ಕನ್ನಡಪ್ರಭ ವಾರ್ತೆ ತುಮಕೂರು
ಜ.1ರಿಂದ ಕರ್ತವ್ಯಕ್ಕೆ ಮರಳದಿದ್ದರೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂಬ ಸರ್ಕಾರದ ಎಚ್ಚರಿಕೆಯ ನಡುವೆಯೂ ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಸೋಮವಾರ ಪಾದಯಾತ್ರೆ ಆರಂಭಿಸಿದ್ದಾರೆ. ತುಮಕೂರಿನಿಂದ ಬೆಂಗಳೂರಿಗೆ ಮೂರು ದಿನಗಳ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಸೋಮವಾರ ತುಮಕೂರಿನ ಸಿದ್ಧಗಂಗಾ ಮಠದ ಆವರಣದಲ್ಲಿ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿಯವರು ಪಾದಯಾತ್ರೆಗೆ ಚಾಲನೆ ನೀಡಿದರು. ಸೇವೆ ಕಾಯಮಾತಿ ಹಾಗೂ ಸೇವಾ ಭದ್ರತೆ ನೀಡುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪಾದಯಾತ್ರೆ ನಡೆಸುತ್ತಿದ್ದಾರೆ.ಈ ವೇಳೆ ಮಾತನಾಡಿದ ಶ್ರೀಗಳು, ಈ ಹಿಂದೆ ಸಿದ್ದರಾಮಯ್ಯನವರು ವಿಪಕ್ಷ ನಾಯಕರಾಗಿದ್ದಾಗ ಅಂದಿನ ಬೊಮ್ಮಾಯಿ ಸರಕಾರಕ್ಕೆ ಅತಿಥಿ ಉಪನ್ಯಾಸಕರು ಹೇಗೆ ಬದುಕಬೇಕು? ಎಂದು ಪ್ರಶ್ನಿಸಿ ಖಾರವಾಗಿಯೇ ಪತ್ರ ಬರೆದಿದ್ದರು. ಈಗ ಅವರೇ ಮುಖ್ಯಮಂತ್ರಿಗಳಾಗಿದ್ದಾರೆ. ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದರು.ಸಂಘದ ರಾಜ್ಯಾಧ್ಯಕ್ಷ ಹನುಮಂತಗೌಡ ಕಲ್ಮನಿ ಮಾತನಾಡಿ, ಕಳೆದ 40ಕ್ಕೂ ಅಧಿಕ ದಿನಗಳಿಂದ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರುಗಳು ಪ್ರತಿಭಟನಾ ಧರಣಿ ನಡೆಸುತ್ತಿದ್ದೇವೆ. ಈಗ ಮಠದಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದೇವೆ. ಇಷ್ಟಾದರೂ ಸರ್ಕಾರ ಇಡುಗಂಟಿನ ನೆಪ ಹೇಳಿ ಕೇವಲ ಅತಿಥಿ ಉಪನ್ಯಾಸಕರ ಕಣ್ಣೊರೆಸುವ ತಂತ್ರ ಮಾಡುತ್ತಿದೆ ಎಂದು ಕಿಡಿಕಾರಿದರು.ಪಾದಯಾತ್ರೆ ವೇಳೆ ರಾಜೇಶ್ವರಿ ಎಂಬ ಅತಿಥಿ ಉಪನ್ಯಾಸಕಿ ಕ್ಯಾತ್ಸಂದ್ರ ಟೋಲ್ ಬಳಿ ಕುಸಿದು ಬಿದ್ದ ಘಟನೆಯೂ ನಡೆಯಿತು. ತಕ್ಷಣವೇ ಅವರಿಗೆ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಯಿತು.
ಈ ಮಧ್ಯೆ, ಪಾದಯಾತ್ರೆ ಜಾಸ್ ಟೋಲ್ ಗೇಟ್ ತಲುಪಿದ ವೇಳೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಹೋರಾಟಗಾರರನ್ನು ಭೇಟಿ ಮಾಡಿದರು. ನಿಮ್ಮ ಹೋರಾಟ ನ್ಯಾಯಯುತವಾಗಿದೆ. ನಿಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ಇಂದೇ ತರುತ್ತೇನೆ ಎಂದು ಭರವಸೆ ನೀಡಿದರು.