ಗ್ಯಾರಂಟಿಯಿಂದ ಆರ್ಥಿಕ ಸಾಮಾಜಿಕ ಅಭಿವೃದ್ಧಿ

KannadaprabhaNewsNetwork |  
Published : Aug 16, 2024, 12:45 AM IST
ಕಾರ್ಯಕ್ರಮದಲ್ಲಿ ಸಚಿವ ಎಚ್‌.ಕೆ.ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಗದಗ ಜಿಲ್ಲೆಯ ಭೀಷ್ಮ ಕೆರೆ ಪ್ರವಾಸಿ ತಾಣದಲ್ಲಿ ₹62 ಲಕ್ಷಗಳ ಅಂದಾಜು ವೆಚ್ಚದಲ್ಲಿ ವರ್ಗ ಎ ಮಾದರಿಯ ಪ್ರವಾಸಿ ಸ್ನೇಹಿ ಸಂಕಿರ್ಣ ನಿರ್ಮಿಸಲು ಅನುದಾನ

ಗದಗ: ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯದ ಒಂದು ಕೋಟಿಗೂ ಹೆಚ್ಚು ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಮೂಲಕ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರ ಕಾರಣೀಭೂತವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು. ಅವರು ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತದಿಂದ ಜರುಗಿದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಅಂಗವಾಗಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಶಕ್ತಿ ಯೋಜನೆಯಿಂದ ಗದಗ ಜಿಲ್ಲೆಯ 5,60,87,783 ಮಹಿಳೆಯರು ಈ ಯೋಜನೆ ಬಳಸಿಕೊಂಡು ಪ್ರಯಾಣಿಸಿದ್ದಾರೆ ಎಂದರು.

ಅನ್ನಭಾಗ್ಯ ಯೋಜನೆ ಬಡವರಿಗೆ, ಕೂಲಿಕಾರರಿಗೆ, ಶ್ರಮಿಕರಿಗೆ ವರದಾನವಾಗಿದೆ. 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿ ಬದಲಿಗೆ ನೇರ ಹಣ ವರ್ಗಾವಣೆಗೆ ಸರ್ಕಾರ ನಿರ್ಣಯಿಸಿತು. ಗದಗ ಜಿಲ್ಲೆಯೊಂದರಲ್ಲೇ ಏಪ್ರೀಲ್-2024ರಲ್ಲಿ ಜಿಲ್ಲೆಯ ನೋಂದಾಯಿತ ಅರ್ಹ ಒಟ್ಟು 2,54,144 ಅಂತ್ಯೋದಯ ಹಾಗೂ ಬಿಪಿಎಲ್ ಪಡಿತರ ಕುಟುಂಬಗಳು ಒಟ್ಟು 8,23,645 ಪಡಿತರ ಫಲಾನುಭವಿ ಸದಸ್ಯರಿಗೆ ಒಟ್ಟು ₹12 ಕೋಟಿ ನೇರವಾಗಿ ನಗದು ವರ್ಗಾವಣೆ ಮೂಲಕ ಬ್ಯಾಂಕ ಖಾತೆಗೆ ಜಮೆ ಮಾಡಲಾಗಿದೆ. ಜಿಲ್ಲೆಯಲ್ಲಿ ಜುಲೈ 2023 ರಿಂದ ಏಪ್ರೀಲ್-2024 ರ ಅಂತ್ಯದವರೆಗೆ ಪಡಿತರ ಫಲಾನುಭವಿಗಳ ಖಾತೆಗೆ ಒಟ್ಟಾರೆ ₹141.68 ಕೋಟಿಗೂ ಅಧಿಕ ನೇರವಾಗಿ ನಗದು ಹಣ ವರ್ಗಾವಣೆ ಮಾಡಲಾಗಿದೆ ಎಂದು ವಿವರಿಸಿದರು.

ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯುನಿಟ್‌ ಉಚಿತ ವಿದ್ಯುತ ಒದಗಿಸುವುದಾಗಿದೆ. ಈ ಯೋಜನೆಯಡಿ ಜಿಲ್ಲೆಯಲ್ಲಿ 2,77,478 ಗೃಹ ಬಳಕೆ ಸಂಪರ್ಕಗಳಿದ್ದು, ಜೂನ್ 2024 ತಿಂಗಳ 2,71,186 ನೋಂದಣಿಯಾಗಿದ್ದು ಉಚಿತ ವಿದ್ಯುತ ಸೌಲಭ್ಯ ಪಡೆದಿರುತ್ತಾರೆ.

ಗೃಹಲಕ್ಷ್ಮೀ ಯೋಜನೆಯು ದೇಶದಲ್ಲಿಯೇ ಅತಿ ದೊಡ್ಡ ಆರ್ಥಿಕ ಭದ್ರತಾ ಯೋಜನೆಯಾಗಿದ್ದು, ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಈ ಯೋಜನೆ ಸಹಕಾರಿಯಾಗಿದೆ. ಮನೆ ಯಜಮಾನಿಗೆ ಪ್ರತಿ ತಿಂಗಳು ₹2000 ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 2,40,396 ನೋಂದಣಿಯಾದ ಫಲಾನುಭವಿಗಳಲ್ಲಿ ಒಟ್ಟು 2,38,284 ಫಲಾನುಭವಿಗಳಿಗೆ ಡಿಬಿಟಿ (ನೇರ ನಗದು ವರ್ಗಾವಣೆ) ಮೂಲಕ ನೋಂದಾಯಿತ ಕುಟುಂಬದ ಯಜಮಾನಿಯರ ಖಾತೆಗೆ ಜಮೆ ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆ ಜಾರಿಯಾದಾಗಿನಿಂದ ಪ್ರತಿ ತಿಂಗಳು ₹45 ಕೋಟಿ ಅನುದಾನ ನೀಡಲಾಗಿದೆ ಎಂದರು.

