-------------
ತಾಲೂಕಿನ ಮಾಡ್ರಳ್ಳಿಯ ಶ್ರೀ ಪಟ್ಟದ ಮಠದ ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮೀಜಿಗಳವರ 50ನೇ ವರ್ಷದ ಸುವರ್ಣ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವನ್ನು ಮಾ. 26 ರಂದು ಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಠಾಧ್ಯಕ್ಷ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಪಟ್ಟಣದ ಶ್ರೀ ಗುರು ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಅವರ ವಿದ್ಯಾಸಂಸ್ಥೆಯ ಆವರಣದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.ಅಂದು ಬೆಳಗ್ಗೆ 10ಕ್ಕೆ ಆರಂಭವಾಗುವ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ತುಮಕೂರು ಸಿದ್ದಗಂಗಾ ಕ್ಷೇತ್ರದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ದೇವನೂರು ದಾಸೋಹ ಮಠದ ಶ್ರೀ ಮಹಾಂತ ಸ್ವಾಮೀಜಿ, ವಾಟಾಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಕನಕಪುರ ದೇಗುಲ ಮಠದ ಶ್ರೀ ಚನ್ನಬಸವ ಸ್ವಾಮೀಜಿ, ಶ್ರೀ ಮಲೈ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಶ್ರೀ ಗುರುಮಲ್ಲೇಶ್ವರರ ಭಾವಚಿತ್ರವನ್ನು ಬೆಟ್ಟದಪುರದ ಶ್ರೀ ಸಲೀಲಾಖ್ಯ ಮತ್ತು ಕನ್ನಡ ಮಠದ ಶ್ರೀ ಚನ್ನಬಸವ ದೇಶಿ ಕೇಂದ್ರ ಸ್ವಾಮೀಜಿ ಅನಾವರಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
ಮೈಸೂರಿನ ಕುಂದೂರು ಮಠದ ಶ್ರೀ ಶರತ್ ಚಂದ್ರ ಸ್ವಾಮೀಜಿ, ಸೋಮಹಳ್ಳಿಯ ಶ್ರೀ ಸಿದ್ದಮಲ್ಲ ಸ್ವಾಮೀಜಿ, ಗಾವಡಗೆರೆ ಮಠದ ಶ್ರೀ ನಟರಾಜ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರುಗಳು ಭಾಗವಹಿಸಲಿದ್ದಾರೆ ಎಂದು ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.
ವಿದ್ಯೋದಯ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪುಟ್ಬಬುದ್ದಿ, ಶಿವಕುಮಾರ ಸ್ವಾಮೀಜಿ, ಸೇವಾ ಟ್ರಸ್ಟ್ ಅಧ್ಯಕ್ಷ ಲಿಂಗಪ್ಪ ಮಾತನಾಡಿದರು.ಗುರು ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಅವರ ವಿದ್ಯಾಸಂಸ್ಥೆಯ ಐಟಿಐ ಕಾಲೇಜಿನ ಪ್ರಾಂಶುಪಾಲ ನಂಜುಂಡಸ್ವಾಮಿ, ಕುಮಾರ್ ಇದ್ದರು.