿ ನಿಲಯಗಳಿಗೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಪಿಎಸ್ಐಗಳು ಪರಿಶೀಲಿಸಿ ಕುಂದುಕೊರತೆಗಳನ್ನು ಆಲಿಸಿ, ಪರಿಹಾರ ಕ್ರಮ ಕೈಗೊಂಡರು.