ಯುವನಿಧಿ ಯೋಜನೆಯು ಪದವಿ ಹಾಗೂ ಡಿಪ್ಲೋಮಾ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಉದ್ಯೋಗ ಅರಿಸುವ ಯುವ ಜನರಿಗೆ ಗರಿಷ್ಠ ಎರಡು ವರ್ಷಗಳವರೆಗೆ ನಿರುದ್ಯೋಗ ಭತ್ಯೆ ಒದಗಿಸುವ ಯುವನಿಧಿ ಯೋಜನೆ ಡಿಸೆಂಬರ 2023 ರಿಂದ ಜಾರಿಯಾಗಿದೆ. ಪಂಚ ಗ್ಯಾರಂಟಿ ಯೋಜನೆಯ ಮೂಲಕ ಪ್ರತಿಯೊಂದು ಕುಟುಂಬದ ಹಣಕಾಸಿನ ಅಡಚಣೆ ನೀಗಿಸಿ ಗೌರವಯುತ ಬಾಳು ಒದಗಿಸಲು ಕ್ರಾಂತಿಕಾರಕ ಹೆಜ್ಜೆಯಿಟ್ಟು ನಮ್ಮ ರಾಜ್ಯ ಮುನ್ನುಗ್ಗುತ್ತಿದೆ ಎಂದರು.

ಗದಗ ಜಿಲ್ಲೆಯ ಭೀಷ್ಮ ಕೆರೆ ಪ್ರವಾಸಿ ತಾಣದಲ್ಲಿ ₹62 ಲಕ್ಷಗಳ ಅಂದಾಜು ವೆಚ್ಚದಲ್ಲಿ ವರ್ಗ ಎ ಮಾದರಿಯ ಪ್ರವಾಸಿ ಸ್ನೇಹಿ ಸಂಕಿರ್ಣ ನಿರ್ಮಿಸಲು ಅನುದಾನ, ಗದಗ ತಾಲೂಕಿನ ಸೂರಟೂರು ವಲಯದ ಕಪ್ಪತ್ತಗುಡ್ಡದ ಅರಣ್ಯ ಪ್ರದೇಶದಲ್ಲಿ ಅಂದಾಜು ₹ 850 ಲಕ್ಷಗಳಲ್ಲಿ ಜಂಗಲ್ ಲಾಡ್ಜಸ್ ಮತ್ತು ರೇಸಾರ್ಟ ನಿರ್ಮಿಸಲು ಭೂಮಿ ಪೂಜೆ ಮಾಡಲಾಗಿದೆ. ಗದಗದಲ್ಲಿ ತ್ರೀ ಸ್ಟಾರ್ ಹೋಟೆಲ್ ಕಾಮಗಾರಿಗೆ ₹9 ಕೋಟಿ, ನಗರದಲ್ಲಿ ಕ್ಯಾಟರಿಂಗ್, ಹಾಸ್ಪಿಟ್ಯಾಲಿಟಿ ಮತ್ತು ಹೋಟೆಲ್ ಮ್ಯಾನೇಜ್‌ಮೆಂಟ್ ಸಂಸ್ಥೆ ನಿರ್ಮಾಣಕ್ಕೆ ₹8 ಕೋಟಿ, ಮಹಾಲಿಂಗಪುರ ಗ್ರಾಮದ ಕಪ್ಪತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮ ಶಿಬಿರಕ್ಕೆ ₹7 ಕೋಟಿ, ಲಕ್ಕುಂಡಿ ಗ್ರಾಮದ 13 ದೇವಸ್ಥಾನದ ಪುನರುಜ್ಜೀವನ ಕಾಮಗಾರಿಗೆ ₹5 ಕೋಟಿ, ಬಿಂಕದಕಟ್ಟಿ ಮೃಗಾಲಯ ನೈಟ್ ಸಫಾರಿಗೆ ₹ 4 ಕೋಟಿ, ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಪುಟಾಣಿ ರೈಲು ಕಾಮಗಾರಿಗೆ ₹ 3 ಕೋಟಿ ಸೇರಿದಂತೆ ವಿವಿಧ ಒಟ್ಟು 22 ಕಾಮಗಾರಿಗಳಿಗೆ ₹ 49.35 ಕೋಟಿ ಅನುದಾನ ಮಂಜೂರಾಗಿದ್ದು ಕಾಮಗಾರಿಗಳು ವಿವಿಧ ಹಂತದ ಪ್ರಗತಿಯಲ್ಲಿವೆ ಎಂದರು.

ಈ ವೇಳೆ ವಿಪ ಸದಸ್ಯ ಎಸ್.ವಿ. ಸಂಕನೂರ, ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಪಂ ಸಿಇಒ ಭರತ್.ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡರ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ.ಎಂ. ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಂಪ್ಡ್ ಸ್ಟೋರೇಜ್: ಕೆಪಿಸಿಎಲ್ ಧೋರಣೆಗೆ ವಿರೋಧ
ರಾಜ್ಯ ಸರ್ಕಾರದಿಂದ ಜನರಿಗೆ ಸ್ವಾಭಿಮಾನಿ ಬದುಕು: ಸಚಿವ ಪ್ರಿಯಾಂಕ್ ಖರ್ಗೆ