ಕನ್ನಡಪ್ರಭ ವಾರ್ತೆ ಹಾಸನ ತಮ್ಮ ಸೇವೆ ಕಾಯಂ ಮಾಡುವಂತೆ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿರುವುದರಿಂದ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಅತಿಥಿ ಉಪನ್ಯಾಸಕರ ಸೇವೆ ಕಾಯಂ ಮಾಡುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಡೀಸಿ ಕಚೇರಿ ಎದುರು ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ನಗರದ ಸರಕಾರಿ ಕಲಾ ಕಾಲೇಜಿನ ಆವರಣದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಆರ್.ಸಿ. ರಸ್ತೆ, ಬಿ.ಎಂ. ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದಿತು. ಇದೆ ವೇಳೆ ಸಂಘಟನೆಯ ಮುಖಂಡರು ಹಾಗೂ ವಿದ್ಯಾರ್ಥಿಗಳು ಮಾಧ್ಯಮದೊಂದಿಗೆ ಮಾತನಾಡಿ, ಅತಿಥಿ ಉಪನ್ಯಾಸಕರ ಮುಷ್ಕರದಿಂದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಳೆದ ಒಂದು ವಾರದಿಂದ ತರಗತಿಗಳು ನಡೆದಿರುವುದಿಲ್ಲ, ೨೦೨೩ ಡಿಸೆಂಬರ್ ೨೭ರಿಂದ ಪರೀಕ್ಷೆ ಪ್ರಾರಂಭವಾಗುವ ಸೂಚನೆ ನೀಡಿದ್ದು, ಇದು ವಿದ್ಯಾರ್ಥಿಗಳಲ್ಲಿ ತೀವ್ರ ಕಳವಳಕ್ಕೆ ಕಾರಣವಾಗಿದೆ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದೆ ಎಂದರು ಶೀಘ್ರವೇ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಈ ಸಮಸ್ಯೆಯನ್ನು ಬಗೆಹರಿಸಿ ಅತೀ ಶೀಘ್ರವಾಗಿ ತರಗತಿಗಳನ್ನು ಪ್ರಾರಂಭಿಸಬೇಕು ಹಾಗೂ ಪರೀಕ್ಷಾ ದಿನಾಂಕವನ್ನು ಮುಂದೂಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅಗ್ರಹಿಸುತ್ತಿದೆ. ಸಮಸ್ಯೆ ಶೀಘ್ರವಾಗಿ ಬಗೆಹರಿಯಲಿಲ್ಲವೆಂದರೇ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.