ನವಲಗುಂದ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಜನತೆ ಸದುಪಯೋಗ ಪಡಿಸಿಕೊಳ್ಳುವ ಮೂಲಕ ಯಶಸ್ಸಿಗೆ ಕಾರಣರಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಅಡಿ 3.54,437 ಕುಟುಂಬಗಳಿಗೆ ನೇರ ಹಣ ಜಮಾ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಲ್ಲಿ 4,69,278 ಮನೆಗಳಿಗೆ ಉಚಿತ ವಿದ್ಯುತ್ ಪೂರೈಸಲಾಗಿದೆ. ಶಕ್ತಿ ಯೋಜನೆಯ ಅಡಿ 7.39 ಕೋಟಿಗೂ ಅಧಿಕ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. 3,37,117 ಕುಟುಂಬಗಳು ಅನ್ನಭಾಗ್ಯ ಯೋಜನೆಯ ಸದುಪಯೋಗ ಪಡೆದುಕೊಂಡಿವೆ. ಇನ್ನು ಕೆಲವೇ ದಿನಗಳಲ್ಲಿ ಯುವನಿಧಿ ಯೋಜನೆ ಪೂರ್ಣಪ್ರಮಾಣದಲ್ಲಿ ಆರಂಭವಾಗಲಿದೆ ಎಂದರು.
ರಾಜ್ಯ ಸರ್ಕಾರವು ಬಸವಣ್ಣವನರನ್ನು ರಾಜ್ಯದ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಿದ್ದಾರೆ. ಗ್ಯಾರಂಟಿ ಯೋಜನೆ ಸಫಲವಾಗಿರುವುದನ್ನು ಕಂಡು ಬಿಜೆಪಿಯವರಿಗೆ ಹೊಟ್ಟೆಯುರಿಯಾಗಿದ್ದು, ಹೇಗಾದರೂ ಮಾಡಿ ಸರ್ಕಾರ ಬೀಳಿಸಲು ಹುನ್ನಾರ ನಡೆಸಿದ್ದಾರೆ. ರಾಜ್ಯದ ಮತದಾರರ, ಮಹಿಳೆಯರ ಆಶೀರ್ವಾದ ಇರುವ ವರೆಗೂ ನಮ್ಮ ಸರ್ಕಾರಕ್ಕೆ ಏನೂ ಆಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಶಾಸಕ ಎನ್.ಎಚ್. ಕೋನರಡ್ಡಿ ಕ್ಷೇತ್ರದಲ್ಲಿ ಮಾದರಿ ಚಕ್ಕಡಿ ರಸ್ತೆ ನಿರ್ಮಾಣ ಮಾಡಿರುವುದು ರಾಜ್ಯದಲ್ಲಿಯೇ ವಿಭಿನ್ನ ಕಾರ್ಯಕ್ರಮ ಎಂದರು.ಅಧ್ಯಕ್ಷತೆ ವಹಿಸಿದ್ದ ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಅಂದಾಜು ₹200 ಕೋಟಿ ವೆಚ್ಚದಲ್ಲಿ 62 ಕಾಮಗಾರಿಗಳಿಗೆ ಶಂಕುಸ್ಥಾಪನೆ, ಭೂಮಿಪೂಜೆ ನೆರವೇರಿಸಲಾಗಿದೆ. ಮುಖ್ಯಮಂತ್ರಿಗಳಿಗೆ ನಾನು ಈ ಕ್ಷೇತ್ರವನ್ನು ದತ್ತು ನೀಡುವೆ. ನೀವೇ ಈ ಕ್ಷೇತ್ರವನ್ನು ಅಭಿವೃದ್ಧಿ ಮಾಡಿ ತೋರಿಸಿ ಎಂದು ಮನವಿ ಮಾಡಿದರು. ಮುಖ್ಯಮಂತ್ರಿಗೆ ನಾನು ಏನನ್ನೂ ಕೇಳುವುದಿಲ್ಲ. ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಿದರೆ ಸಾಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ. ಪಾಟೀಲ, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ, ಮಾಜಿ ಶಾಸಕ ಬಿ.ಆರ್. ಯಾವಗಲ್ಲ, ವಿಪ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ, ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಪಂ ಸಿಇಒ ಸ್ವರೂಪ ಟಿ.ಕೆ., ಎಸ್ಪಿ ಗೋಪಾಲ ಬ್ಯಾಕೋಡ್, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ತಹಸೀಲ್ದಾರ್ ಹೆಗ್ಗಣ್ಣವರ್ ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾಗನೂರ, ವಿನೋದ ಅಸೂಟಿ, ವರ್ಧಮಾನಗೌಡ ಹಿರೇಗೌಡರ, ಮಂಜುನಾಥ ಮಾಯನಾಯ್ಕರ, ಬಾಬುಗೌಡ ಪಾಟೀಲ, ಆರ್.ಎಚ್. ಕೋನರಡ್ಡಿ, ವಿಜಯಗೌಡ ಪಾಟೀಲ, ಮಾಂತೇಶ ಭೋವಿ, ಕಾಶ್ ಶಿಗ್ಲಿ ಸೇರದಂತೆ ಪುರಸಭೆ ಸದಸ್ಯರು, ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರು ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಇದ್ದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಣ್ಣಿಗೇರಿ ರಸ್ತೆಯಲ್ಲಿ 41 ಎಕರೆ 9 ಗುಂಟೆ ಪ್ರದೇಶದಲ್ಲಿ ನಿರ್ಮಾಣ ಮಾಡುತ್ತಿರುವ 1335 ವಸತಿ ನಿವೇಶನಗಳನ್ನು ಹಾಗೂ ಹಾಗೂ ಇಬ್ರಾಹಿಂಪುರ ರಸ್ತೆಯಲ್ಲಿ ಹೆದ್ದಾರಿ ಮಾದರಿಯಲ್ಲಿ ನಿರ್ಮಾಣ ಮಾಡಲಾದ ಚಕ್ಕಡಿ ರಸ್ತೆಯನ್ನು ಮುಖ್ಯಮಂತ್ರಿಗಳು ವೀಕ್ಷಿಸಿದರು. ಅಲ್ಲಿಯೇ 50 ಹೊಸ ಬಸ್ ಗಳಿಗೆ ಚಾಲನೆ ನೀಡಿದರು. ನಂತರ ರೈತರು ಹಾಗೂ ಸಾರ್ವಜನಿಕರಿಂದ ಅಹವಾಲು ಆಲಿಸಿದರು. ಕಾರ್ಯಕ್ರಮದ ಮುಖ್ಯ ವೇದಿಕೆಯಲ್ಲಿ ಸಾಂಕೇತಿಕವಾಗಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಯಿತು.
ಪಕ್ಷದಲ್ಲಿ ನಿಷ್ಠೆಯಿಂದ ಕೆಲಸ ಮಾಡುತ್ತ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ವಿಶ್ವಾಸ ಗಳಿಸಿಕೊಂಡು ಸಾವಿರಾರು ಜನರಿಗೆ ಆಶ್ರಯ ನಿವೇಶನದ ಹಕ್ಕು ಪತ್ರ ನೀಡುತ್ತಿದ್ದಾರೆ. ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಮಾಡಿರುವುದು ಸಂತಸ ತಂದಿದೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡ್ರ ಹೇಳಿದರು.