ಮೂಡುಬಿದಿರೆ: ಜೀರ್ಣೋದ್ಧಾರ ಹಂತದಲ್ಲಿರುವ ಸುಮಾರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಗುರುಪುರ ಶ್ರೀ ಜಂಗಮ ಸಂಸ್ಥಾನ ಮಠಕ್ಕೆ ಕರ್ನಾಟಕ ರಾಜ್ಯ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.ಈ ವೇಳೆ ಶ್ರೀ ಜಂಗಮ ಮಠದ ಶ್ರೀ ನೀಲಕಂಠೇಶ್ವರ ದೇವರಿಗೆ ಪೂಜೆ ಸಲ್ಲಿಸಿದ ಸಚಿವರನ್ನು ಮಠದ ಶ್ರೀ ರುದ್ರಮುನಿ ಮಹಾಸ್ವಾಮಿ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಶಾಲು ಹೊದಿಸಿ ಸನ್ಮಾನಿಸಿದರು. ಬಳಿಕ ಶ್ರೀ ನೀಲಕಂಠೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ನೆರವು ಕೋರಿ ಮನವಿ ಸಲ್ಲಿಸಲಾಯಿತು.
ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿರುವ ಈಶ್ವರ ಖಂಡ್ರೆ ಅವರು, ಮಠದ ಇತಿಹಾಸ ಹಾಗೂ ಮಠಕ್ಕಿರುವ ಆಸ್ತಿ-ಪಾಸ್ತಿಗಳ ಕುರಿತು ಶ್ರೀ ರುದ್ರಮುನಿ ಮಹಾಸ್ವಾಮಿ ಮತ್ತು ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಬಳಿಕ ಮಾತನಾಡಿದ ಅವರು, ಶ್ರೀ ಜಂಗಮ ಸಂಸ್ಥಾನ ಮಠದ ಶ್ರೀ ನೀಲಕಂಠೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಸರ್ಕಾರ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ನೆರವು ದೊರಕಿಸುವಲ್ಲಿ ಸಹಕರಿಸುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಉಪಾಧ್ಯಕ್ಷೆ ರಾಜೇಶ್ವರಿ ಎನ್., ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಚಿನ್ ಅಡಪ ಗುರುಪುರ, ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ನಿವೃತ್ತ ಪೊಲೀಸ್ ಅಧಿಕಾರಿ ಮೋಹನ್ ಕೊಟ್ಟಾರಿ ಗುರುಪುರ, ನಿವೃತ್ತ ಅರಣ್ಯಾಧಿಕಾರಿ ಶೀನ ಕೊಟ್ಟಾರಿ ಗುರುಪುರ ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.