ಗೂಳೂರು ಮಹಾಗಣಪತಿ ವಿಸರ್ಜನಾ ಮಹೋತ್ಸವ ಅದ್ಧೂರಿ

KannadaprabhaNewsNetwork |  
Published : Dec 09, 2024, 12:48 AM IST
ಗೂಳೂರು ಗಣೇಶ | Kannada Prabha

ಸಾರಾಂಶ

ಐತಿಹಾಸಿಕ ಪ್ರಸಿದ್ಧ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಅತ್ಯಂತ ವೈಭವಯುತವಾಗಿ ನಡೆಯಿತು. ಬಲಿಪಾಢ್ಯಮಿಯಂದು ಪ್ರತಿಷ್ಠಾಪನೆಯಾಗಿ ಆರಂಭವಾದ ಗೂಳೂರು ಗಣಪನ ಪೂಜಾ ಕೈಂಕರ್ಯಗಳು ಕಾರ್ತಿಕ ಮಾಸದಲ್ಲಿ ಸಂಪೂರ್ಣಗೊಂಡು, ಸಕಲ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಗೂಳೂರು ಕೆರೆಯಲ್ಲಿ ವರ್ಣರಂಜಿತ ಸಿಡ್ಡಿಮದ್ದಿನ ಅಬ್ಬರದ ನಡುವೆ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.

ಕನ್ನಡಪ್ರಭ ವಾರ್ತೆ ತುಮಕೂರುಐತಿಹಾಸಿಕ ಪ್ರಸಿದ್ಧ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಅತ್ಯಂತ ವೈಭವಯುತವಾಗಿ ನಡೆಯಿತು. ಬಲಿಪಾಢ್ಯಮಿಯಂದು ಪ್ರತಿಷ್ಠಾಪನೆಯಾಗಿ ಆರಂಭವಾದ ಗೂಳೂರು ಗಣಪನ ಪೂಜಾ ಕೈಂಕರ್ಯಗಳು ಕಾರ್ತಿಕ ಮಾಸದಲ್ಲಿ ಸಂಪೂರ್ಣಗೊಂಡು, ಸಕಲ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಗೂಳೂರು ಕೆರೆಯಲ್ಲಿ ವರ್ಣರಂಜಿತ ಸಿಡ್ಡಿಮದ್ದಿನ ಅಬ್ಬರದ ನಡುವೆ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.

ಎರಡು ದಿನಗಳ ಕಾಲ ನಡೆದ ಗೂಳೂರು ಗಣೇಶ ಜಾತ್ರೆಯಲ್ಲಿ ನಾಡಿನ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದು ಪುನೀತರಾದರು. ಶನಿವಾರ ಸಂಜೆ 7 ಗಂಟೆಗೆ ಊರಿನ ಯಜಮಾನರ ಮನೆಯಿಂದ ನಂದಿಧ್ವಜ ಮತ್ತು ಕರಡಿ ವಾದ್ಯದೊಂದಿಗೆ ಗಣಪತಿ ದೇವಾಲಯಕ್ಕೆ ಕಳಸ ತಂದು ಮಹಾಗಣಪತಿಗೆ ಮಹಾ ಮಂಗಳಾರತಿ ನೆರವೇರಿಸಲಾಯಿತು.

ನಂತರ ಹೊನ್ನೇನಹಳ್ಳಿಗ್ರಾಮದ 18 ಕೋಮಿನ ಜನರು ಒಗ್ಗೂಡಿ ಮಹಾಗಣಪತಿಯನ್ನು ದೇವಾಲಯದಿಂದ ಹೊರತಂದು ಸರ್ವಾಲಂಕೃತ ವಾಹನದಲ್ಲಿ ಕೂರಿಸಿ ಮಧ್ಯರಾತ್ರಿವರೆಗೂ ಗ್ರಾಮದ ರಾಜಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ಭಾನುವಾರ ಮಧ್ಯಾಹ್ನದಿಂದ ಜಾನಪದ ಕಲಾತಂಡಗಳಾದ ಮಹಾಗಣಪತಿ ಉತ್ಸವವು ನಾದಸ್ವರ, ಕರಡಿ ಮಜಲು, ನಾಸಿಕ್ ಡೋಲ್, ಕೇರಳದ ಜಾನಪದ ನೃತ್ಯ, ಮಂಡದ ಕಲಾ ತಂಡದಿಂದ ಕರಡಿ ವಾದ್ಯ, ಮಹಿಳಾ, ಪುರುಷ ವೀರಗಾಸೆ ತಂಡಗಳು, ಕೀಲು ಕುದುರೆ, ನಂದಿಕೋಲು, ನವಿಲು, ಜಿರಾಫೆ, ಕವಾಡ ನೃತ್ಯ, ಹಾಸ್ಯದ ಚಾರ್ಲಿ ನೃತ್ಯ, ವೀರಭದ್ರ ದೇವರ ಕುಣಿತ, ವೀರಗಸೆ, ಡೊಳ್ಳು, ಪೂಜಾ ಕುಣಿತದ ಪ್ರದರ್ಶನದೊಂದಿಗೆ ಗೂಳೂರಿನ ಪ್ರಮುಖ ರಾಜಬೀದಿಗಳಲ್ಲಿ ಅತ್ಯಂದ ವೈಭವೋಪೇತವಾಗಿ ನಡೆಯಿತು.

