ಕನ್ನಡಪ್ರಭ ವಾರ್ತೆ ಕನಕಪುರ
ನಗರದ ದೇಗುಲ ಮಠದ ಸಮುದಾಯ ಭವನದಲ್ಲಿ ದೇಗುಲ ಮಠದ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಗುರುವಂದನೆ ಮತ್ತು ಹಿರಿಯ ವಿದ್ಯಾರ್ಥಿಗಳ ಸಮಾವೇಶದ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಗೆ ಗುರುವಂದನೆ ಗೌರವ ಸಲ್ಲಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಗುರುವಂದನೆ ಸ್ವೀಕರಿಸಿ ಮಾತನಾಡಿ, ನಮ್ಮ ದೇಗುಲ ಮಠದ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ಹಿರಿಯ ವಿದ್ಯಾರ್ಥಿಗಳು ಒಂದು ಸಮಾವೇಶವನ್ನು ಆಯೋಜಿಸಿ ಒಂದೆಡೆ ಸೇರಿರುವುದು ನನಗೆ ತುಂಬಾ ಖುಷಿ ಕೊಟ್ಟಿದೆ. ನಮ್ಮ ಸಂಸ್ಥೆಯಲ್ಲಿ ಓದಿದ ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕು ರೂಪಿಸಿಕೊಂಡಿದ್ದಾರೆ. ಅವರೆಲ್ಲರಿಗೂ ದೇವರು ಒಳಿತು ಮಾಡಲಿ ಎಂದು ಶುಭ ಹಾರೈಸಿದರು.ಶ್ರೀ ಮಠದ ಹಿರಿಯ ಶ್ರೀ ಚನ್ನಬಸವ ಮಹಾಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಮಠದ ದೊಡ್ಡ ಶಕ್ತಿಯಾಗಿದ್ದು, ಮಠದ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಮಹಾಲಿಂಗಸ್ವಾಮೀಜಿಯ ಕಾಲದಿಂದಲೂ ನಡೆಸಿಕೊಂಡು ಬರುತ್ತಿರುವುದು ಹೆಮ್ಮೆಯ ವಿಷಯವಾಗಿದೆ, ಕಾರ್ಯಕ್ರಮಕ್ಕೆ ಆಗಮಿಸಿರುವ ಮಠದ ಎಲ್ಲಾ ವಿದ್ಯಾರ್ಥಿಗಳಿಗೆ, ಹಿತೈಷಿಗಳಿಗೆ,ಭಕ್ತಾಧಿಗಳಿಗೆ ಹರಗುರು ಚರಮೂರ್ತಿಗಳು ಆಶೀರ್ವದಿಸಲಿ, ಹಿರಿಯ ಶ್ರೀಗಳಾದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಗೆ ಗುರುವಂದನೆ ಸಲ್ಲಿಸುತ್ತಿರುವುದು ನಮ್ಮ ಸೌಭಾಗ್ಯ ಎಂದರು.
ಮಠದ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಕುಮಾರಸ್ವಾಮಿ ಮಾತನಾಡಿದರು.
ಮಠದ ಹಿರಿಯ ವಿದ್ಯಾರ್ಥಿಗಳು, ಹಿತೈಷಿಗಳು ಹಾಗೂ ಭಕ್ತರು ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು, ಬೆಳ್ಳಿ ರಕ್ತನಿಧಿ ಕೇಂದ್ರದ ಸಹಕಾರದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು, ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿಧ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.