- ಬೆಳೆವಿಮೆ ಮಾಡಿಸಲು ರೈತರಿಗೆ ಸಚಿವ ಡಾ. ಶರಣಪ್ರಕಾಶ ಮನವಿ । ಸೂಕ್ತ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ
ರಾಜ್ಯದಲ್ಲಿ ಉಂಟಾಗಿರುವ ಮಳೆಯ ಕೊರತೆ ಹಾಗೂ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೂಚನೆಯಂತೆ ವೈದ್ಯಕೀಯ ಶಿಕ್ಷಣ, ಕೌಶಲಾಭಿವೃದ್ಧಿ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಗುರುವಾರ ಸುರಪುರ ತಾಲೂಕಿನ ರುಕ್ಮಾಪುರ ಹಾಗೂ ವಣಿಕಿಹಾಳ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಹಾನಿ ಮತ್ತು ಬರ ಪರಿಸ್ಥಿತಿ ಪರಿಶೀಲಿಸಿದರು.
ಶಾಸಕ ರಾಜಾ ವೇಣುಗೋಪಾಲ ನಾಯಕ ಹಾಗೂ ಅಧಿಕಾರಿಗಳೊಂದಿಗೆ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಚಿವರು, ಹತ್ತಿ, ಭತ್ತ, ಹೆಸರು ಸಹಿತ ವಿವಿಧ ಬೆಳೆಗಳ ಸ್ಥಿತಿಗತಿ ವೀಕ್ಷಿಸಿದರು. ಮಳೆ ಕೊರತೆಯಿಂದ ಉಂಟಾಗಿರುವ ಬೆಳೆ ಹಾನಿ, ನೀರಿನ ಸಮಸ್ಯೆ ಹಾಗೂ ರೈತರ ಸಂಕಷ್ಟದ ಕುರಿತು ಮಾಹಿತಿ ಪಡೆದು, ಅಗತ್ಯ ಪರಿಹಾರ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಬಳಿಕ ಶಾಸಕ ಕಚೇರಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಮಳೆ ಕೊರತೆಯಿಂದ ಹತ್ತಿ, ಹೆಸರು, ಉದ್ದು, ತೊಗರಿ ಹಾಗೂ ಭತ್ತ ಸೇರಿದಂತೆ ವಿವಿಧ ಬೆಳೆಗಳಿಗೆ ತೀವ್ರ ಹಾನಿಯಾಗಿದೆ. ಅದ್ದರಿಂದ ಗುರುಮಠಕಲ್, ಯಾದಗಿರಿ ಭಾಗವನ್ನು ಮಧ್ಯಂತರ ಬೆಳೆ ಹಾನಿ (ಮಿಡ್ ಸೀಸನ್ ಅಡ್ರ್ಸಿಟಿ) ಪ್ರದೇಶವೆಂದು ಘೋಷಿಸಲಾಗಿದೆ ಎಂದು ತಿಳಿಸಿದರು.
ಬರ ಘೋಷಣೆಗೆ ಸಂಬಂಧಿಸಿದಂತೆ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ಮಾರ್ಗಸೂಚಿಯಂತೆ ಗ್ರೌಂಡ್ ಟ್ರೂಥಿಂಗ್ ಸಮೀಕ್ಷೆ ನಡೆಸಲು ಕಂದಾಯ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಸಮೀಕ್ಷೆಯ ವರದಿ ಆಧರಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ನಿಯಮಾನುಸಾರ ಬರ ಘೋಷಣೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಯಾದಗಿರಿಯ ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಪೃಥ್ವಿಕ್ ಶಂಕರ್, ಜಿ.ಪಂ. ಸಿಇಓ ಲವೀಶ ಒರಡಿಯಾ, ತಹಸೀಲ್ದಾರ್ ಎಚ್.ಎ. ಸರಕಾವಸ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೇಂದ್ರನಾಥ್ ಸೂಗೂರು, ಸಹಾಯಕ ನಿರ್ದೇಶಕ ರಾಮನಗೌಡ ಮಾಲಿ ಪಾಟೀಲ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ, ಡಿವೈಎಸ್ಪಿ ಜಾವೀದ್ ಇನಾಮದಾರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಮಾಲೀಪಾಟೀಲ್ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.
ಕಲ್ಯಾಣ ಕರ್ನಾಟಕಕ್ಕೆ ಸರ್ಕಾರದ ಆದ್ಯತೆ
----ಫೋಟೊ---
ಸುರಪುರ ತಾಲೂಕಿನ ರುಕ್ಮಾಪುರ ಹಾಗೂ ವಣಿಕಿಹಾಳ ಗ್ರಾಮಗಳಲ್ಲಿ ಬರಪೀಡಿತ ಬೆಳೆಗಳ ಸ್ಥಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಪರಿಶೀಲಿಸಿದರು. ಶಾಸಕ ರಾಜಾ ವೇಣುಗೋಪಾಲ ನಾಯಕ, ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೇಂದ್ರನಾಥ ಸೂಗೂರು, ಸಹಾಯಕ ನಿರ್ದೇಶಕ ರಾಮನಗೌಡ ಮಾಲಿ ಪಾಟೀಲ, ತಹಸೀಲ್ದಾರ್ ಎಚ್.ಎ.ಸರಕಾವಸ್, ಅಧಿಕಾರಿಗಳು ಉಪಸ್ಥಿತರಿದ್ದರು.