ವಿಶೇಷ ಆಕರ್ಷಣೆಯಾಗಿ ಗೂಳೂರಿನ ಪಾರ್ಥಸಾರಥಿ ಅವರಿಂದ ಚಿತ್ರದುರ್ಗದ ಮದಕರಿ ನಾಯಕನ ವೇಷ ಹಾಗೂ ಕುಮಟನಾಯಕ ಅವರ ಕುಟುಂಬದಿಂದ ಪಾಳೇಗಾರರ ವೇಷದ ಪ್ರದರ್ಶನ ಸಹ ನಡೆದಿದ್ದ ನೆರೆದಿದ್ದ ಭಕ್ತಸಮೂಹದ ಗಮನ ಸೆಳೆಯಿತು.ಬೆಳಗಿನ ಜಾವ 500 ಅಡಿ ಉದ್ದದ ಜೋಗ್‌ಪಾಲ್ಸ್, ನೂರು ಬಾರಿ ಒಡೆಯುವ ಔಟ್ಸ್ ಹಾಗೂ ಪ್ಯಾರಾಚೂಟ್‌ಗಳ ಪ್ರದರ್ಶನ, 4 ಗಂಟೆಗೆ ನಡೆದ ಆಕರ್ಷಕ ವರ್ಣರಂಜಿತ ಸಿಡಿಮದ್ದಿನ ಪ್ರದರ್ಶನ ನೆರೆದಿದ್ದ ಭಕ್ತಾದಿಗಳಲ್ಲಿ ರೋಮಾಂಚನ ಉಂಟು ಮಾಡಿತು. ಗಣೇಶಮೂರ್ತಿಯ ಮೆರವಣಿಗೆ ಸಾಗಿದ ದಾರಿಯುದ್ದಕ್ಕೂ ಗ್ರಾಮದ ಜನತೆ ಮತ್ತು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳು ರಸ್ತೆಯ ಇಕ್ಕೆಲಗಳಲ್ಲಿ ಜಮಾಯಿಸಿ ವಿಘ್ನೇಶ್ವರಿಗೆ ಪೂಜೆ ಸಲ್ಲಿಸಿ ಧನ್ಯತೆ ಮೆರೆದರು.

ವೈಭವೋಪೇತ ಮೆರವಣಿಗೆಯಲ್ಲಿ ಗೂಳೂರು ಕೆರೆ ಬಳಿ ಸಾಗಿದ ಗಣೇಶಮೂರ್ತಿಯನ್ನು ಆಕರ್ಷಕ ವರ್ಣರಂಜಿತ ಸಿಡ್ಡಿಮದ್ದು ಸಿಡಿಸಿ ಸಂಭ್ರಮಿಸಿದ ನಂತರ ಭಕ್ತಾದಿಗಳ ಹರ್ಷೋದ್ಗಾರದ ನಡುವೆ ಮಹಾಗಣಪತಿ ಮೂರ್ತಿಯನ್ನು ಕೆರೆಯಲ್ಲಿ ವಿಸರ್ಜಿಸಲಾಯಿತು. ಕಳೆದ ಒಂದು ತಿಂಗಳಿನಿಂದಲೂ ಕಾರ್ತಿಕ ಮಾಸದಲ್ಲಿ ಪ್ರತಿನಿತ್ಯ ವಿಶೇಷ ಪೂಜಾ ಕೈಂಕರ್ಯದೊಂದಿಗೆ ಗಣೇಶಮೂರ್ತಿಯನ್ನು ಗ್ರಾಮಸ್ಥರು ಹಾಗೂ ನಾಡಿನ ವಿವಿಧೆಡೆಯ ಭಕ್ತರು ಆರಾಧಿಸಿ ಆಶೀರ್ವಾದ ಪಡೆದರು. ಪ್ರತಿದಿನವೂ ಪ್ರಸಾದ ವಿನಿಯೋಗ ಸಹ ನಡೆಯಿತು. ಈ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಭಕ್ತಾದಿಗಳು ಅನ್ನ ಸಂತರ್ಪಣೆ ಸಹ ಏರ್ಪಡಿಸಲಾಗಿತ್ತು. ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನಡೆಯಲು ಸಹಕರಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದು ಗೂಳೂರು ಮಹಾಗಣಪತಿ ಭಕ್ತಮಂಡಳಿಯ ಶಿವಕುಮಾರ್ ತಿಳಿಸಿದರು. ಐತಿಹಾಸಿಕ ಪ್ರಸಿದ್ದ ಗಣಪತಿಯ ವಿಸರ್ಜನಾ ಮಹೋತ್ಸವದಲ್ಲಿ ನಾಡಿನ ವಿವಿಧೆಡೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು.

PREV

Recommended Stories

ಶ್ರೀ ಶ್ರೀ ರವಿಶಂಕರ್‌ಗೆ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್‌ ಸೆಕ್ಯೂರಿಟಿ ಪ್ರಶಸ್ತಿ
ಹಾಡಹಗಲೇ ಮನೆಗೆ ನುಗ್ಗಿ ಚಹಾ ವ್ಯಾಪಾರಿಯ ಕತ್ತು ಕೊಯ್ದು ಹತ್ಯೆ