ರೋಣ: ಚುನಾವಣೆ ಪೂರ್ವದಲ್ಲಿ ನುಡಿದಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆ ಯಶಸ್ವಿಯಾಗಿದ್ದು, ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮಾ. 2ರಂದು ಬೆಳಗ್ಗೆ 11 ಗಂಟೆಗೆ ರೋಣ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ರೋಣ ಮತ್ತು ಗಜೇಂದ್ರಗಡ ತಾಲೂಕು ಫಲಾನುಭವಿಗಳ ಸಮಾವೇಶ ಜರುಗುವ ಸ್ಥಳ ಪರಿಶೀಲಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಉಚಿತ ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಅಧಿಕಾರಕ್ಕೆ ಬಂದ ಎರಡ್ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಹಿಂದಿನ ಯಾವುದೇ ಸರ್ಕಾರದ ಯಾವುದೇ ಯೋಜನೆಗಳು ಇಷ್ಟು ದೊಡ್ಡ ಪ್ರಮಾಣದಲ್ಲಿ ಯಶಸ್ಸು ಕಂಡಿಲ್ಲ. ಈ ಯೋಜನೆಗಳ ಯಶಸ್ಸು ಕಂಡು ಜವಾಬ್ದಾರಿಯುತ ಸ್ಥಾನದಲ್ಲಿರುವ ವಿರೋಧ ಪಕ್ಷದ ನಾಯಕರು ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಈ ಕ್ರಮ ಸರಿಯಲ್ಲ. ಇಂತಹ ಟೀಕೆಗಳಿಗೆ ಉತ್ತರ ಕೊಡುವ ನಿಟ್ಟಿನಲ್ಲಿಯೇ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು. ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳಕರ, ಕಾರ್ಮಿಕ ಸಚಿವ ಸಂತೋಷ ಲಾಡ್ , ರಾಜ್ಯ ಸರ್ಕಾರದ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಮಾಜಿ ಶಾಸಕ ಬಿ.ಆರ್. ಯಾವಗಲ್ಲ ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ರೋಣ ಮತ್ತು ಗಜೇಂದ್ರಗಡ ತಾಲೂಕಿನ ಎಲ್ಲಾ ಫಲಾನುಭವಿಗಳು, ಕಾರ್ಯಕರ್ತರು, ಅಭಿಮಾಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು. ಸುಮಾರು 24 ಸಾವಿರ ಜನ ಸೇರುವ ಸಾಧ್ಯತೆಯಿದೆ ಎಂದರು.